
ಮಡಿಕೇರಿ NEWS DESK ಫೆ.28 : ನಾಪೋಕ್ಲುವಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿರುವ ಆರೋಪಿಯನ್ನು ಗಡಿಪಾರು ಮಾಡಬೇಕೆಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಆಗ್ರಹಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹಿಂದೂ ಧರ್ಮದ ಜಾಗೃತಿಗಾಗಿ ಶಾಂತಿಯುತವಾಗಿ ಜಿಲ್ಲಾವ್ಯಾಪಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ನಡೆಸುತ್ತಾ ಬರಲಾಗುತ್ತಿದೆ. ಈ ನಡುವೆ ಬಲ್ಲಮಾವಟಿಯಲ್ಲಿ ಕಾರ್ಯಕ್ರಮ ನಡೆಸಬೇಕಾದ ಹೊತ್ತಿನಲ್ಲೇ ಅಶಾಂತಿ ಹಾಗೂ ಕೋಮುಗಲಭೆ ಸೃಷ್ಟಿಸುವ ಹುನ್ನಾರವನ್ನು ಕೆಲವರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಿಂದೂ ಕಾರ್ಯಕರ್ತನ ಮೇಲೆ ನಡೆದಿರುವ ಹಲ್ಲೆ ಖಂಡನೀಯ. ಹಲ್ಲೆ ಪ್ರಕರಣದ ಓರ್ವ ಆರೋಪಿ ಇತ್ತೀಚೆಗೆ ಭದ್ರತಾ ಕಾಯ್ದೆ 107 ಅಡಿ ತಾಲ್ಲೂಕು ದಂಡಾಧಿಕಾರಿಗಳ ಸಮಕ್ಷಮದಲ್ಲಿ ಬಾಂಡ್ ಗೆ ಸಹಿ ಮಾಡಿದ್ದಾನೆ ಎಂಬ ಮಾಹಿತಿ ಲಭ್ಯವಿದೆ. ಇದೀಗ ಬಾಂಡ್ ನಿಯಮ ಉಲ್ಲಂಘನೆ ಮಾಡಿರುವ ಘಟನೆ ನಡೆದಿದ್ದು, ಆರೋಪಿಯನ್ನು ತಕ್ಷಣ ಕೊಡಗು ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಒತ್ತಾಯಿಸಿದ್ದಾರೆ.








