
ಮಡಿಕೇರಿ ಜ.22 NEWS DESK : ಕೊಡಗು ಜಿಲ್ಲೆಯ ವಿವಿಧೆಡೆ ಹುಲಿ ಮತ್ತು ಕಾಡಾನೆ ಉಪಟಳ ವ್ಯಾಪಕವಾಗಿದೆ. ಹುಲಿ ದಾಳಿಯಿಂದ ಹಸು ಮತ್ತು ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ತೀವ್ರ ಗಾಯಗೊಳಿಸಿರುವ ಘಟನೆ ಇಂದು ದಕ್ಷಿಣ ಕೊಡಗಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಪೋರಂಗಡ ಪೃಥ್ವಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮದಲ್ಲಿ ಆತಂಕ ಮೂಡಿದ್ದು, ಅರಣ್ಯ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. *ಕಾಡಾನೆ ದಾಳಿ* ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಬಾಡಗ ಬಾಣಂಗಾಲ ಗ್ರಾಮದ ಮಟ್ಟ ಪೈಸಾರಿ ಬಳಿ ನಡೆದಿದೆ. ಸ್ಥಳೀಯ ನಿವಾಸಿ ದೇವರಾಜ (60) ಎಂಬುವವರೇ ಗಾಯಗೊಂಡಿರುವ ವ್ಯಕ್ತಿಯಾಗಿದ್ದು, ಇವರನ್ನು ವಿರಾಜಪೇಟೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಬೆಳಿಗ್ಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ. ಘಟನೆ ನಡೆದ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ಗಾಯಾಳುವಿನ ಚಿಕಿತ್ಸಾ ವೆಚ್ಚವನ್ನು ಇಲಾಖೆಯೇ ಭರಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.









