ಮಡಿಕೇರಿ, NEWS DESK ಮಾ.2 : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ. ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಜವಾಬ್ದಾರಿ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕುಶಾಲನಗರದ ನಿವೃತ್ತ ಚಿತ್ರಕಲಾ ಶಿಕ್ಷಕ ಯು.ಆರ್.ನಾಗೇಶ್ ಕುಮಾರ್ ತಿಳಿಸಿದ್ದಾರೆ.
ಮೂರ್ನಾಡು ಪ್ರೌಢ ಶಾಲೆ ಮತ್ತು ರೋಟರಿ ಮಡಿಕೇರಿ ವುಡ್ಸ್ ನ ಸಂಯುಕ್ತಾಶ್ರಯದಲ್ಲಿ ನಡೆದ “ಕಲೆಯ ಮೂಲಕ ಕಲಿಕೆ” ಎಂಬ ವಿಶಿಷ್ಟ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ರೋಟರಿ ಮಡಿಕೇರಿ ವುಡ್ಸ್ ಶಿಕ್ಷಣ ಸಂಸ್ಥೆಗಳೊಡನೆ ಕೈಜೋಡಿಸಿ ವಿದ್ಯಾರ್ಥಿಗಳ ವಿಕಸನಕ್ಕೆ ಪೂರಕವಾದ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸುತ್ತಿರುವುದು ಶ್ಲಾಘನೀಯ. ವಿದ್ಯಾರ್ಥಿಗಳು ಈ ರೀತಿಯ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಯು.ಆರ್.ನಾಗೇಶ್ ಕುಮಾರ್ ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ವುಡ್ಸ್ ಅಧ್ಯಕ್ಷ ರೊ.ಕಿರಣ್ ಕುಂದರ್ ವಿದ್ಯಾರ್ಥಿಗಳ ಭವಿಷ್ಯ ಉಜ್ವಲಗೊಳಿಸುವ ಉದ್ದೇಶದಿಂದ ರೋಟರಿ ವುಡ್ಸ್ ಇಂತಹ ಹಲವಾರು ಕಾರ್ಯಕ್ರಮಗಳನ್ನು ಶಿಕ್ಷಣ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಳ್ಳಬೇಕು ಎಂದರು.

ರೋಟರಿ ವುಡ್ಸ್ ನ ಮಾಜಿ ಅಧ್ಯಕ್ಷ ರೊ.ವಸಂತ್ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಬದಲಾಗುತ್ತಿರುವ ಶಿಕ್ಷಣ ವ್ಯವಸ್ಥೆಗೆ ಹೊಂದಿಕೊಳ್ಳುವ ಮೂಲಕ, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಇದಕ್ಕೆ ಸಹಕಾರಿಯಾಗಬಲ್ಲ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಚಾರಗಳನ್ನು ಮನವರಿಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮೂರ್ನಾಡು ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಪ್ರಶಾಂತ್ ಎಸ್.ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರೋಟರಿ ವುಡ್ಸ್ ಸದಸ್ಯ ರೊ.ವಿನು ಚೇಂದ್ರಿಮಾಡ ಉಪಸ್ಥಿತರಿದ್ದರು. ಹಿರಿಯ ಶಿಕ್ಷಕಿ ಸುಜಾತ ಸ್ವಾಗತಿಸಿ, ಶಿಕ್ಷಕ ಕೃಷ್ಣಪ್ಪ ವಂದಿಸಿದರು. ಕಾರ್ಯಾಗಾರದಲ್ಲಿ 8, 9 ಮತ್ತು 10ನೇ ತರಗತಿಯ 150ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.







