
ಮಡಿಕೇರಿ NEWS DESK ಮಾ.10 : ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವನ ನಡುವಿನ ಸಂಘರ್ಷ ಕೈಮೀರಿ ಹೋಗಿದೆ. ಕಳೆದ 10 ದಿನಗಳಲ್ಲಿ ಕಾಡಾನೆ ದಾಳಿಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿಲ್ಲವೆಂದು ಬಿಜೆಪಿ ವಿರಾಜಪೇಟೆ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಟೀಕಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಅರಣ್ಯ ಸಚಿವರಿಗೆ ಅರಣ್ಯ ಖಾತೆಯ ಜವಾಬ್ದಾರಿಯನ್ನು ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ. ಕೊಡಗು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ವನ್ಯಜೀವಿಗಳ ದಾಳಿಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಲ್ಲೆಂದರಲ್ಲಿ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ, ಇದೇ ಫೆ.28 ರಂದು ಕಾಡಾನೆ ದಾಳಿಗೆ ಸಿಲುಕಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವಿಗೀಡಾದ ಘಟನೆ ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಇದೀಗ ಕುಶಾಲನಗರ ತಾಲ್ಲೂಕಿನ ಬಾಳೆಗಂಡಿ ಎಂಬಲ್ಲಿ ಜಲಜಾಕ್ಷಿ ಎಂಬುವವರು ಜೀವ ಕಳೆದುಕೊಂಡಿದ್ದಾರೆ. ಆದರೆ ಅರಣ್ಯ ಸಚಿವರು ಮಾತ್ರ ಈ ಘಟನೆಗಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವ ರೀತಿಯಲ್ಲಿ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದ್ದಾರೆ. ಜನ ವನ್ಯಜೀವಿ ದಾಳಿಯ ಗಂಭೀರ ಸಮಸ್ಯೆಯನ್ನು ಎದುರಿಸುತ್ತಿದ್ದರೂ ಮತ್ತು ಸಾವು ನೋವುಗಳು ಸಂಭವಿಸುತ್ತಿದ್ದರೂ ಅರಣ್ಯ ಸಚಿವರು ಕೊಡಗು ಜಿಲ್ಲೆಗೆ ಭೇಟಿ ನೀಡಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆಯುವ ಕಾಳಜಿಯನ್ನು ತೋರುತ್ತಿಲ್ಲ. ಕೇವಲ ವಿಧಾನಸೌಧದ ಕಚೇರಿಯಲ್ಲೇ ಉಳಿದುಬಿಟ್ಟರೆ ವನ್ಯಜೀವಿಗಳ ಉಪಟಳದಿಂದ ಜಿಲ್ಲೆಯ ಜನರು ಎದುರಿಸುತ್ತಿರುವ ಕಷ್ಟನಷ್ಟಗಳ ಗಂಭೀರತೆಯ ಅರಿವಾಗುವುದಿಲ್ಲ. ಆದ್ದರಿಂದ ಅರಣ್ಯ ಸಚಿವರು ತಕ್ಷಣ ಕೊಡಗು ಜಿಲ್ಲೆಗೆ ಭೇಟಿ ನೀಡಿ ಸಮಸ್ಯೆಯ ನೈಜತೆಯನ್ನು ಅರಿತುಕೊಳ್ಳಬೇಕು. ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲಿ ಜನಸಂಪರ್ಕ ಸಭೆ ನಡೆಸಿ ಜನರ ಅಹವಾಲನ್ನು ಸ್ವೀಕರಿಸಬೇಕು. ವನ್ಯಜೀವಿ ದಾಳಿ ತಡೆಗೆ ಇಲ್ಲಿಯವರೆಗೆ ಅಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳ ಕುರಿತು ಖುದ್ದು ಪರಿಶೀಲಿಸಬೇಕು. ಶಾಶ್ವತ ಯೋಜನೆ ರೂಪಿಸಲು ಸಭೆಯಲ್ಲಿ ಅನುಮೋದನೆ ನೀಡಬೇಕು ಎಂದು ರಾಕೇಶ್ ದೇವಯ್ಯ ಒತ್ತಾಯಿಸಿದ್ದಾರೆ. ತಪ್ಪಿದಲ್ಲಿ ಅರಣ್ಯ ಸಚಿವರ ರಾಜೀನಾಮೆಗಾಗಿ ಆಗ್ರಹಿಸಿ ಬಿಜೆಪಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.








