
ಮಡಿಕೇರಿ ಅ.24 NEWS DESK : ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಹಳೇ ವಿದ್ಯಾರ್ಥಿಗಳ ಸಂಘದ ವಾರ್ಷಿಕ ಮಹಾಸಭೆ ಹಾಗೂ ಸಂತೋಷ ಕೂಟ ನ.16 ರಂದು ನಡೆಯಲಿದೆ. ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದರೊಂದಿಗೆ ಸದಸ್ಯತ್ವವನ್ನು ಕೂಡ ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಮನವಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಂಸ್ಥೆ ದೇವಾಲಯವಿದ್ದಂತೆ, ಪ್ರತಿಯೊಬ್ಬರಿಗೆ ತಾವು ಓದಿದ ಶಿಕ್ಷಣ ಸಂಸ್ಥೆಯ ಮೇಲೆ ಅಭಿಮಾನವಿರಬೇಕು. ವಿದ್ಯಾರ್ಥಿಗಳು ದೇಶದ ಮುಂದಿನ ಭವಿಷ್ಯವಾಗಿದ್ದು, ಉತ್ತಮ ಶಿಕ್ಷಣ, ಅವಕಾಶ ಮತ್ತು ಮಾರ್ಗದರ್ಶನ ದೊರೆತಾಗ ಯುವ ಸಮೂಹದಿಂದ ದೇಶದ ಪ್ರಗತಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತದೆ. ಆದ್ದರಿಂದ ಕಾರ್ಯಪ್ಪ ಕಾಲೇಜ್ ನಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸದಸ್ಯತ್ವ ಪಡೆಯುವ ಮೂಲಕ ಕಾಲೇಜ್ ನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕೈಜೋಡಿಸುವಂತೆ ಕೋರಿದರು. ಹಳೇ ವಿದ್ಯಾರ್ಥಿಗಳ ಸಂಘದ ನೂತನ ಆಡಳಿತ ಮಂಡಳಿ ಸದಸ್ಯತ್ವವವನ್ನು ಹೆಚ್ಚಿಸುವ ಸಲುವಾಗಿ ಸದಸ್ಯತ್ವ ಅಭಿಯಾನವನ್ನು ನಡೆಸುತ್ತಿದೆ. ಕಳೆದ ಒಂದು ವರ್ಷದಲ್ಲಿ 100ಕ್ಕೂ ಅಧಿಕ ಮಂದಿ ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ. ಹಳೇ ವಿದ್ಯಾರ್ಥಿಗಳು ಹಳೇ ವಿದ್ಯಾರ್ಥಿ ಸಂಘದ ಬ್ಯಾಂಕ್ ಖಾತೆಯ ಕ್ಯೂ ಆರ್ ಕೋಡ್ ಅಥವಾ ಬ್ಯಾಂಕ್ ಖಾತೆಗೆ ನೇರ ಹಣವನ್ನು ಜಮಾ ಮಾಡಿ ಅದರ ರಶೀದಿ ಅಥವಾ ಸ್ಕ್ರೀನ್ ಶಾಟ್ ಅನ್ನು ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು 8762632314 ಅಥವಾ ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ 8123083869 ಇವರ ವಾಟ್ಸ್ ಆಪ್ ಸಂಖ್ಯೆಗೆ ಕಳುಹಿಸಿ ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ. ನ.16 ರಂದು ನಡೆಯುವ ಕಾರ್ಯಕ್ರಮಕ್ಕೆ ಆಗಮಿಸಿ ಸ್ಥಳದಲ್ಲೇ ಖುದ್ದು ಸದಸ್ಯತ್ವ ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು. 