
ಮಡಿಕೇರಿ, ಅ.18 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಛೇರಿ, ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಡಿಕೇರಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳು, ಎನ್.ಎಸ್.ಎಸ್.ಘಟಕದ ಸಹಯೋಗದೊಂದಿಗೆ “ನಮ್ಮ ನಡೆ ಹಸಿರೆಡೆಗೆ”: “ಗೋ ಗ್ರೀನ್ ಅಭಿಯಾನ”: 2025 ದಡಿ ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ-2025*ಅಂಗವಾಗಿ *ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆ ಕುರಿತು ಜಿಲ್ಲಾಮಟ್ಟದ ಜಾಗೃತಿ ಅಭಿಯಾನ ಏರ್ಪಡಿಸಲಾಗಿತ್ತು. ಹಣತೆ(ಮಣ್ಣಿನ ದೀಪ) ಬೆಳಗಿಸಿ ಹಸಿರು ದೀಪಾವಳಿ ಆಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯೂ ಮಾತನಾಡಿ, ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ‘ಪ್ರತಿಯೊಬ್ಬರೂ
ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ತ್ಯಜಿಸಿ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವ ಮೂಲಕ ಮಾಲಿನ್ಯ ತಡೆಗಟ್ಟಿ ಪರಿಸರ ಸಂರಕ್ಷಣೆಗೆ ವಿಶೇಷ ಒತ್ತು ನೀಡಬೇಕು’ ಎಂದರು. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಸರ್ಕಾರ ಹಸಿರು ಪಟಾಕಿಗಳನ್ನು ಮಾತ್ರ ಬಳಸಲು ಸರ್ಕಾರ ಆದೇಶಿಸಲಾಗಿದೆ ಪಟಾಕಿ ಸಿಡಿಸುವುದರಿಂದ ಉಂಟಾಗುವ ಮಾಲಿನ್ಯ ಮತ್ತು ದುಷ್ಪರಿಣಾಮಗಳ ಕುರಿತು ಬೆಳಕು ಚೆಲ್ಲಿ ಸ್ವಚ್ಛ ,ಸ್ವಸ್ಥ ಹಾಗೂ ಹಸಿರು ದೀಪಾವಳಿ ಆಚರಿಸುವ ಮೂಲಕ ಜನರಿಗೆ ಪರಿಸರ ಜಾಗೃತಿ ಮೂಡಿಸಬೇಕು ಎಂದು ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕೊಡಗಿನಲ್ಲಿ ಕಳೆದ 15 ವರ್ಷಗಳಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆಯ ಮಹತ್ವದ ಕುರಿತು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸಮುದಾಯದಲ್ಲಿ ಜಾಗೃತಿ ಮೂಡಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಪಟಾಕಿಗಳನ್ನು ಸಿಡಿಸುತ್ತಿರುವುದು ಕ್ಷೀಣಿಸುತ್ತಿರುವುದು ಕಂಡುಬಂದಿರುವುದು ಉತ್ತಮ ಬೆಳವಣಿಗೆಯಾಗಿದೆ. ಈ ಪರಿಸರ ಜಾಗೃತಿ ಆಂದೋಲನದ ಯಶಸ್ವಿಗೆ ತಮ್ಮನ್ನು ತೊಡಗಿಸಿಕೊಂಡಿರುವ ಪರಿಸರ ಸಂಘಟಕ ಟಿ.ಜಿ.ಪ್ರೇಮಕುಮಾರ್ ಮತ್ತು ತಂಡದವರು, ಪರಿಸರ ಅಧಿಕಾರಿಗಳು ಸ್ಕೌಟ್ಸ್, ಗೈಡ್ಸ್ ಸ್ವಯಂ ಸೇವಕರ ಸೇವಾ ಕಾರ್ಯವು ಪ್ರಶಂಸನೀಯವಾದುದು ಎಂದು ಬೇಬಿಮ್ಯಾಥ್ಯೂ ಹೇಳಿದರು. ಪಟಾಕಿ ಸಿಡಿತದಿಂದ ಉಂಟಾಗುವ ಅನಾಹುತಗಳು ಹಾಗೂ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಸಂಚಾಲಕರೂ ಆದ ಜಿಲ್ಲಾ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಮಾಲಿನ್ಯಕಾರಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮತ್ತು ಜಲ ಮಾಲಿನ್ಯ ಹಾಗೂ ನೆಲ ಮಾಲಿನ್ಯದ ಜತೆಗೆ ಪ್ರಾಣಿ-ಪಕ್ಷಿ ಜೀವ ಸಂಕುಲಗಳು ಸೇರಿದಂತೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಿ ಪರಿಸರ ವ್ಯವಸ್ಥೆಗೂ ತೀವ್ರ ಧಕ್ಕೆಯುಂಟಾಗುತ್ತದೆ. ಆದ್ದರಿಂದ, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ತ್ಯಜಿಸಿ ಮಾಲಿನ್ಯ ತಡೆಗಟ್ಟುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಕುರಿತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಈ ಜಾಗೃತಿ ಅಭಿಯಾನವು ವಾಯು ಮಾಲಿನ್ಯ ಮತ್ತು ಶಬ್ದ ಮಾಲಿನ್ಯವನ್ನು ತಗ್ಗಿಸಿ. ಪಟಾಕಿ ಸಿಡಿತದಿಂದ ಸಂಭವಿಸುವ ಅವಘಡಗಳನ್ನು ತಡೆಗಟ್ಟಲು ಸಾಧ್ಯವಾಗುತ್ತದೆ ಎಂದರು. ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಜಿಲ್ಲಾ ಪರಿಸರ ಅಧಿಕಾರಿ ಎಂ.ಜಿ.ರಘುರಾಮ್ ಮಾತನಾಡಿ, ಪರಿಸರಕ್ಕೆ ಹಾನಿಯನ್ನುಂಟು ಮಾಡುವ ಪಟಾಕಿಗಳನ್ನು ಸಿಡಿಸದೇ ತ್ಯಜಿಸುವ ಮೂಲಕ ಹಸಿರು ದೀಪಾವಳಿ ಆಚರಣೆ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶದಿಂದ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ರಾಷ್ಟ್ರೀಯ ಹಸಿರು ಪ್ರಾಧಿಕಾರದ ಆದೇಶದಂತೆ ಕಡ್ಡಾಯವಾಗಿ ಹಸಿರು ಪಟಾಕಿಗಳನ್ನೇ ಬಳಸಬೇಕು. ಹಸಿರು ಪಟಾಕಿಗಳ ಮೇಲೆ ವಿಶೇಷ ಚಿಹ್ನೆ ಮತ್ತು ಕ್ಯೂಆರ್ ಕೋಡ್ ಇರುತ್ತದೆ. ರಾತ್ರಿ 8 ರಿಂದ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ. ಹಸಿರು ಪಟಾಕಿ ಬದಲಿಗೆ ಮಾಲಿನ್ಯಕಾರಿ ಪಟಾಕಿಗಳನ್ನು ಮಾರಾಟ ಮಾಡಿದ್ದಲ್ಲಿ ಅಂತಹವರ ವಿರುದ್ಧ ಸರ್ಕಾರವು ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ಹಸಿರು ದೀಪಾವಳಿ ಆಚರಣೆ ಕುರಿತ ಮಾಹಿತಿಯುಳ್ಳ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಪಿ.ಕೆ.ವೆಂಕಟೇಶ್ ಪ್ರಸನ್ನ, ದೀಪಾವಳಿ ಹಬ್ಬದ ಸಂದರ್ಭ ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಹಣತೆ ಬೆಳಗಿಸುವ ಕುರಿತು ವಿದ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು. ಎಲ್ಲಾ ಸಂಘ- ಸಂಸ್ಥೆಗಳು ಸೇರಿ ಇಂತಹ ಪರಿಸರ ಸ್ನೇಹಿ ಚಟುವಟಿಕೆಗಳ ಮೂಲಕ ಜನರಲ್ಲಿ ಪರಿಸರದ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದರು. ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಹಸಿರು ದೀಪಾವಳಿ ಆಚರಣೆ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವಿದ್ಯಾರ್ಥಿಗಳು
ಹಸಿರು ದೀಪಾವಳಿ ಆಚರಿಸಲಾಗುವುದು ಎಂದು ಪ್ರತಿಜ್ಞೆ ಸ್ವೀಕರಿಸಿದರು. ಕಾಲೇಜಿನ ಎನ್.ಎಸ್.ಎಸ್.ಅಧಿಕಾರಿ ಟಿ.ಎಂ. ಸುಧಾಕರ್, ಸ್ಕೌಟ್ಸ್ ರೋವರ್ಸ್ ನ ಲೀಡರ್ ನವೀನ್ ಕುಮಾರ್, ಮಂಡಳಿಯ ಯೋಜನಾ ಸಹಾಯಕ ಆಸ್ಟಿನ್, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ರೇಂಜರ್ಸ್ ಮತ್ತು ರೋವರ್ಸ್ ಸ್ವಯಂ ಸೇವಕರು ಹಾಗೂ ವಿದ್ಯಾರ್ಥಿಗಳು ಇದ್ದರು. :: ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ:: ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿ ಸಿಡಿಸುವುದನ್ನು ಬಿಟ್ಟು ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಿಸುವುದಾಗಿ ಕಾಲೇಜು ವಿದ್ಯಾರ್ಥಿಗಳು ಪ್ರತಿಜ್ಞೆ ಸ್ವೀಕರಿಸಿದರು. :: ವಿದ್ಯಾರ್ಥಿಗಳಿಂದ ಪ್ರತಿಜ್ಞಾ ವಿಧಿ ಸ್ವೀಕಾರ:: ವಿದ್ಯಾರ್ಥಿಗಳು ಈ ಆಂದೋಲನದಲ್ಲಿ ವಿದ್ಯಾರ್ಥಿಗಳು ‘ಹಣತೆ ಬೆಳಗಿಸೋಣ, ಪಟಾಕಿ ತ್ಯಜಿಸೋಣ’, ಪಟಾಕಿ ತ್ಯಜಿಸೋಣ -ಪರಿಸರ ಉಳಿಸೋಣ ಬನ್ನಿ’, ಮಾಲಿನ್ಯಕಾರಿ ಪಟಾಕಿ ತ್ಯಜಿಸಿ, ಹಸಿರು ದೀಪಾವಳಿ ಆಚರಿಸಿ,
‘ಹಣತೆ ಹಚ್ಚೋಣ ಬನ್ನಿ, ಪರಿಸರಸ್ನೇಹಿ ದೀಪಾವಳಿ ಆಚರಿಸೋಣ ಬನ್ನಿ’ ಎಂಬಿತ್ಯಾದಿ ಪರಿಸರ ಸ್ನೇಹಿ ದೀಪಾವಳಿ ಆಚರಣೆ ಕುರಿತು ವಿವಿಧ ಘೋಷಣೆಗಳನ್ನು ಪ್ರಚುರಪಡಿಸುವ ಮೂಲಕ ನಾಗರಿಕರ ಗಮನ ಸೆಳೆದರು.









