
ಮಡಿಕೇರಿ ಡಿ.2 NEWS DESK : ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ವಿಪ್ರ ಬಾಂಧವರಿಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದ ‘ವಿಪ್ರ ಕ್ರೀಡೋತ್ಸವ’ವನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ರಾಮಚಂದ್ರ ಮೂಗೂರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿಪ್ರ ಬಾಂಧವರಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಸೌಹಾರ್ದಯುತವಾಗಿ ಬೆರೆಯಲು ಇದೊಂದು ಸದವಕಾಶವಾಗಿದ್ದು, ವಿಪ್ರ ಬಾಂಧವರು ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಪ್ರ ಕ್ರೀಡೋತ್ಸವವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಮಾತನಾಡಿ, ಡಿ.7ರಂದು ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಹಾಗೂ ಟೇಬಲ್ ಟೆನ್ನಿಸ್ ಸ್ಪರ್ಧೆಗಳು ಬೆಳಗ್ಗೆ 9 ಗಂಟೆಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣ(ಮ್ಯಾನ್ಸ್ ಕಾಂಪೌಂಡ್)ದÀಲ್ಲಿ ವಿವಿಧ ವಿಭಾಗಗಳಲ್ಲಿ ನಡೆಯಲಿದೆ ಎಂದು ತಿಳಿಸಿದರು. ಪುರುಷರ ವಿಭಾಗ ಹಾಗೂ ಮಹಿಳೆಯರ ವಿಭಾಗದಲ್ಲಿ ಸಿಂಗಲ್ಸ್ ಹಾಗೂ ಡಬಲ್ಸ್, 50 ವರ್ಷ ಮೇಲ್ಪಟ್ಟವರ ವಿಭಾಗ, ಬಾಲಕ-ಬಾಲಕಿಯರ ವಿಭಾಗದಲ್ಲಿ ಪಂದ್ಯಾವಳಿ ನಡೆಯಲಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವವರು ಅದೇ ದಿನ ಬೆಳಗ್ಗೆ 9 ಗಂಟೆಗೆ ಸ್ಥಳದಲ್ಲೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶವನ್ನು ಮಾಡಿಕೊಡಲಾಗಿದೆಯೆಂದು ಹೇಳಿದರು. ವಿರಾಜಪೇಟೆಯಲ್ಲಿ ಡಿ.14 ರಂದು ಕ್ರಿಕೆಟ್-ಡಿ.14ರಂದು ಜಿಲ್ಲೆಯ ವಿಪ್ರ ಬಾಂಧವರಿಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಆರಂಭಗೊಳ್ಳಲಿದ್ದು, ತಂಡಗಳು ಡಿ.5ರ ಒಳಗೆ ಹೆಸರು ನೋಂದಾಯಿಸಿಕೊಳ್ಳುವಂತೆ ಮಾಹಿತಿ ನೀಡಿ, ಇಲ್ಲಿಯವರೆಗೆ 9 ತಂಡಗಳು ನೋಂದಾಯಿಸಿಕೊಂಡಿರುವುದಾಗಿ ಮಾಹಿತಿ ನೀಡಿದರು. ಪಂದ್ಯಾವಳಿಯ ನಡುವೆ ಸಭಾ ಕಾರ್ಯಕ್ರಮ ನಡೆಯಲಿದ್ದು, ವಿಪ್ರ ಸಮಾಜದ ಗಣ್ಯರು ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಮೈದಾನದ ಮತ್ತೊಂದು ಭಾಗದಲ್ಲಿ ಜಿಲ್ಲಾ ಮಟ್ಟದ ಹಗ್ಗ-ಜಗ್ಗಾಟ ಸ್ಪರ್ಧೆಯು ಸಹ ನಡೆಯಲಿದೆ. ಪುರುಷ ಹಾಗೂ ಮಹಿಳಾ ವಿಭಾಗದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು. ಅಲ್ಲದೇ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ವಿವಿಧ ಕ್ರೀಡೋತ್ಸವದ ಅಂಗವಾಗಿ ತಾಲ್ಲೂಕು ಮಟ್ಟದ ಕ್ರೀಡೆಗಳು ನಡೆಯಲಿದ್ದು, ಇದರಲ್ಲಿ ಒಳಾಂಗಣ ಕ್ರೀಡೆಗಳಾದ ಚೆಸ್ ಮತ್ತು ಕೇರಂ ಹಾಗೂ ಇನ್ನಿತರ ಮನೋರಂಜನಾ ಕ್ರೀಡೆಗಳು ನಡೆಯಲಿದೆ. ಚೆಸ್ ಹಾಗೂ ಕೇರಂನಲ್ಲಿ ವಿಜೇತರಾಗುವ ತಾಲ್ಲೂಕು ಮಟ್ಟದ ಸ್ಪರ್ಧಿಗಳು ಜನವರಿಯಲ್ಲಿ ಮಡಿಕೇರಿಯಲ್ಲಿ ನಡೆಯುವ ಜಿಲ್ಲಾ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆಯುತ್ತಾರೆ ಎಂದರು. :: ಸಾಧಕರಿಗೆ ಸನ್ಮಾನ :: ಅದೇ ದಿನ ಜಿಲ್ಲೆಯ ವಿಪ್ರ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಲು ಉದ್ದೇಶಿಸಲಾಗಿದೆ. ಕ್ರೀಡೋತ್ಸವದಲ್ಲಿ ವಿಜೇತರಾಗುವ ಎಲ್ಲಾ ಸ್ಪರ್ಧಿಗಳಗೆ ಅದೇ ದಿನ ನಡೆಯುವ ಸಮಾರೋಪ ಸಮಾರಂಭದಲ್ಲಿ ಆಕರ್ಷಕ ಬಹುಮಾನಗಳನ್ನು ನೀಡಲಾಗುವುದು ಎಂದು ಬಿ.ಕೆ.ಜಗದೀಶ್ ಹೇಳಿದರು. :: ಡಿ.21 ರಂದು ಮಡಿಕೇರಿ ತಾಲ್ಲೂಕು ಮಟ್ಟದ ಸ್ಪರ್ಧೆ :: ಇದೇ ಡಿ.21 ರಂದು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ವಿಪ್ರಬಾಂಧವರಿಗಾಗಿ ಚೆಸ್ ಮತ್ತು ಕೇರಂ ಪಂದ್ಯಾವಳಿ ನಡೆಯಲಿದೆಯೆಂದು ಮಾಹಿತಿಯನ್ನಿತ್ತರು. ಸುದ್ದಿಗೋಷ್ಠಿಯಲ್ಲಿ ನಿಧಿಯ ಉಪಾಧ್ಯಕ್ಷ ಭರತೇಶ್ ಕಂಡಿಗೆ, ನಿರ್ದೇಶಕರಾದ ಎಂ.ಎನ್.ಶಾಮಲ ಹಾಗೂ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.









