
ಮಡಿಕೇರಿ ಮಾ.27 NEWS DESK : ಪಂಚ ಗ್ಯಾರಂಟಿ ಯೋಜನೆಯ ಎಲ್ಲಾ ಪ್ರಯೋಜನಗಳು ಫಲಾನುಭವಿಗಳಿಗೆ ದೊರಕಬೇಕಾದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಹೇಳಿದ್ದಾರೆ. ನಗರದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ನಡೆದ ಮಡಿಕೇರಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38,271 ಪಡಿತರ ಚೀಟಿದಾರರು ಇದ್ದು, ಇವರಿಗೆ ಈಗಾಗಲೇ ಪ್ರಸ್ತುತ ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ ವಿಳಾಸ ಬದಲಾವಣೆ, ಹೆಸರು ಸೇರ್ಪಡೆ ಮತ್ತು ಹೆಸರು ತೆಗೆದು ಹಾಕುವುದಕ್ಕೆ ಅರ್ಜಿ ಸಲ್ಲಿಸಲು ಮಾ.31 ರ ವರೆಗೆ ಅವವಕಾಶ ಕಲ್ಪಿಸಲಾಗಿದೆ ಎಂದು ಆಹಾರ ನಿರೀಕ್ಷಕರಾದ ವೀಣಾ ಅವರು ಸಭೆಗೆ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ ಅವರು ಮಾತನಾಡಿ, ಮಡಿಕೇರಿ ತಾಲ್ಲೂಕಿನಲ್ಲಿ ಶೇಕಡವಾರು ಸಾಧನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಮಿತಿ ಸದಸ್ಯರಾದ ಪ್ರಭು ರೈ ಅವರು ಮಾತನಾಡಿ, ನಗರದಲ್ಲಿ ಅಡುಗೆ ಅನಿಲ ಸರಬರಾಜುದಾರ ಏಜೆನ್ಸಿಯೊಂದು ಒಂದೇ ಹೋಟೆಲ್ಗೆ 20 ಅಡುಗೆ ಅನಿಲ ಪೂರೈಕೆ ಮಾಡಿದ್ದು, ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನಿಸಿದರು. ಮತ್ತೋರ್ವ ಸಮಿತಿ ಸದಸ್ಯ ಬಿ.ಜಿ.ಕುಟ್ಟಪ್ಪ ಮಾತನಾಡಿ, ಅಧಿಕಾರಿಗಳು ನಿರಂತರವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಮೂಲಕ ಗ್ರಾಹಕರಿಗೆ ವಂಚನೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು. ಆಹಾರ ನಿರೀಕ್ಷಕರಾದ ವೀಣಾ ಅವರು ಮಾತನಾಡಿ, ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರು ಮಾತನಾಡಿ, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಳಸಂತೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಅಕ್ರಮ ಮಾರಾಟವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ತಾ.ಪಂ.ಇಒ ಶೇಖರ್ ಅವರು ಮಾತನಾಡಿ, ಈ ಬಗ್ಗೆ ಶೀಘ್ರ ಕ್ರಮ ಕೈಗೊಂಡು ಅಡುಗೆ ಅನಿಲ ಎಜೆನ್ಸಿಗಳಲ್ಲಿ ವಂಚನೆ ಕಂಡುಬಂದಲ್ಲಿ ಎಸ್ಮಾ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು. ಶಕ್ತಿ ಯೋಜನೆ ಕುರಿತು ಮಾತನಾಡಿದ ಕೆಎಸ್ಆರ್ಟಿಸಿ ಮಡಿಕೇರಿ ಘಟಕದ ಪ್ರತಿನಿಧಿ ಅವರು ಬೆಂಗಳೂರಿನಿಂದ ಮಂಗಳೂರಿಗೆ ರಾತ್ರಿ ವೇಳೆ ತೆರಳುವ ಕೆಎಸ್ಆರ್ಟಿಸಿ ಬಸ್ಗಳು ಬಸ್ ನಿಲ್ದಾಣಕ್ಕೆ ತೆರಳದೆ ಟೋಲ್ಗೇಟ್ನಲ್ಲಿ ಪ್ರಯಾಣಿಕರನ್ನು ಇಳಿಸಿ ಮಂಗಳೂರಿಗೆ ತೆರಳುತ್ತಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಮಿತಿ ಸದಸ್ಯರಾದ ಪ್ರಭು ರೈ ಪ್ರಶ್ನಿಸಿದರು. ಗ್ಯಾರಂಟಿ ಯೋಜನಾ ಅನುಷ್ಠಾನ ತಾಲ್ಲೂಕು ಸಮಿತಿ ಅಧ್ಯಕ್ಷರು ಮಾತನಾಡಿ, ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಬಸ್ಗಳು ಸರಿಯಾದ ಸಮಯಕ್ಕೆ ಸಂಚರಿಸುವಂತಾಗಬೇಕು ಎಂದರು. ಕಾಟಕೇರಿ ಜೋಡುಪಾಲ ಬಳಿ ಬಸ್ ನಿಲ್ಲಿಸುತ್ತಿಲ್ಲ ಎಂಬ ದೂರುಗಳಿದ್ದು, ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಪರಿಹರಿಸುವಂತಾಗಬೇಕು ಎಂದರು. ಯುವನಿಧಿಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಫೆಬ್ರವರಿ 2026ರ ಅಂತ್ಯದವರೆಗೆ ಒಟ್ಟು 592 ಮಂದಿ ನೋಂದಣಿಯಾಗಿದ್ದು, 4454 ಪದವಿದರರು, 66 ಮಂದಿ ಡಿಪ್ಲೋಮಾ ವಿದ್ಯಾರ್ಥಿಗಳು ಸೇರಿದಂತೆ ಹಲವರು ಯುವ ನಿಧಿ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಸಂಬಂದಪಟ್ಟ ಅಧಿಕಾರಿಗಳು ವಿವರಿಸಿದರು. ಅಲ್ಲದೇ ಯುವ ನಿಧಿ ಕುರಿತು ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಸಿಬ್ಬಂದಿ ಗಣೇಶ್ ಅವರು ಮಾಹಿತಿ ನೀಡಿದರು. ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಮಾತನಾಡಿ ಯಾವುದೇ ಫಲಾನುಭಗಳಿಗೆ ಯಾವುದೇ ತೊಂದರೆಯಾದಂತೆ ನೋಡಿಕೊಳ್ಳುವಂತೆ ಸಲಹೆ ನೀಡಿದರು. ಗೃಹಜ್ಯೋತಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಸೆಸ್ಕ್ ಎಇಇ ವಿನಯ್ ಕುಮಾರ್ ಅವರು ಮಡಿಕೇರಿ ತಾಲ್ಲೂಕಿನಲ್ಲಿ ಹಲವು ವಿದ್ಯುತ್ ಸ್ಥಾವರಗಳಿದ್ದು, ಶೇ.98.94ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸದಸ್ಯರಾದ ಫ್ಯಾನ್ಸಿ ಪಾರ್ವತಿ, ರಾಜೇಶ್ವರಿ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಬಗ್ಗೆ ಹಲವು ಮಾಹಿತಿ ನೀಡಿದರು.









