
ಮಡಿಕೇರಿ ಮಾ.30 NEWS DESK : ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಸಂಸ್ಥೆಯ ಮೂಲ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಮತ್ತು ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಶ್ರೇಷ್ಠತೆಯನ್ನು ಸಾಧಿಸಲು ಶ್ರಮಿಸಬೇಕೆಂದು ಸೈನಿಕ ಶಾಲೆಗಳು, ರಾಷ್ಟ್ರೀಯ ಮಿಲಿಟರಿ ಶಾಲೆಗಳು ಮತ್ತು ಆರ್ಐಎಂಸಿ ನಿರ್ದೇಶಕರಾದ ಕೆ.ವಿ.ಅಜಿತ್ ಕರೆ ನೀಡಿದರು. ಕೂಡಿಗೆ ಕೊಡಗು ಸೈನಿಕ ಶಾಲೆಗೆ ತಮ್ಮ ಚೊಚ್ಚಲ ಭೇಟಿ ನೀಡಿದ ಅಜಿತ್ ಅವರು, ಈ ಸಂದರ್ಭ ಆಯೋಜಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಸೈನಿಕ ಶಾಲೆಯ ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ತಲುಪುವ ನಿಟ್ಟಿನಲ್ಲಿ ತಮಗೆ ದೊರಕುವ ಯಾವುದೇ ಅವಕಾಶವನ್ನು ವ್ಯರ್ಥ ಮಾಡುವುದಿಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಯುಪಿಎಸ್ಸಿ, ಎನ್ಡಿಎ ಪರೀಕ್ಷೆಗಳು, ಬೋರ್ಡ್ ಪರೀಕ್ಷೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸೈನಿಕ ಶಾಲಾ ವಿದ್ಯಾರ್ಥಿಗಳು ಸಾಧಿಸಿದ ಅಭೂತಪೂರ್ವ ಯಶಸ್ಸನ್ನು ಅವರು ಶ್ಲಾಘಿಸಿದರು. ಕೊಡಗು ಸೈನಿಕ ಶಾಲೆಯ ಪ್ರಾಂಶುಪಾಲರಾದ ಕರ್ನಲ್ ಅಮರ್ ಜೀತ್ ಸಿಂಗ್ ಅವರು, ಶಾಲೆಗೆ ಭೇಟಿಯನ್ನಿತ್ತ ಕೆ.ವಿ.ಅಜಿತ್ ಅವರಿಗೆ ಧನ್ಯವಾದ ಅರ್ಪಿಸಿ, ಶಾಲೆಯಲ್ಲಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾರ್ಯಗಳು ಮತ್ತು ಚಟುವಟಿಕೆಗಳ ಕುರಿತು ವಿವರವಾದ ಮಾಹಿತಿ ನೀಡಿದರು.
ಅಶ್ವ ದಳದ ಸ್ವಾಗತ- ಶಾಲೆಯ ಅಶ್ವದಳದಿಂದ ಮುಖ್ಯ ಅತಿಥಿ ಕೆ.ವಿ.ಅಜಿತ್ ಅವರನ್ನು ಸ್ವಾಗತಿಸಲಾಯಿತು. ನಂತರ ಅಜಿತ್ ಅವರು ಶಾಲೆಯ ಆವರಣದ ಯುದ್ಧ ವೀರರ ಸ್ಮಾರಕಕ್ಕೆ ಪುಷ್ಪಗುಚ್ಛವನ್ನು ಸಮರ್ಪಿಸುವುದರ ಮೂಲಕ ಗೌರವ ವಂದನೆ ಸಲ್ಲಿಸಿದರು. ಬಳಿಕ ಶಾಲೆಯ ಪರೇಡ್ ಮೈದಾನದಲ್ಲಿ ಅವರಿಗೆ ಗೌರವ ವಂದನೆ ಅರ್ಪಿಸಲಾಯಿತು. ಈ ಸಂದರ್ಭ ಶಾಲೆಯ ಕುವೆಂಪು ವಿವಿಧೋದ್ದೇಶ ಸಭಾಂಗಣದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಅತ್ಯಾಕರ್ಷಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಸಭಾ ಕಾರ್ಯಕ್ರಮದ ಬಳಿಕ ಕೆ.ವಿ.ಅಜಿತ್ ಅವರು ಶಾಲಾ ಆವರಣದ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದರು.ಈ ಸಂದರ್ಭ ಪ್ರಾಂಶುಪಾಲರು ವಿವಿಧ ಚಟುವಟಿಕೆಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತಾಧಿಕಾರಿ ವಿಂಗ್ ಕಮಾಂಡರ್ ಪಿ.ಪ್ರಕಾಶ್ ರಾವ್, ಉಪ ಪ್ರಾಂಶುಪಾಲರಾದ ವಿಂಗ್ ಕಮಾಂಡರ್ ಮೊಹಮ್ಮದ್ ಶಾಜಿ, ಹಿರಿಯ ಶಿಕ್ಷಕರು, ಬೋಧಕ ವರ್ಗ, ಆಡಳಿತ ಮಂಡಳಿ ಸಿಬ್ಬಂದಿ ಮತ್ತು ಶಾಲೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









