
ಮಡಿಕೇರಿ ನ.17 NEWS DESK : ಇದೇ ನ.21 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಾಗೂ ನ.22 ರಂದು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತು ಕಾರ್ಯಾಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಅಧಿಕಾರಿಗಳು ಅಂಕಿ ಅಂಶಗಳ ಸಹಿತ ನಿಖರ ಮಾಹಿತಿ ಒದಗಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಾವೇಶ ಪೂರ್ವಸಿದ್ಧತೆ ಸಂಬಂಧ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳನ್ನು ಸರ್ಕಾರ ಜಾರಿಗೊಳಿಸಿದ್ದು, ಈ ಕಾರ್ಯಕ್ರಮಗಳು ಸರ್ಕಾರದ ಮಹತ್ವಾಕಾಂಕ್ಷೆ ಆಗಿದೆ. ಈ ಸಂಬಂಧ ಅಂಕಿ ಅಂಶಗಳ ಸಹಿತ ಮಾಹಿತಿ ಒದಗಿಸಬೇಕು. ಅಂಕಿ ಅಂಶಗಳು ತಾಳೆಯಾಗುವಂತೆ ಇರಬೇಕು ಎಂದು ಧರ್ಮಜ ಉತ್ತಪ್ಪ ಸೂಚಿಸಿದರು. ಜಿಲ್ಲೆಯ ಕೆಲವು ಕಡೆಗಳಲ್ಲಿ ಬಡವರಿಗೆ ಎಪಿಎಲ್ ಕಾರ್ಡ್ ದೊರೆತಿದ್ದು, ಇದನ್ನು ಸರಿಪಡಿಸಿ ಬಿಪಿಎಲ್ ಕಾರ್ಡ್ ನೀಡುವ ಸಂಬಂಧ ಈಗಾಗಲೇ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯುವಂತಾಗಬೇಕು. ಕಡು ಬಡವರಿಗೆ ಬಿಪಿಎಲ್ ಕಾರ್ಡ್ ದೊರೆಯಬೇಕು ಎಂದು ಅವರು ತಿಳಿಸಿದರು. ಕೊಡಗು ಜಿಲ್ಲೆ ಮಲೆನಾಡು ಭಾಗವಾಗಿರುವುದರಿಂದ ಹೆಚ್ಚಿನ ಮಳೆಯಿಂದಾಗಿ ಬಡ ಕುಟುಂಬಗಳು ಬೈಕ್ ಇಟ್ಟುಕೊಂಡಿರುತ್ತಾರೆ. ಅಂತಹ ಕುಟುಂಬಗಳಿಗೂ ಸಹ ಎಪಿಎಲ್ ಕಾರ್ಡ್ ನೀಡಲಾಗಿದೆ. ಈ ರೀತಿ ಆದರೆ ಕಡು ಬಡವರು ಬದುಕುವುದಾದರೂ ಹೇಗೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರು ಪ್ರಶ್ನಿಸಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ಕಾರ್ಯಾಗಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಗ್ಯಾರಂಟಿ ಯೋಜನೆಯ ರಾಜ್ಯಾಧ್ಯಕ್ಷರು, ಉಪಾಧ್ಯಕ್ಷರು ಸೇರಿದಂತೆ ಹೀಗೆ ಹಲವರು ಪಾಲ್ಗೊಳ್ಳಲಿದ್ದು, ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳನ್ನು ಆಹ್ವಾನಿಸಬೇಕು ಎಂದು ಅವರು ಸಲಹೆ ನೀಡಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಕೆಡಿಪಿ ಸಭೆಗೆ ಪಂಚ ಗ್ಯಾರಂಟಿ ಯೋಜನಾ ಅನುಷ್ಠಾನ ಅಧಿಕಾರಿಗಳು ನಿಖರ ಮಾಹಿತಿ ಒದಗಿಸುವುದರ ಜೊತೆಗೆ ಕಾರ್ಯಾಗಾರದ ದಿನದಂದು ಪಂಚ ಗ್ಯಾರಂಟಿ ಯೋಜನಾ ಇಲಾಖೆಗಳು ವಸ್ತು ಪ್ರದರ್ಶನದ ‘ಮಾಹಿತಿ ಮಳಿಗೆ’ ನಿರ್ಮಾಣಕ್ಕೆ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದರು. ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ ಇತ್ತೀಚಿನ ಅಂಕಿ ಅಂಶ ಸಹಿತ ಮಾಹಿತಿಯನ್ನು ಒದಗಿಸುವಂತೆ ನಿರ್ದೇಶನ ನೀಡಿದರು. ಗ್ಯಾರಂಟಿ ಯೋಜನೆ ಉಪಾಧ್ಯಕ್ಷರಾದ ಕೆ.