
ವಿರಾಜಪೇಟೆ ಫೆ.24 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್, ವಿರಾಜಪೇಟೆ ತಾಲ್ಲೂಕು ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಂಜುಶ್ರೀ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸೃಜನಶೀಲ ಕಾರ್ಯಕ್ರಮವಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರದ ಬಗ್ಗೆ ತರಬೇತಿ ಕಾರ್ಯಕ್ರಮ ಗೋಣಿಕೊಪ್ಪ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಗೋಣಿಕೊಪ್ಪ ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಪ್ರಿಯ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಂಜುಳಾ, ಗ್ರಾಮ ಪಂಚಾಯಿತಿ ಸದಸ್ಯರಾದ ಪುಷ್ಪ, ತರಬೇತುದಾರರಾದ ರಶ್ಮಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಗ್ರಾ.ಪಂ ಉಪಾಧ್ಯಕ್ಷೆ ಮಂಜುಳಾ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರಗತಿ ನಿಧಿಯನ್ನು ಪಡೆಯುವುದಲ್ಲದೆ ಅನೇಕ ಮಹಿಳೆಯರಿಗೆ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಮಾತೃಶ್ರೀ ಅಮ್ಮನವರ ಮಾರ್ಗದರ್ಶನದಲ್ಲಿ ನಡೆಯುವ ಜ್ಞಾನವಿಕಾಸ ಕಾರ್ಯಕ್ರಮದಿಂದ ಅನೇಕ ಕಾರ್ಯಕ್ರಮಗಳನ್ನೂ ಅನುಷ್ಠಾನ ಮಾಡಲು ಸಹಕಾರಿಯಾಗಿದೆ. ವಿಶೇಷವಾಗಿ ನಮ್ಮಲ್ಲಿ ಇಂದು ಮಹಿಳೆಯರಿಗೆ ಅತ್ಯವಶ್ಯಕವಾಗಿ ಕಲಿಯಬೇಕಾದ ಸ್ಯಾರಿ ಕುಚ್, ಸ್ಯಾರಿ ಫೋಲ್ಡಿಂಗ್, ಮದುಮಗಳ ಶೃಂಗಾರ ಕಾರ್ಯಕ್ರಮ ಪ್ರಯೋಜನಕಾರಿ ಎಂದು ತಿಳಿಸಿದರು. ಕೆನರಾ ಬ್ಯಾಂಕ್ ಮ್ಯಾನೇಜರ್ ಶ್ರೀಪ್ರಿಯ ಮಾತನಾಡಿ, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಈ ರೀತಿಯ ಕಾರ್ಯಕ್ರಮಗಳು ಅವಶ್ಯಕವಿದ್ದು, ಇದರ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು. ಸಂಘ ಸಂಸ್ಥೆಗಳಿಂದ ಸಿಗುವ ತರಬೇತಿಗಳನ್ನ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು. ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಉಷಾರಾಣಿ, ಸೇವಾ ಪ್ರತಿನಿಧಿ ವಿಮಲ ಇದ್ದರು.









