
ಮಡಿಕೇರಿ ಅ.11 NEWS DESK : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯ ಅಧಿಕಾರಿ ಹುದ್ದೆಗೆ ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘ ಪೊನ್ನಂಪೇಟೆಯಲ್ಲಿ ಪ್ರತಿಭಟನೆ ನಡೆಸಿತು. ಕರ್ನಾಟಕ ಅರಣ್ಯಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರ ಸಂಘದ ಅಧ್ಯಕ್ಷ ಅಕ್ಷಯ್ ಕುಮಾರ್ ನೇತೃತ್ವದಲ್ಲಿ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಿಂದ ಮೆರವಣಿಗೆ ಮೂಲಕ ಹೊರಟ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿದರಲ್ಲದೇ ಅಣಕು ಚಿತ್ರ ಪ್ರದರ್ಶಿಸಿ ಅಸಮಾಧಾನ ವ್ಯಕ್ತಪಡಿಸಿದರು. ನಂತರ ಪೊನ್ನಂಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಆಗಮಿಸಿದ ಸಂಘದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಕಚೇರಿ ಮುಂದೆ ಧರಣಿ ನಡೆಸಿ ಬೇಡಿಕೆಯ ಮನವಿ ಪತ್ರವನ್ನು ತಹಶೀಲ್ದಾರರ ಮೂಲಕ ಸರ್ಕಾರಕ್ಕೆ ಸಲ್ಲಿಸಿದರು.
ಉಪವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಅರಣ್ಯ ಶಾಸ್ತ್ರ ಪದವೀಧರರನ್ನೆ ನೇರ ನೇಮಕಾತಿ ಮಾಡುವುದರ ಮೂಲಕ ಅರಣ್ಯಶಾಸ್ತ್ರದಲ್ಲಿ ವಿಶೇಷ ಪರಿಣಿತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಲು ಸರ್ಕಾರವನ್ನು ಆಗ್ರಹಿಸಿದರು. ಅರಣ್ಯ ಪದವೀಧರರ ವಿದ್ಯಾರ್ಥಿಗಳ ವೃತ್ತಿ ಜೀವನದ ಹಿತದೃಷ್ಟಿಯಿಂದ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಲ್ಲಿ ಬಿಎಸ್ಸಿ (ಅರಣ್ಯಶಾಸ್ತ್ರ) ಪದವೀಧರರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.
ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳು ಮತ್ತು ಪದವೀಧರರ ಸಂಘದ ಉಪಾಧ್ಯಕ್ಷ ಸುದೀಪ್ ಸಿರಿ ಗೌಡ, ಕಾರ್ಯದರ್ಶಿ ಅಂಕಿತ್ ದೇವರಾಯ, ಎ.ಜಿ.ವಿಕಾಸ್, ಜಂಟಿ ಕಾರ್ಯದರ್ಶಿಗಳಾದ ಎಸ್.ಎಂ.ರಾಘವೇಂದ್ರ, ಕಿಶನ್ ಗೌಡ, ಖಜಾಂಚಿ ಎಂ.ಯಶಸ್ಸು, ಡಿ.ಎಂ.ಮಂಜುನಾಥ್, ಸಂಚಾಲಕರಾದ ಅನುಷ, ಆಕಾಶ್ ಪೂಜಾರಿ ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.









