
ಮಡಿಕೇರಿ ಮಾ.21 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಮೂರು ವರ್ಷದಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿದೆ ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
ನಗರದ ಸುದರ್ಶನ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಹು ವರ್ಷಗಳಿಂದ ಆದಿವಾಸಿ ಜನರ ಅಭಿವೃದ್ಧಿಗಾಗಿ ಕೇಳಿ ಬರುತ್ತಿದ್ದ ‘ಆದಿವಾಸಿಗಳ ಅಭಿವೃದ್ಧಿ ನಿಗಮ’ ಬಜೆಟ್ ನಲ್ಲಿ ಪ್ರಕಟಿಸುವ ಮೂಲಕ ಸರ್ಕಾರ ಈ ಜನರ ಧ್ವನಿಗೆ ಸ್ಪಂದಿಸಿದೆ. ಹಾಗೆಯೇ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ಘೋಷಿಸಲಾಗಿದೆ ಎಂದರು. ವಿ.ಬಾಡಗ ಗ್ರಾಮದಲ್ಲಿ 11 ಎಕರೆ ಪ್ರದೇಶದಲ್ಲಿ ‘ಕ್ರೀಡಾ ತರಬೇತಿ ಕೇಂದ್ರ’ ಆರಂಭವಾಗಲಿದೆ. ಇದರಿಂದ ಜಿಲ್ಲೆಯ ವಿದ್ಯಾರ್ಥಿಗಳು ಒಲಿಂಪಿಕ್ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿ ಆಗಲಿದೆ ಎಂದರು. ಸರ್ಕಾರ ಶೋಷಿತರ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು. ಜಿಲ್ಲೆಯ ಎರಡು ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವಲ್ಲಿ ಕ್ರಮವಹಿಸಲಾಗಿದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು. ಮಾನವ ಮತ್ತು ವನ್ಯ ಪ್ರಾಣಿಗಳ ಹಾವಳಿ ನಿಯಂತ್ರಿಸಲು ಹಲವು ಕ್ರಮ ಕೈಗೊಳ್ಳಲಾಗಿದೆ. ಟ್ರಂಚ್, ಸೋಲಾರ್ ಬೇಲಿ ಹಾಗೂ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ. ಇನ್ನೂ ಸಹ ಕಾಮಗಾರಿ ಬಾಕಿ ಇದೆ ಎಂದು ಶಾಸಕರು ತಿಳಿಸಿದರು. ವನ್ಯ ಪ್ರಾಣಿಗಳ ಉಪಟಳ ನಿಯಂತ್ರಣ ಮಾಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಪಾತ್ರವಿದ್ದು, ಕೇಂದ್ರದಿಂದ ಹೆಚ್ಚಿನ ಅನುದಾನ ಒದಗಿಸಬೇಕಿದೆ ಎಂದು ಶಾಸಕರು ಒತ್ತಿ ಹೇಳಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಪ್ರಮುಖರಾದ ಕೊಲ್ಯದ ಗಿರೀಶ್, ಟಿ.ಪಿ.ರಮೇಶ್, ತೆನ್ನಿರಾ ಮೈನಾ, ಸೂರಜ್ ಹೊಸೂರು, ಇಸ್ಮಾಯಿಲ್ ಇತರರು ಇದ್ದರು.









