
ಮಡಿಕೇರಿ NEWS DESK ಡಿ.7 : ಸರ್ವರಲ್ಲೂ ಹಿತವನ್ನು ಬಯಸುವ ವಿಪ್ರ ಸಮಾಜವು ತನ್ನ ಪಾರಂಪರಿಕವಾದ ಪೂಜಾ ಕಾರ್ಯಗಳಿಗಷ್ಟೆ ಸೀಮಿತವಾಗದೆ ಸಮಾಜದ ಎಲ್ಲಾ ಕ್ಷೇತ್ರಗಳಲ್ಲು ತಮ್ಮನ್ನು ತೊಡಗಿಸಿಕೊಳ್ಳಬೇಕೆಂದು ಹಿರಿಯ ಪತ್ರಕರ್ತ ಬಿ.ಜಿ.ಅನಂತಶಯನ ಕರೆ ನೀಡಿದ್ದಾರೆ. ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ವತಿಯಿಂದ ತಾಲ್ಲೂಕು ಸಂಘಗಳ ಸಹಯೋಗದೊಂದಿಗೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ವಿಪ್ರ ಬಾಂಧವರಿಗಾಗಿ ನಡೆದ ‘ವಿಪ್ರ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ವರಲ್ಲೂ ಒಳಿತನ್ನು ಬಯಸುವ ಬ್ರಾಹ್ಮಣ ಸಮೂಹದ ಸರ್ವರೂ ಒಂದಾಗಿ, ಸಂಘಟಿತರಾಗುವ ಅವಶ್ಯಕತೆ ಇದೆ. ಇದಕ್ಕೆ ಸಮಾಜದ ಎಲ್ಲರ ಸಹಕಾರ ಅತ್ಯವಶ್ಯವೆಂದು ಅಭಿಪ್ರಾಯಿಸಿದ ಅವರು, ಈ ನಿಟ್ಟಿನಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಸದಸ್ಯತ್ವವನ್ನು ಸಮಾಜದ ಪ್ರತಿಯೊಬ್ಬರು ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ಕೊಡಗು ಜಿಲ್ಲಾ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷರಾದ ರಾಮಚಂದ್ರ ಮೂಗೂರು ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲಾ ವ್ಯಾಪ್ತಿಯಲ್ಲಿರುವ ಬ್ರಾಹ್ಮಣ ಸಮಾಜ ಬಾಂಧವರನ್ನು ಒಂದಾಗಿ ಬೆಸೆಯುವ ಮತ್ತು ಯುವ ಸಮೂಹದಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಉತ್ತೇಜಿಸುವ ನಿಟ್ಟಿನಲ್ಲಿ ನಿಧಿಯ ವತಿಯಿಂದ 4ನೇ ವರ್ಷದ ವಿಪ್ರ ಕ್ರೀಡೋತ್ಸವವನ್ನು ಆಯೋಜಿಸಲಾಗುತ್ತಿದೆಯೆಂದು ತಿಳಿಸಿದರು. ಸಮಾಜ ಬಾಂಧವರಿಗಾಗಿ ಆಯೋಜಿಸುವ ಇಂತಹ ಕ್ರೀಡಾಕೂಟಗಳಲ್ಲಿ ಜಿಲ್ಲೆಯ ಬ್ರಾಹ್ಮಣ ಸಮೂಹ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸ್ಪಂದಿಸಬೇಕು. ಇಂತಹ ಕ್ರೀಡಾಕೂಟಗಳು ಸಮಾಜದ ಸಂಘಟನೆಗೆ ಸಹಕಾರಿಯಾಗುತ್ತದೆ ಎಂದರು.