ಸಿ.ಭೀಮಯ್ಯ, ನಾಸೀರ್, ಪಿ.ಆರ್.ಪಂಕಜ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಮತ್ತಿತರ ಸಂಬಂಧ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಗಮನ ಸೆಳೆದರು. ಸದಸ್ಯರಾದ ಬಿ.ಒ.ಅಣ್ಣಯ್ಯ, ಸುಂದರ, ಕೆ.ಎಂ.ಬಶೀರ್, ಧನ್ಯ, ಕೆ.ಜಿ.ಫೀಟರ್, ಮಂದ್ರಿರ ಮೋಹನ್ ದಾಸ್, ಇತರರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ, ಬಸ್ಗಳ ಸಂಚಾರ, ಗೃಹಲಕ್ಷ್ಮಿ ಯೋಜನೆ ಪ್ರಗತಿ ಸಂಬಂಧ ಗಮನ ಸೆಳೆದರು. ಗೃಹಜ್ಯೋತಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಸೆಸ್ಕ್ ಇಇ ರಾಮಚಂದ್ರ ಅವರು ಜಿಲ್ಲೆಯಲ್ಲಿ ಅಕ್ಟೋಬರ್ ವರೆಗೆ 1,99,423 ಅರ್ಜಿಗಳು ನೋಂದಣಿಯಾಗಿದ್ದು, ಶೇ.99.17 ರಷ್ಟು ಪ್ರಗತಿ ಸಾಧಿಸಲಾಗಿದೆ. ಸುಮಾರು 735.67 ಲಕ್ಷ ಸಹಾಯಧನ ಕಲ್ಪಿಸಲಾಗಿದೆ ಎಂದು ತಿಳಿಸಿದರು. ಸುಮಾರು 156 ಸ್ಥಾವರಗಳಲ್ಲಿ ಆಧಾರ್ ಸಂಖ್ಯೆ ಸರಿ ಹೊಂದದೆ ಇರುವ ಹಿನ್ನೆಲೆ ಗೃಹಜ್ಯೋತಿ ಯೋಜನೆ ನೋಂದಣಿ ಮಾಡಲು ಸಾಧ್ಯವಾಗಿಲ್ಲ ಎಂದು ಅವರು ಮಾಹಿತಿ ನೀಡಿದರು. ಗೃಹಲಕ್ಷ್ಮಿ ಯೋಜನೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಅವರು ಜಿಲ್ಲೆಯಲ್ಲಿ 1,22,323 ಗುರಿ ಹೊಂದಲಾಗಿದ್ದು,(ಪಡಿತರ ಚೀಟಿ ಆಧಾರದ ಮೇಲೆ) ನಿಗಧಿಪಡಿಸಲಾಗಿದ್ದು, ಇದರಲ್ಲಿ 1,20,872 ಮಂದಿ ನೋಂದಣಿಯಾಗಿ ಶೇ.98.81 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಅವರು ಹೇಳಿದರು. ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಈರಸಪ್ಪ ಅವರು 2023 ರ ಜೂನ್, 11 ರಂದು ಶಕ್ತಿ ಯೋಜನೆ ಆರಂಭವಾಗಿದ್ದು, ಇಲ್ಲಿಯವರೆಗೆ 1.35 ಕೋಟಿಗೂ ಹೆಚ್ಚು ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 3,21,814 ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಸಾರಿಗೆ ಸಂಸ್ಥೆ ವಾಹನದಲ್ಲಿ ಪ್ರಯಾಣಿಸಿದ್ದು, ಶಕ್ತಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಸರಾಸರಿ ಪ್ರತೀ ದಿನ 15,921 ಪ್ರಯಾಣಿಕರು ಪ್ರಯಾಣಿಸಿದ್ದಾರೆ ಎಂದು ಹೇಳಿದರು. ಯುವನಿಧಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಮಂಜುನಾಥ್ ಅವರು ಇದುವರೆಗೆ ಅಕ್ಟೋಬರ್ ಅಂತ್ಯದವರೆಗೆ 1563 ಪದವೀಧರರು ಮತ್ತು 22 ಡಿಪ್ಲೋಮಾ ಪದವೀಧರರು ಒಟ್ಟು 1585 ಮಂದಿ ಯುವನಿಧಿ ಯೋಜನೆಯಡಿ ಹೆಸರು ನೋಂದಾಯಿಸಿದ್ದು, ಫಲಾನುಭವಿಗಳಿಗೆ ಡಿಬಿಟಿ ಮೂಲಕ ಅಕ್ಟೋಬರ್ ಅಂತ್ಯದವರೆಗೆ 391.65 ಲಕ್ಷ ರೂ. ಪಾವತಿಯಾಗಿದೆ ಎಂದು ವಿವರಿಸಿದರು.









