
ಮಡಿಕೇರಿ ಫೆ.26 NEWS DESK : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಮೂಲಭೂತ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಸೂಕ್ತ ಸ್ಪಂದನೆ ನೀಡಿಲ್ಲವೆಂದು ಆರೋಪಿಸಿ ಮಾ.11 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ. ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಹಾಗೂ ಇಲಾಖೆಯ ಎಲ್ಲಾ ವೃಂದ ಸಂಘಗಳು ಜಂಟಿಯಾಗಿ ಕರೆದಿದ್ದ ಸುದ್ದಿ ಗೋಷ್ಠಿಯಲ್ಲಿ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ಡಾ.ಆನಂದ್ ಎಂ. ಅವರು ಈ ಬಗ್ಗೆ ವಿವರಗಳನ್ನಿತ್ತರು. ಸರ್ಕಾರ ಬೇಡಿಕೆಗಳ ಈಡೇರಿಕೆಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಮಾ.11ರಿಂದ ಮಾ.15ರವರೆಗೆ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲಾ ವೃಂದದ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಪ್ಪು ಪಟ್ಟಿ ಧರಿಸಿ, ಹೊರ ರೋಗಿಗಳ ಚಿಕಿತ್ಸೆಯನ್ನು ಸ್ಥಗಿತಗೊಳಿಸಿ, ತುರ್ತು ಸೇವೆಗಳನ್ನು ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳಲಿರುವುದಾಗಿ ಸ್ಪಷ್ಟಪಡಿಸಿದರು. ಪ್ರಮುಖವಾಗಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರಿ ಆದೇಶವಿದ್ದರೂ ಸಹ ಇದನ್ನು ಉಲ್ಲಂಘಿಸಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಇದಕ್ಕೆ ಸಂಬಂಧಿಸಿದಂತೆ ಶೀಘ್ರ ತಿದ್ದುಪಡಿಯನ್ನು ತಂದು ಸಮಸ್ಯೆ ಬಗೆಹರಿಸಬೇಕು. ಇಲಾಖೆಯ ಎಲ್ಲಾ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲ ಕಾಲಕ್ಕೆ ಪ್ರಕಟಿಸಬೇಕೆಂದು ಒತ್ತಾಯಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲಾ ವೃಂದದ ಯಾವುದೇ ಅಧಿಕಾರಿ ಮತ್ತು ನೌಕರರಿಗೆ ಕಳೆದ ಐದು ವರ್ಷಗಳಿಂದ ಮುಂಬಡ್ತಿಗಳನ್ನು ನೀಡಿಲ್ಲ, ಕೂಡಲೆ ಮುಂಬಡ್ತಿಗಳನ್ನು ನೀಡಬೇಕು, ನಿಯಮಗಳಂತೆ ಸೇವಾನಿರತ ವೈದ್ಯರು, ಅಧಿಕಾರಿ ಮತ್ತು ನೌಕರರ ಉನ್ನತ ವ್ಯಾಸಂಗಕ್ಕೆ ಅವಕಾಶ ಒದಗಿಸಬೇಕು. ಈ ಹಿಂದಿನಿಂದಲು ಉನ್ನತ ವ್ಯಾಸಂಗಕ್ಕೆ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ವೇತನ, ಶುಲ್ಕ ಹಾಗೂ ಭತ್ಯೆಗಳೊಂದಿಗೆ ನಿಯೋಜನೆ ಮಾಡುವ ನಿಯಮವಿದೆ. ಆದರೆ, ಈ ಸಾಲಿನಿಂದ ವೈದ್ಯಕೀಯ ಮಹಾವಿದ್ಯಾಲಯಗಳಿಗೆ ನಿಯೋಜನೆಗೊಂಡ ವೈದ್ಯರುಗಳಿಗೆ ವೇತನ ಶುಲ್ಕ ಹಾಗೂ ಭತ್ಯೆ ನೀಡಿಲ್ಲ ಮತ್ತು ಉನ್ನತ ವ್ಯಾಸಂಗದ ನಿಯೋಜನೆ ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಇದನ್ನು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿದರು. ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ :: ಆರೋಗ್ಯ ಇಲಾಖೆಯಲ್ಲಿ 1998ರ ಅಂಕಿ ಅಂಶಗಳ ಆಧಾರದ ಮೇಲೆ ಹುದ್ದೆಗಳನ್ನು ಸೃಜಿಸಲಾಗಿತ್ತು. ಪ್ರಸ್ತುತ ಜನ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದರು, ಹೆಚ್ಚುವರಿ ಹುದ್ದೆಗಳನ್ನು ಸೃಜಿಸಿಲ್ಲ. ಇದಕ್ಕೆ ಬದಲಾಗಿ ಈ ಹಿಂದೆ ಸೃಜಿಸಿರುವ ಹುದ್ದೆಗಳಲ್ಲಿ ಶೇ.47 ರಷ್ಟು ಹುದ್ದೆಗಳು ಇಂದಿಗೂ ಖಾಲಿ ಇದೆ. ಇದು ಕರ್ತವ್ಯ ನಿರತ ವೈದ್ಯರು ಮತ್ತು ಸಿಬ್ಬಂದಿಗಳ ಮೇಲೆ ಹೆಚ್ಚಿನ ಒತ್ತಡವನ್ನು ಉಂಟು ಮಾಡುತ್ತಿದೆ. ಕಾಲ ಕಾಲಕ್ಕೆ ಹುದ್ದೆಗಳನ್ನು ಭರ್ತಿ ಮಾಡಿದರೆ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡಬಹುದೆಂದು ತಿಳಿಸಿದರು. ಗುತ್ತಿಗೆ ವೈದ್ಯರು :: ನೌಕರರು ಹಾಗೂ ಎನ್ಹೆಚ್ಎಂ ಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಹಾಗೂ ಕಾಲ ಕಾಲಕ್ಕೆ ವೇತನ ಹೆಚ್ಚಳ ಮಾಡಬೇಕು. ಮೂರು ವರ್ಷ ಪೂರೈಸಿದ ಗುತ್ತಿಗೆ ವೈದ್ಯರು ನೌಕರರ ಹುದ್ದೆಯನ್ನು ಖಾಯಂಗೊಳಿಸಬೇಕೆಂದು ಒತ್ತಯಿಸುತ್ತಿರುವುದಾಗಿ ತಿಳಿಸಿದರು. ಖಾಸಗಿ ಸೇವೆ ಅವಕಾಶ ನೀಡಿ :: ಸರ್ಕಾರಿ ವೈದ್ಯರುಗಳಿಗೆ ಕರ್ತವ್ಯದ ನಂತರ ಖಾಸಗಿ ಸೇವೆಗೆ ಅವಕಾಶ ನೀಡಬೇಕು. ಇಲ್ಲಿಯವರೆಗೆ ಇಂತಹ ಅವಕಾಶ ಇತ್ತಾದರು, ಇದೀಗ ಸರ್ಕಾರಿ ವೈದ್ಯರುಗಳು ಒಳರೋಗಿ ಸೇವೆಯನ್ನು ನೀಡಬಾರದೆಂದು ನಿರ್ಬಂಧಿಸಲಾಗಿದೆ. ಈ ನಿರ್ಬಂಧವನ್ನು ಹಿಂಪಡೆಯಬೇಕೆಂದು ಒತ್ತ್ತಾಯಿಸಿದರು. ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ. ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಅಧಿಕಾರಿ ಮತ್ತು ನೌಕರರು ನೈಜ ಬೇಡಿಕೆಗಳನ್ನು ಮುಂದಿಟ್ಟು ಹೋರಾಟಕ್ಕೆ ಮುಂದಾಗುತ್ತಿದ್ದು, ಇದಕ್ಕೆ ಸಂಘ ಬೆಂಬಲವನ್ನು ನೀಡುತ್ತಿರುವುದಾಗಿ ತಿಳಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಅವರು ಮಾತನಾಡಿ, ಆರೋಗ್ಯ ಅಭಿಯಾನದಡಿ ಜಿಲ್ಲೆಯಲ್ಲಿ 428 ಹುದ್ದೆಗಳಿದ್ದು, ಇದರಲ್ಲಿ 366 ಮಂದಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರಿಗೆ ಅಗತ್ಯ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು. ಗೋಷ್ಠಿಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಜಿ.ಡಿ.ಶ್ರೀನಾಥ್, ಫಾರ್ಮಸಿ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾದ ನಾಗಮಣಿ ಎಸ್.ವಿ., ನೇತ್ರ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎಸ್.ಚೇತನ್ ಉಪಸ್ಥಿತರಿದ್ದರು.









