
ಕುಶಾಲನಗರ ಮಾ.27 NEWS DESK : ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ – ಕರ್ನಾಟಕದ ರಾಜ್ಯ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯ ಶಿಕ್ಷಣ ಮತ್ತು ತರಬೇತಿ ಇಲಾಖೆ( ಡಿ.ಎಸ್.ಇ.ಆರ್.ಟಿ.) ಯ ವತಿಯಿಂದ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನು ಸ್ಥಾಪಿಸಲಾಗಿದೆ ಎಂದು ಡಯಟ್ ಸಂಸ್ಥೆಯ ಪ್ರಾಂಶುಪಾಲರು ಆದ ಪದನಿಮಿತ್ತ ಉಪನಿರ್ದೇಶಕ(ಅಭಿವೃದ್ದಿ)ರಾದ ರಾಮಚಂದ್ರ ರಾಜೇ ಅರಸ್ ತಿಳಿಸಿದರು. ಕುಶಾಲನಗರ ತಾಲ್ಲೂಕಿನ ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಯಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನುಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ 34 ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್) ಗಳಲ್ಲಿ ಇಂತಹ ವೃತ್ತಿಪರ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ತಿಳಿಸಿದರು.
ಡಯಟ್ ಸಂಸ್ಥೆಯಲ್ಲಿ ಆರಂಭಿಸಲಾಗಿರುವ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕದ ಮೂಲಕ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲಾಗುವುದು ಎಂದರು.
ವೃತ್ತಿ ಮಾರ್ಗದರ್ಶನ ಘಟಕ ಹಾಗೂ ರೂಪುರೇಷೆ ಕುರಿತು ಮಾಹಿತಿ ನೀಡಿದ ಅವರು, ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಡಯಟ್ ಸಂಸ್ಥೆಯ ಮೂಲಕ ಜಿಲ್ಲಾ ಮಟ್ಟದ ವೃತ್ತಿ ದಿಕ್ಸೂಚಿ, ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ವೃತ್ತಿ ಮಾರ್ಗದರ್ಶನ ಕೆರಿಯರ್ ಮೇಳ 2026 ವನ್ನು ಕೂಡ ಸಂಘಟಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲ ರಾಮಚಂದ್ರರಾಜೇ ಅರಸ್ ತಿಳಿಸಿದರು. ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಕಛೇರಿಯಿಂದ ನೀಡಿರುವ ಸುತ್ತೋಲೆ ಅನ್ವಯ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪಿಸಲಾಗುತ್ತಿದ್ದು ಈ ಘಟಕದ ಮೂಲಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ವೃತ್ತಿ ಮಾರ್ಗದರ್ಶನ ನೀಡಲಾಗುವುದು ಎಂದು ಪ್ರಾಂಶುಪಾಲರು ರಾಮಚಂದ್ರ ರಾಜೇ ಅರಸ್ ತಿಳಿಸಿದರು. ಈ ವೃತ್ತಿ ಮಾರ್ಗದರ್ಶನ ಘಟಕದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯೂಸಿ ನಂತರದ
ಕೋರ್ಸ್ಗಳು ಪ್ರವೇಶ ಪರೀಕ್ಷೆಗಳು, ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಭವಿಷತ್ತಿನ ದೃಷ್ಠಿಯಿಂದ ಉದ್ಯೋಗಾವಕಾಶಗಳ ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಈ ಘಟಕದಲ್ಲಿ ಜಿಲ್ಲೆಯ ಹಾಗೂ ಆಸುಪಾಸಿನ ಹಲವಾರು ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಮತ್ತು ವೃತ್ತಿ ಶಿಕ್ಷಣ ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಕೂಡ. ಈ ಘಟಕಕ್ಕೆ ಆಗಮಿಸಿ ಈ ಘಟಕದ ಪ್ರಯೋಜನ ಪಡೆದುಕೊಳ್ಳಬಹುದು ಎಂದು ಅರಸ್ ತಿಳಿಸಿದರು. ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಡಯಟ್ ಸಂಸ್ಥೆಯಲ್ಲಿ ಆರಂಭವಾಗುತ್ತಿರುವ ವೃತ್ತಿ ಮಾರ್ಗದರ್ಶನ ಘಟಕವು ಜಿಲ್ಲೆಯ ಶಾಲಾ- ಕಾಲೇಜಿನ ವಿದ್ಯಾರ್ಥಿಗಳಿಗೆ ಮುಂದಿನ ಕೋರ್ಸ್ ಗಳು ಮತ್ತು ವೃತ್ತಿ ಆಯ್ಕೆಗೆ ಪೂರಕವಾಗಿದೆ ಎಂದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಚ್.ಕೆ.ಶಾಂತಿ, ಆರೋಗ್ಯ ಇಲಾಖೆಯ ವತಿಯಿಂದ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ.
ವೃತ್ತಿಪರ ಘಟಕ ಸಮಿತಿಯ ಕಾರ್ಯದರ್ಶಿ ಎಚ್.ಎಚ್.ಸತೀಶ್, ಘಟಕದ ರೂಪುರೇಷೆ ಬಗ್ಗೆ ಮಾಹಿತಿ ನೀಡಿದರು. ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪೂರ್ಣ,ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್.ಪುಷ್ಪ, ಬಿ.ಆರ್.ಸಿ. ಎಂ.ವಿ.ಮಂಜೇಶ್, ಸಂಸ್ಥೆಯ ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಪಿ.ಪಿ.ಗಾಯತ್ರಿ, ಸಿ.ಆರ್.ಪಿ.ಗಳಾದ ಕೆ.ಶಾಂತಕುಮಾರ್, ಟಿ.ಈ.ವಿಶ್ವನಾಥ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಎಸ್. ಮಹೇಂದ್ರ , ಶಾಲಾ ಶಿಕ್ಷಕರು ಇದ್ದರು.









