
ವಿರಾಜಪೇಟೆ ಅ.17 NEWS DESK : ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ವಿರಾಜಪೇಟೆ ಪುರಸಭೆಯ ಅಧ್ಯಕ್ಷರಾದ ಎಂ.ಕೆ.ದೇಚಮ್ಮ ಕಾಳಪ್ಪ ಅಭಿಪ್ರಾಯಪಟ್ಟರು. ಕೊಡಗು ಜಿಲ್ಲಾ ಹೋಟೆಲ್ ಹಾಗೂ ರೆಸಾರ್ಟ್ ಅಸೋಸಿಯೇಷನ್ ವತಿಯಿಂದ ಸ್ವಚ್ಛ ಕೊಡಗು ಸುಂದರ ಕೊಡಗು ಎಂಬ ಪರಿಕಲ್ಪನೆಯಲ್ಲಿ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕ, ವಿರಾಜಪೇಟೆ ಪುರಸಭೆ ಹಾಗೂ ವಿರಾಜಪೇಟೆ ತಾಲೋಕು, ನಗರ ವರ್ತಕರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸ್ವಚ್ಛತೆ ಎಂಬುದು ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಬೇಕು. ಈಗಾಗಲೇ ವಿರಾಜಪೇಟೆ ಪುರಸಭೆ ವತಿಯಿಂದ ಸ್ವಚ್ಛ ನಗರಕ್ಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಆ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ ಎಂದರು. ಸ್ವಚ್ಛತಾ ಜಾಗೃತಿಯಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದೆ ಎಂದರು. ವಿರಾಜಪೇಟೆ ನಗರ ವರ್ತಕರ ಸಂಘದ ಅಧ್ಯಕ್ಷರಾದ ಪಿ.ಎ.ಮಂಜುನಾಥ್ ಮಾತನಾಡಿ, ಸ್ವಚ್ಛ ಪರಿಸರ ಸುಂದರ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರು ಪಣ ತೊಡಬೇಕು. ನಮ್ಮ ಮನೆಗಳಿಂದಲೇ ಸ್ವಚ್ಛತೆಯು ಆರಂಭವಾಗಬೇಕು. ಆಗ ಮಾತ್ರ ನಮ್ಮ ಪರಿಸರವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಹೇಳಿದರು. ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳು ಹಾಗೂ ವ್ಯವಸ್ಥಾಪಕರಾದ ರೆ. ಫಾ. ಜೇಮ್ಸ್ ಡೊಮಿನಿಕ್ ಮಾತನಾಡಿ, ಪರಿಸರದ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಾತ್ರವಲ್ಲದೆ ಮುಂದಿನ ಪೀಳಿಗೆಗೆ ನಾವು ಪರಿಸರವನ್ನು ಬಳುವಳಿಯಾಗಿ ನೀಡಬೇಕಾಗಿದೆ. ಸಾಮಾಜಿಕ ಪ್ರಜ್ಞೆ ಎಂಬುದು ಪ್ರತಿಯೊಬ್ಬರಲ್ಲೂ ಮೂಡಬೇಕು. ಅದು ಮೂಡಿದಾಗ ಮಾತ್ರ ಸ್ವಚ್ಛ ಪರಿಸರ ನಿರ್ಮಾಣದ ಕಲ್ಪನೆ ಸಾಕಾರವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ವಿರಾಜಪೇಟೆಯ ಪುರಸಭಾ ಸದಸ್ಯರಾದ ಡಿ.ಪಿ.ರಾಜೇಶ್ ಪದ್ಮನಾಭ, ಮಹಮದ್ ರಾಫಿ, ಮತೀನ್, ವಿರಾಜಪೇಟೆ ಸಂತ ಅನ್ನಮ್ಮ ಚರ್ಚ್ ನ ಸಹಾಯಕ ಗುರುಗಳಾದ ಫಾ. ಅಭಿಲಾಷ್, ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಅಧಿಕಾರಿ ಬಿ. ಎನ್. ಶಾಂತಿಭೂಷಣ್, ವಿರಾಜಪೇಟೆ ವರ್ತಕರ ಸಂಘದ ಅಧ್ಯಕ್ಷ ಪಿ. ಎ. ಮಂಜುನಾಥ್, ಸಮಾಜ ಸೇವಕರಾದ ಯೋಗೇಶ್ ನಾಯ್ಡು, ಉಪನ್ಯಾಸಕರುಗಳಾದ ಜೇಮ್ಸ್ ಅಂಟೋನಿ, ವಿಲೀನ ಗೋನ್ಸಾಲ್ವೇಸ್, ಶಶಿಕಲಾ ಹಾಗೂ ಆದಿತ್ಯ, ವಿರಾಜಪೇಟೆ ವರ್ತಕರ ಸಂಘದ ಪದಾಧಿಕಾರಿಗಳು, ಸ್ವಯಂ ಸೇವಾ ವಿದ್ಯಾರ್ಥಿಗಳು, ವಿರಾಜಪೇಟೆ ವರ್ತಕರ ಸಂಘದ ಪದಾಧಿಕಾರಿಗಳು, ಸೆಂಟ್ ಆನ್ಸ್ ಪದವಿ ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮ ಹಾಜರಿದ್ದರು. ನಂತರ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಕಾಲೇಜಿನ ಮುಂಭಾಗದ ಮುಖ್ಯ ರಸ್ತೆಯಿಂದ ಚಿಕ್ಕಪೇಟೆ -ಬೋಯಿಕೇರಿ ಹಾಗೂ ಕೆದಮುಳ್ಳೂರು ರಸ್ತೆಯವರೆಗೂ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಮಾಡಿದರು. ರಸ್ತೆಯ ಎರಡು ಭಾಗಗಳಲ್ಲಿ ಅಲ್ಲಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಪೇಪರ್, ಬಾಟಲಿಗಳನ್ನು ಹೆಕ್ಕಿ ವಿರಾಜಪೇಟೆ ಪುರಸಭೆಯ ತ್ಯಾಜ್ಯ ವಿಲೇವಾರಿ ವಾಹನಕ್ಕೆ ಹಾಕಿದರು. ಅಲ್ಲದೆ ಸಾರ್ವಜನಿಕರಿಗೆ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು.









