
ಮಡಿಕೇರಿ ಮಾ.12 NEWS DESK : ಕೊಡಗು ಜಿಲ್ಲೆಯಲ್ಲಿ ನಿರಂತರ ಕಾಡಾನೆ ದಾಳಿಯಿಂದ ಸಾಲು ಸಾಲು ಅಮಾಯಕ ಜೀವಗಳು ಬಲಿಯಾಗುತ್ತಿದ್ದರೂ ರಾಜ್ಯ ಸರಕಾರ ಯಾವುದೇ ತುರ್ತು ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿದೆ. ಸರಕಾರದ ಈ ನಿರ್ಲಕ್ಷ್ಯ ಮನೋಭಾವವನ್ನು ಸಹಿಸಲು ಸಾಧ್ಯವಿಲ್ಲವೆಂದು ಕೊಡಗು ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಲ್ಲಿ ಮೂರು ಅಮಾಯಕ ಜೀವಗಳು ಕಾಡಾನೆ ದಾಳಿಗೆ ಬಲಿಯಾಗಿವೆ. ಇತ್ತೀಚೆಗಷ್ಟೇ ವಿದ್ಯಾರ್ಥಿನಿ ಹಾಗೂ ಮಹಿಳೆಯೋರ್ವರು ಮೃತಪಟ್ಟಿದ್ದು, ಇದೀಗ ಬೆಳೆಗಾರ ಗಣಪತಿ ಅವರು ಕಾಡಾನೆ ದಾಳಿಗೆ ತುತ್ತಾಗಿದ್ದಾರೆ. ಈ ಬೆಳವಣಿಗೆ ಅತ್ಯಂತ ದು:ಖಕರವಾಗಿದ್ದು, ಸರಕಾರ ಸಮಸ್ಯೆಯ ಗಂಭೀರತೆಯನ್ನು ಅರಿಯದೆ ಕೇವಲ ಪರಿಹಾದ ಚೆಕ್ ನೀಡಿ ಕೈತೊಳೆದುಕೊಳ್ಳುತ್ತಿದೆ ಎಂದು ಟೀಕಿಸಿದ್ದಾರೆ. ಅರಣ್ಯ ಸಚಿವರು ಕಾಡಾನೆ ಉಪಟಳ ತಡೆಗೆ ಸಂಬಂಧಿಸಿದಂತೆ ಕೇವಲ ಭರವಸೆಗಳನ್ನು ನೀಡುತ್ತಿದ್ದಾರೆಯೇ ಹೊರತು ಯಾವುದೇ ಯೋಜನೆಗಳು ಕಾರ್ಯಗತಗೊಳ್ಳುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ವನ್ಯಜೀವಿಗಳ ದಾಳಿ ತೀವ್ರತೆಯನ್ನು ಪಡೆದುಕೊಳ್ಳುತ್ತಿದ್ದರೂ ಜಿಲ್ಲೆಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ಪರಿಹಾರೋಪಾಯಗಳನ್ನು ಕಂಡುಕೊಳ್ಳುವ ಆಸಕ್ತಿಯನ್ನು ಸಚಿವರು ತೋರುತ್ತಿಲ್ಲ. ಕೊಡಗಿನಲ್ಲಿರುವ ಮಾನವ ಜೀವಗಳಿಗೆ ಬೆಲೆ ಇಲ್ಲದಾಗಿದೆ, ಸರಕಾಕ್ಕೆ ಪರಿಸ್ಥಿತಿಯ ಗಂಭೀರತೆಯನ್ನು ಅರಿಯಲು ಇನ್ನೆಷ್ಟು ಜೀವಗಳ ಬಲಿ ಬೇಕು ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಪ್ರಶ್ನಿಸಿದ್ದಾರೆ. ಸರಕಾರ ನಿದ್ರಾವಸ್ಥೆಯಲ್ಲಿರಬಹುದು, ಆದರೆ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಇಬ್ಬರು ಶಾಸಕರು ಏನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ಶಾಸಕರುಗಳು ಸರಕಾರದ ಮೇಲೆ ಒತ್ತಡ ಹೇರಿ ಕಾಡಾನೆ ದಾಳಿ ತಡೆಗೆ ಅಗತ್ಯವಿರುವ ಯೋಜನೆಗಳ ಅನುಷ್ಠಾನಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ವನ್ಯಜೀವಿಗಳ ಉಪಟಳವನ್ನು ನಿಯಂತ್ರಿಸಲು ಉನ್ನತ ಮಟ್ಟದ ಅಧ್ಯಯನ ಮತ್ತು ಸಲಹಾ ಸಮಿತಿಯನ್ನು ರಚಿಸಿ ಇದು ನೀಡುವ ವರದಿಯಾಧಾರದಲ್ಲಿ ಅತ್ಯಾಧುನಿಕ ಕ್ರಮಗಳನ್ನು ಕೈಗೊಳ್ಳಬೇಕು. ಅರಣ್ಯ ಪ್ರದೇಶದಲ್ಲಿ ಎದುರಾಗಿರುವ ನೀರು ಮತ್ತು ಆಹಾರದ ಕೊರತೆಯ ಬಗ್ಗೆಯೂ ಅಧ್ಯಯನ ನಡೆಸಿ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯಿಸಿದ್ದಾರೆ.








