
ಮಡಿಕೇರಿ ಏ.18 NEWS DESK : ಮಹಿಳಾ ಮೀಸಲು ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆ ಜಗಜ್ಜಾಹೀರಾಗಿದ್ದು, ಅದರ ಮುಖವಾಡ ಕಳಚಿಬಿದ್ದಿದೆ ಎಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಪ್ರಮುಖರು ಕೇಂದ್ರದ ಬಿಜೆಪಿ ನೇತೃತ್ವದ ಎನ್ಡಿಎ ಸರಕಾರ ಮಹಿಳೆಯರಿಗೆ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ.33 ಮೀಸಲಾತಿಯನ್ನು ನೀಡಲು ಮಸೂದೆಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಸಂದರ್ಭ ಕಾಂಗ್ರೆಸ್ ನೇತೃತ್ವದ ಮಹಿಳಾ ವಿರೋಧಿ ಇಂಡಿಯಾ ಕೂಟ ಅಡ್ಡಿಪಡಿಸಿ ಅದಕ್ಕೆ ಸೋಲಾಗುವಂತೆ ನಡೆದುಕೊಂಡಿದೆ. ಇದು ಕಾಂಗ್ರೆಸ್ ನ ಮಹಿಳಾ ವಿರೋಧಿ ಧೋರಣೆಗಳನ್ನು ಸ್ಪಷ್ಟಪಡಿಸಿದೆ ಎಂದು ಟೀಕಿಸಿದರು.
ರಾಷ್ಟ್ರದ ಜನತೆ ಅದರಲ್ಲೂ ಪ್ರಮುಖವಾಗಿ ಮಹಿಳೆಯರು ಕಾಂಗ್ರೆಸ್ ನ ಈ ಧೋರಣೆಯನ್ನು ವಿರೋಧಿಸುವ ಮೂಲಕ ಮುಂದಿನ ಚುನಾವಣೆಗಳಲ್ಲಿ ಇವರಿಗೆ ತಕ್ಕ ಪಾಠವನ್ನು ಕಲಿಸಲಿದ್ದಾರೆ ಎಂದು ತಿಳಿಸಿದರು. *ವಿಕೇಂದ್ರೀಕರಣ ಬುಡಮೇಲು* ರಾಜ್ಯ ಕಾಂಗ್ರೆಸ್ ಸರಕಾರ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸದೆ ಅಧಿಕಾರ ವಿಕೇಂದ್ರೀಕರಣ ನೀತಿಯನ್ನು ಬುಡಮೇಲು ಮಾಡಲು ಮುಂದಾಗಿದೆ. ಎಲ್ಲಾ ಸ್ಥಳಿಯ ಸಂಸ್ಥೆಗಳ ಅನುದಾನಗಳ ಹಂಚಿಕೆ ಹಾಗೂ ಅಭಿವೃದ್ಧಿ ಕೆಲಸಗಳನ್ನು ಶಾಸಕರುಗಳು ನಿರ್ವಹಿಸುತ್ತಿರುವುದನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಹೇಳಿದರು. ಸರಕಾರದ ಧೋರಣೆಯನ್ನು ಖಂಡಿಸಿ ಜಿಲ್ಲೆಯ ಮೂರು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು. ಏ.24 ರಂದು ಮಡಿಕೇರಿ ತಾ.ಪಂ ಹಾಗೂ ಏ.27 ರಂದು ಸೋಮವಾರಪೇಟೆ ಮತ್ತು ಪೊನ್ನಂಪೇಟೆ ಕಚೇರಿ ಎದುರು ಪ್ರತಿಭಟನೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಬಿ.ಕೆ.ಅರುಣ್ ಕುಮಾರ್ ಹಾಗೂ ಮಹಿಳಾ ಬಿಜೆಪಿ ನಗರಾಧ್ಯಕ್ಷೆ ಸೌಮ್ಯ ಸುನಿಲ್ ಉಪಸ್ಥಿತರಿದ್ದರು.









