ಮಡಿಕೇರಿ, NEWS DESK ಫೆ.17:-ಮಹಾನ್ ಮಾನವತಾವಾದಿ ಸಂತ ಸೇವಾಲಾಲ್ ಅವರ ತತ್ವ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಶಿಕ್ಷಕರಾದ ಜಿ.ನಂದಿನಿ ಅವರು ಹೇಳಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಇತ್ತೀಚೆಗೆ ನಡೆದ ಸಂತ ಸೇವಾಲಾಲ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅಲೆಮಾರಿ ಜನ ಸಮುದಾಯದ ಬಂಜಾರ, ಲಂಬಾಣಿ, ಲಮಾಣಿ, ಸುಗಾಲಿ, ಸುಕಾಲಿ ಗೋರ್, ಸೋನಾರ್, ಲೋಹಾರ್, ಬಾಜೀಗರ್ ಮತ್ತಿತರ ಅನೇಕ ಉಪನಾಮಗಳಿಂದ ಕರೆಯಲಾಗುತ್ತದೆ ಎಂದು ಅವರು ವಿವರಿಸಿದರು.

ಲಂಬಾಣಿ, ಬಂಜಾರ ಸಮಾಜ ಬಗ್ಗೆ ಮಹಾಭಾರತದಲ್ಲಿಯೇ ಉಲ್ಲೇಖವಾಗಿರುವುದನ್ನು ಕಾಣಬಹುದಾಗಿದ್ದು, ಸುಮಾರು ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸ ಇದೆ ಎಂದು ತಿಳಿಸಿದರು.
ಸಂತ ಸೇವಾಲಾಲ್ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರ ಅವಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ತಾವು ಓದಬೇಕು, ಇತರರನ್ನು ಓದಿಸಬೇಕು ಎಂಬ ಆಶಯ ಹೊಂದಿದ್ದರು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಲಾ ಶಿಕ್ಷಕರಾದ ಜಿ.ನಂದಿನಿ ಅವರು ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಮಾತನಾಡಿ ಬಂಜಾರ, ಲಂಬಾಣಿ ಸಮಾಜಕ್ಕೆ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಬಳಸಿಕೊಂಡು ಮುಖ್ಯವಾಹಿನಿಗೆ ಬರುವಂತಾಗಬೇಕು ಎಂದರು.
ಸಮಾಜ ಕಲ್ಯಾಣ ಇಲಾಖೆಯ ನಿಲಯ ಮೇಲ್ವಿಚಾರಕರಾದ ಗೀತಾ ಅವರು ಮಾತನಾಡಿ ಲಂಬಾಣಿ ಭಾಷೆ, ಸಂಸ್ಕøತಿ ಆಚಾರ-ವಿಚಾರ ಉಡುಗೆ-ತೊಡುಗೆ ವೈಶಿಷ್ಟ್ಯತೆಯಿಂದ ಕೂಡಿದೆ. ಸಮಾಜದ ಮುಖ್ಯವಾಹಿನಿಯಿಂದ ಬಂಜಾರ ಸಮಾಜವು ಇನ್ನೂ ಸಹ ದೂರವಿದ್ದು, ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂಧಿಗಳು, ವಿದ್ಯಾರ್ಥಿಗಳು ಇತರರು ಇದ್ದರು.