1949ರಲ್ಲಿ ಪ್ರಾರಂಭವಾದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ವಜ್ರ ಮಹೋತ್ಸವದ ಸವಿನೆನಪಿನಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಕಾಲೇಜಿನ ಹಳೆ ವಿದ್ಯಾರ್ಥಿ ಸಂಘ, ಪೋಷಕರು, ಶಿಕ್ಷಕರ ಸಂಘ, ಮಡಿಕೇರಿಯ ಕ್ರಿಯೇಟಿವ್ ಖಲೀಲ್ ಹಾಗೂ ಆಲ್ಫಾ ಟೆಕ್ನಾಲಜೀಸ್ ನ ಹೆಂಟ್ರಿಕ್ ಮಾರ್ಟಿನ್ ಜಿ. ಅವರ ಸಹಯೋಗದಲ್ಲಿ ಕಾಲೇಜ್ ನ ಆವರಣದಲ್ಲಿ ಬಿಲ್ ಬೋರ್ಡ್ ಹಾಗೂ ಸೆಲ್ಫಿ ಪಾಯಿಂಟ್ ಅನ್ನು ಉದ್ಘಾಟಿಸಲಾಗಿದೆ. ಡಿಜಿಟಲ್ ಲೈಬ್ರರಿ, ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪೂರಕವಾಗಿ ರೂ.24,700 ಮೌಲ್ಯದ ಕ್ರೀಡಾ ಉಪಕರಣಗಳನ್ನು ಖರೀದಿಸಿ ನೀಡಲಾಗಿದೆ. ಪತ್ರಿಕೋದ್ಯಮದ ವಿದ್ಯಾರ್ಥಿಗಳಿಗೆ “ಛಾಯಾಚಿತ್ರ ಪತ್ರಿಕೋದ್ಯಮದ ವ್ಯಾಪ್ತಿ ಮತ್ತು ಉದ್ಯೋಗಾವಕಾಶ” ಕುರಿತು ಉಪನ್ಯಾಸ ಕಾರ್ಯಕ್ರಮ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕುರಿತ ಕಾರ್ಯಾಗಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಲು ನಿರ್ಧರಿಸಲಾಗಿದೆ. ದಾನಿಗಳು ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗುತ್ತದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದರು. FMKMC HALEVIDYARTHI SANGHA, Canara Bank west branch Madikeri, A. No: 1654101007803, IFSC code: CNRB0001654
ನಲ್ಲಿ ರೂ.1,000 ಹಣ ಪಾವತಿಸಿ ಸದಸ್ಯತ್ವ ಪಡೆಯಬಹುದು ಎಂದರು. ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಮಾತನಾಡಿ, ನ.16 ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕೊಡಗು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಅಶೋಕ ಎಸ್.ಆಲೂರ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಪಾಲ್ಗೊಳ್ಳಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಪ್ರೊ.ಮೇಜರ್ ರಾಘವ ಬಿ., ಪ್ರೊ.ತಿಪ್ಪೇಸ್ವಾಮಿ ಈ, ಪ್ರೊ.ಗಾಯತ್ರಿ ದೇವಿ ಎ., ಪ್ರೊ.ಶ್ರೀಧರ್ ಹೆಗ್ಗಡೆ, ಪ್ರೊ.ನಾಗರಾಜು ಕೆ.ಪಿ., ಪ್ರೊ.ಕೃಷ್ಣ ಎಂ.ಪಿ, ಪ್ರೊ.ವಿಜಯಲತಾ ಸಿ, ಪ್ರೊ.ರಾಜೇಂದ್ರ ಆರ್, ಪ್ರೊ.ನಯನ ಕಶ್ಯಪ್, ವಿಜ್ಞಾನಿ ಡಾ. ಜೆ.ಜಿ.ಮಂಜುನಾಥ ಕಾಲೇಜಿಗೆ ಅತೀ ಹೆಚ್ಚು ಅಂಕ ಪಡೆದ ಮೋನಿಶಾ ರೈ (ಬಿಎಸ್ಸಿ), ಕೆ.ಎಂ.ಬ್ರೈಟನ್ ಮ್ಯಾಥ್ಯೂ (ಎಂ.