*ಡಿ.14 ರಂದು ಕ್ರಿಕೆಟ್* ಇದೇ ಡಿ.14ರಂದು ಜಿಲ್ಲೆಯ ವಿಪ್ರ ಬಾಂಧವರಿಗೆ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ವಿರಾಜಪೇಟೆಯ ಜೂನಿಯರ್ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಆರಂಭಗೊಳ್ಳಲಿದೆ. ಅದೇ ದಿನ ಸಂಜೆ ಸಂಜೆ 4 ಗಂಟೆಗೆ ಮೈದಾನದ ಮತ್ತೊಂದು ಭಾಗದಲ್ಲಿ ಜಿಲ್ಲಾ ಮಟ್ಟದ ಹಗ್ಗ-ಜಗ್ಗಾಟ ಸ್ಪರ್ಧೆಯು ಸಹ ನಡೆಯಲಿದೆ. ಇದರಲ್ಲಿ ಜಿಲ್ಲೆಯ ಬ್ರಾಹ್ಮಣ ಸಮಾಜ ಬಾಂಧವರು ಪಾಲ್ಗೊಳ್ಳುವಂತೆ ರಾಮಚಂದ್ರ ಮೂಗೂರು ವಿನಂತಿಸಿಕೊಂಡರು. ನಿಧಿಯ ಪ್ರಧಾನ ಕಾರ್ಯದರ್ಶಿ ಬಿ.ಕೆ.ಜಗದೀಶ್ ಅವರು, ಇದೇ ಡಿ.21 ರಂದು ಮಡಿಕೇರಿ ತಾಲ್ಲೂಕು ಮಟ್ಟದ ಚೆಸ್ ಮತ್ತು ಕೇರಂ ಸ್ಪರ್ಧೆ ನಗರದ ಶ್ರೀ ಲಕ್ಷ್ಮೀನರಸಿಂಹ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ವಿಪ್ರಬಾಂಧವರಿಗಾಗಿ ನಡೆಯಲಿದೆ. ಜಿಲ್ಲೆಯ ಇತರೆ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಸ್ಪರ್ಧೆಗಳು ನಡೆದು, ಜನವರಿಯಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆ ನಡೆಯಲಿದೆಯೆಂದು ಮಾಹಿತಿ ನೀಡಿದರು. ಸ್ಪರ್ಧೆಗಳಿಗೆ ಚಾಲನೆ- ವಿಪ್ರ ಕ್ರೀಡೋತ್ಸವಕ್ಕೆ ಚಾಲನೆ ನೀಡಿದ ಬಿ.ಜಿ.ಅನಂತ ಶಯನ ಅವರು, ನಿಧಿಯ ಅಧ್ಯಕ್ಷ ರಾಮಚಂದ್ರ ಮೂಗೂರು ಅವರೊಂದಿಗೆ ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಸ್ಪರ್ಧೆಯನ್ನು ಉದ್ಘಾಟಿಸಿದರು.
*ಸಂಭ್ರಮಿಸಿದ ವಿಪ್ರ ಬಾಂಧವರು* ಒಳಾಂಗಣ ಕ್ರೀಡಾಕೂಟದಲ್ಲಿ ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್ ಡಬಲ್ಸ್, ಟೇಬಲ್ ಟೆನ್ನಿಸ್ ಸಿಂಗಲ್ಸ್, ಡಬಲ್ಸ್ ಪಂದ್ಯಾವಳಿ ಪುರುಷರು ಮತ್ತು ಮಹಿಳೆಯರ ವಿಭಾಗ ಹಾಗೂ 50 ವರ್ಷ ಮೇಲ್ಪಟ್ಟ ಹಿರಿಯ ವಿಭಾಗಗಳಲ್ಲಿ ನಡೆಯಿತು. ಈ ಎಲ್ಲಾ ಸ್ಪರ್ಧೆಗಳಲ್ಲಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ವಿಪ್ರ ಬಾಂಧವರು ಪಾಲ್ಗೊಂಡು ಸಂಭ್ರಮಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಉಪಾಧ್ಯಕ್ಷರಾದ ಭರತೇಶ್ ಕಂಡಿಗೆ, ಸಹ ಕಾರ್ಯದರ್ಶಿ ಎ.ವಿ. ಮಂಜುನಾಥ್, ನಿರ್ದೇಶಕರಾದ ಬಿ.ಕೆ.ಅರುಣ್ ಕುಮಾರ್, ರಾಜಶೇಖರ್, ಜಿ.ಡಿ.ಶಿವಶಂಕರ್, ಪಿ.ವಿ.ಅಶೋಕ್, ಎಂ.ಎನ್. ಶ್ಯಾಮಲಾ ಉಪಸ್ಥಿತರಿದ್ದರು.









