
ಮಡಿಕೇರಿ NEWS DESK ಡಿ.29 : ಜೀವನದಿ ಕಾವೇರಿಯ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಡಗು ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕೊಡಗು ಅಭಿವೃದ್ಧಿ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಯುವ ರಕ್ಷಣಾ ವೇದಿಕೆ ಮತ್ತಿತರ ಸಂಘಟನೆಗಳ ಪ್ರಮುಖರು, ಕಾವೇರಿ ನದಿ ಕಲುಷಿತಗೊಳ್ಳುವುದನ್ನು ಮತ್ತು ನದಿದಂಡೆ ಒತ್ತುವರಿಯಾಗುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭ ಕೊಡಗು ಅಭಿವೃದ್ಧಿ ಸಮಿತಿ ಜಿಲ್ಲಾಧ್ಯಕ್ಷ ಪ್ರಸನ್ನ ಭಟ್ ಮಾತನಾಡಿ, ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಹಾಗೂ ಕಾವೇರಿ ನದಿ ಹರಿಯುವ ಪ್ರದೇಶಗಳಲ್ಲಿ ಘನ ತ್ಯಾಜ್ಯ, ಪ್ಲಾಸ್ಟಿಕ್ ವಸ್ತುಗಳು, ಹೊಟೇಲ್ ಹಾಗೂ ವ್ಯಾಪಾರಿಕ ತ್ಯಾಜ್ಯಗಳನ್ನು ನದಿಗೆ ಹಾಗೂ ನದಿ ತೀರದ ಪ್ರದೇಶಗಳಿಗೆ ಅಕ್ರಮವಾಗಿ ಎಸೆಯುತ್ತಿರುವುದು ಅತ್ಯಂತ ವಿಷಾದನೀಯ ಎಂದರು. ಇದು ಪರಿಸರ, ಸಾರ್ವಜನಿಕ ಆರೋಗ್ಯ ಮತ್ತು ಭವಿಷ್ಯದ ನೀರಿನ ಭದ್ರತೆಗೆ ಗಂಭೀರ ಅಪಾಯವನ್ನುಂಟು ಮಾಡಲಿದ್ದು, ಕಾವೇರಿ ನದಿಗೆ ತ್ಯಾಜ್ಯ ಎಸೆಯುತ್ತಿರುವವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಕೋಟ್ಯಾಂತರ ಜನರಿಗೆ ಕುಡಿಯುವ ನೀರನ್ನು ಒದಗಿಸುವ ಕಾವೇರಿ ನದಿಯ ಸಂರಕ್ಷಣೆಯ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಸರಕಾರ ನಿರ್ಲಕ್ಷ್ಯ ತೋರಬಾರದು, ಕಾವೇರಿ ನದಿಗೆ ಶುದ್ಧೀಕರಿಸದ ತ್ಯಾಜ್ಯ ನೀರು ಬಿಡುತ್ತಿರುವ ಅಕ್ರಮಗಳು, ನದಿ ತೀರದ ಒತ್ತುವರಿಗೆಳು ಹಾಗೂ ಈ ಸಂಬಂಧ ಆಡಳಿತಾತ್ಮಕ ನಿರ್ಲಕ್ಷ್ಯದ ವಿರುದ್ಧ ತುರ್ತು ಕ್ರಮ ಕೈಗೊಳ್ಳಬೇಕು, ಸಂಬಂಧಪಟ್ಟ ನಗರಸಭೆ, ಪುರಸಭೆ, ಪಂಚಾಯತ್ ಅಧಿಕಾರಿಗಳಿಗೆ ಸ್ಪಷ್ಟ ಹಾಗೂ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು, ನದಿ ತೀರ ಪ್ರದೇಶದಲ್ಲಿ ನಿರಂತರ ಪರಿಶೀಲನೆ ಹಾಗೂ ನಿಗಾ ವ್ಯವಸ್ಥೆ ಜಾರಿ ಮಾಡಬೇಕು, ತಪ್ಪಿತಸ್ಥರ ಮೇಲೆ ಭಾರೀ ದಂಡ ಹಾಗೂ ಕ್ರಿಮಿನಲ್ ಪ್ರಕರಣ ದಾಖಲಿಸುವ ಕ್ರಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಪ್ರಸನ್ನ ಭಟ್ ಆಗ್ರಹಿಸಿದರು. ತಪ್ಪಿದಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು. ಕರ್ನಾಟಕ ಯುವ ರಕ್ಷಣಾ ವೇದಿಕೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಕಾರ್ಯದರ್ಶಿ ಎಂ.ಎಂ.ದಾವೂದ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಅಣ್ಣಯ್ಯ, ಸೇರಿದಂತೆ ಕೊಡಗು ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ಲವ, ಕಾರ್ಯದರ್ಶಿ ಪ್ರಮೋದ್ ಸೇರಿದಂತೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.