ಎ ಇಂಗ್ಲೀಷ್), ಸಹನಾ ಸಿ.ಕೆ (ಎಂ.ಎ ಕೊಡವ) ಕ್ರೀಡಾ ಸಾಧಕರಾದ ಮೊಹಮ್ಮದ್ ಶಾಹಿಲ್, ಗಡೇಲಾ ಗಾಯತ್ರಿ, ಎಂ.ಡಿ.ಕಾವ್ಯಶ್ರೀ, ಸೀಮಾ ಆನಂದ್ ಪವರ್, ಎನ್ಸಿಸಿ ಸಾಧಕರಾದ ಎಂ.ಆರ್.ಹೇಮಂತ್ ಸೇರಿದಂತೆ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಗುವುದು. ಕಾಲೇಜ್ ನ ಹಳೇ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಚಂದನ್ ಮನವಿ ಮಾಡಿದರು. ಫೀ.ಮಾ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲರು ಹಾಗೂ ಸಂಘದ ಗೌರವಾಧ್ಯಕ್ಷ ಪ್ರೊ.ಮೇಜರ್ ಬಿ.ರಾಘವ ಅವರು ಮಾತನಾಡಿ, 75 ಸಂವತ್ಸರವನ್ನು ಪೂರೈಸಿರುವ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಕೊಡಗಿನ ಸಾಕಷ್ಟು ವಿದ್ಯಾರ್ಥಿಗಳು ಶ್ರಮಿಸಿದ್ದಾರೆ. ಹಳೇ ವಿದ್ಯಾರ್ಥಿ ಸಂಘ ಪ್ರತಿಯೊಂದು ವಿಚಾರದಲ್ಲಿ ಆಸಕ್ತಿ ವಹಿಸಿ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಕಾಲೇಜ್ ನ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಿ ಭವಿಷ್ಯದ ಪ್ರಜೆಗಳನ್ನು ರೂಪಿಸುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಅಲ್ಲದೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಇತ್ತೀಚೆಗೆ ಕೊಡಗು ವಿಶ್ವವಿದ್ಯಾಲಯದ ಅಧೀನ ಕಾಲೇಜು ಆಗಿ ಮಾರ್ಪಟ್ಟಿದ್ದು, ವಿಶ್ವವಿದ್ಯಾಲಯ ಕೈಗೊಳ್ಳುವ ಅಭಿವೃದ್ಧಿ ಕಾರ್ಯಕ್ಕೂ ಬೆಂಬಲ ನೀಡುತ್ತಿದೆ ಎಂದರು. ಕಾಲೇಜ್ ನಲ್ಲಿ ವ್ಯಾಸಾಂಗ ಮಾಡಿದ ಹಲವು ವಿದ್ಯಾರ್ಥಿಗಳು ದೇಶದ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಸದಸ್ಯತ್ವ ಪಡೆಯುವಂತೆ ಮನವಿ ಮಾಡಿದರು. ಸಂಘದ ಉಪಾಧ್ಯಕ್ಷ ಬೊಟ್ಟಂಗಡ ಗಣಪತಿ ಅವರು ಮಾತನಾಡಿ, ಹಳೇ ವಿದ್ಯಾರ್ಥಿ ಸಂಘ ಅನೇಕ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನದ ಕುರಿತು ಕಾರ್ಯಾಗಾರ ನಡೆಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದು ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಕೈಜೋಡಿಸಿದರೆ ಅಭಿವೃದ್ಧಿ ಕಾರ್ಯಗಳು ಸುಲಲಿತವಾಗಿ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಸಂಘದ ನಿರ್ದೇಶಕರಾದ ಜಗದೀಶ್ ಸಬ್ಬಂಡ್ರ ಹಾಗೂ ಎಸ್.ಆರ್.ವತ್ಸಲ ಉಪಸ್ಥಿತರಿದ್ದರು.









