
ಮಡಿಕೇರಿ ಅ.13 NEWS DESK : ಪೊನ್ನಂಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಲೈನ್ ಮನೆಗಳಲ್ಲಿ ವಾಸವಿರುವ ಭೂರಹಿತ ಪರಿಶಿಷ್ಟ ಕುಟುಂಬಗಳಿಗೆ ‘ಸೂರು’ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ವಿಭಾಗೀಯ ಸಂಚಾಲಕ ಎನ್.ವೀರಭದ್ರಯ್ಯ ಅವರು, ಈಗಾಗಲೇ ಪರಿಶಿಷ್ಟರಿಗೆ ವಿತರಿಸಲೆಂದು ಕಾಯ್ದಿರಿಸಿದ ಸರಕಾರಿ ಜಾಗಗಳಲ್ಲಿ ಟೆಂಟ್ಗಳನ್ನು ನಿರ್ಮಿಸಿಕೊಂಡು ಸಂಕಷ್ಟದ ಬದುಕು ಸವೆಸುತ್ತಿರುವ ಪರಿಶಿಷ್ಟ ಕುಟುಂಬಗಳಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು. ಇದಕ್ಕೆ ಬದಲಾಗಿ ಅವರನ್ನು ಸ್ಥಳದಿಂದ ಒಕ್ಕಲೆಬ್ಬಿಸುವ ಪ್ರಯತ್ನ ನಡೆಯುತ್ತಿದೆ. ಇದನ್ನು ಮುಂದುವರಿಸಿದಲ್ಲಿ ಸಂಘಟನೆಯ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಸತಿ ನಿವೇಶನಗಳಿಲ್ಲದ 6 ಸಾವಿರಕ್ಕೂ ಹೆಚ್ಚಿನ ಪರಿಶಿಷ್ಟ ಮಂದಿ ಇದ್ದು, ಸದರಿ ಫಲಾನುಭವಿಗಳಿಗೆ ವಿತರಿಸಲು ಲಭ್ಯವಿರುವ ಜಾಗವನ್ನು ನಿವೇಶನಗಳನ್ನಾಗಿ ಪರಿವರ್ತಿಸಿ ವಿತರಿಸಬೇಕು. ಈ ರೀತಿಯ ಕ್ರಮ ಕೈಗೊಳ್ಳದೆ ಅಲ್ಲಿ ಟೆಂಟ್ ನಿರ್ಮಿಸಿಕೊಂಡು ಬದುಕುತ್ತಿರುವ ಬಡವರನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ನಿವೇಶನ ರಹಿತರಿಗೆ ಅನ್ಯಾಯವಾಗುತ್ತಿರುವುದರಿಂದ ಪೊನ್ನಂಪೇಟೆ ತಾಲ್ಲೂಕಿಗೆ ಸಂಬಂಧಿಸಿದ ಐಟಿಡಿಪಿ ಅಧಿಕಾರಿ ಹಾಗೂ ತಹಶೀಲ್ದಾರ್ ಅವರನ್ನು ತಕ್ಷಣ ವರ್ಗಾಯಿಸಬೇಕೆಂದು ಆಗ್ರಹಿಸಿದರು. ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ಅವರು ಮಾತನಾಡಿ, ಕಳೆದ ವಿಧಾನಸಭಾ ಚುಣಾವಣೆಯಲ್ಲಿ ದಲಿತ ಸಂಘರ್ಷ ಸಮಿತಿಯ ಬೆಂಬಲದಿಂದ ಜಿಲ್ಲೆಯಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಆಯ್ಕೆಯಾಗಿದ್ದಾರೆ. ಅಧಿಕಾರ ಬಂದ ಬಳಿಕ ಇವರು ದಲಿತ ಸಂಘರ್ಷ ಸಮಿತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ, ನಿಗಮ, ಮಂಡಳಿಗಳ ಆಯ್ಕೆಯ ಸಂದರ್ಭವು ನಮ್ಮನ್ನು ಪರಿಗಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ಜಿಲ್ಲಾ ಪಂಚಾಯ್ತಿ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ದಸಂಸ ಬೆಂಬಲವಿಲ್ಲದೆ ಕಾಂಗ್ರೆಸ್ ಗೆದ್ದು ತೋರಿಸಲಿ ಎಂದು ಸವಾಲೆಸೆದರು. ಪೊನ್ನಂಪೇಟೆ ತಾಲ್ಲೂಕು ಸಂಚಾಲಕ ಹೆಚ್.ಆರ್.ಜಗದೀಶ್ ಅವರು ಮಾತನಾಡಿ, ಪೊನ್ನಂಪೇಟೆ ತಾಲ್ಲೂಕಿನ ಕುರ್ಚಿ ಗ್ರಾಮದಲ್ಲಿರುವ 5 ಏಕರೆ ಸರಕಾರಿ ಜಾಗದಲ್ಲಿ ಸುಮಾರು 97 ಬಡ ಕುಟುಂಬಗಳು ಗುಡಿಸಲು ಕಟ್ಟಿ ವಾಸಿಸುತ್ತಿದ್ದಾರೆ. ಗುಂಡತ್ಕೊಲ್ಲಿಯಲ್ಲಿ 20 ಕಟುಂಬಗಳು ಕಳೆದ ಮೂರು ನಾಲ್ಕು ದಶಕಗಳಿಂದ ವಾಸವಿದ್ದಾರೆ. ಈ ಕುಟುಂಬಗಳಿಗೆ ನಿವೇಶನ ಒದಗಿಸುವುದಕ್ಕೆ ಬದಲಾಗಿ, ಅವರನ್ನು ತೆರವುಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸ್ಥಳಕ್ಕೆ ಸಂಬಂಧಿಸಿದಂತೆ ಇರುವ ಸಂಶಯಗಳ ನಿವಾರಣೆಗೆ ಸರ್ವೇ ನಡೆದಿದೆ. ಆದರೆ, ಈ ಮಾಹಿತಿಯನ್ನು ಕಂದಾಯ ಅಧಿಕಾರಿಗಳು ನೀಡುತ್ತಿಲ್ಲವೆಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಹೆಚ್.ಕೆ.ಗಣೇಶ್, ಸದಸ್ಯರಾದ ವೈ.ಕೆ.ರವಿ ಹಾಗೂ ಪಿ.ಕೆ.ಮಣಿ ಉಪಸ್ಥಿತರಿದ್ದರು.









