

ಮಡಿಕೇರಿ NEWS DESK ಜೂ.19 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕೊಡಗು ಜಿಲ್ಲಾ ಪ್ರತಿನಿಧಿ ಸಭೆ ಮಡಿಕೇರಿಯಲ್ಲಿ ನಡೆಯಿತು. ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ಪ್ರಮುಖ ನಿರ್ಣಯಗಳನ್ನು ಮಂಡಿಸಿದ ಸಭೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರವನ್ನು ಒತ್ತಾಯಿಸಿತು. ನಗರದ ಕೂರ್ಗ್ ಕಮ್ಯುನಿಟಿ ಹಾಲ್ ನಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರ ಅಧ್ಯಕ್ಷತೆಯಲ್ಲಿ, ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ ಹಾಗೂ ಜಿಲ್ಲಾ ಉಸ್ತುವಾರಿ ಅಥಾವುಲ್ಲಾ ಜೋಕಟ್ಟೆ ಅವರ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಮುಂದಿನ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಚುನಾವಣೆಗಳಲ್ಲಿ ಎಸ್ಡಿಪಿಐ ಸ್ಪರ್ಧಿಸಲು ನಿರ್ಧರಿಸಲಾಯಿತು ಮತ್ತು ಹಲವು ರಾಜಕೀಯ ಪ್ರಗತಿಯ ಕುರಿತು ಚರ್ಚಿಸಲಾಯಿತು. ಸಿ ಮತ್ತು ಡಿ ಜಮೀನುಗಳನ್ನು ಅರಣ್ಯ ಇಲಾಖೆ ಸೆಕ್ಷನ್-4ರ ಅಡಿಯಲ್ಲಿ ತಂದು ರೈತರಿಗೆ ನೋಟಿಸ್ ಜಾರಿ ಮಾಡಿದೆ. ಈ ವಿಚಾರವಾಗಿ ರಾಜ್ಯ ಸರಕಾರ ನಿಯೋಜನೆ ಮಾಡಿರುವ ಸಮಿತಿಯು ನಿಗಧಿತ ಅವಧಿಯೊಳಗೆ ವರದಿಯನ್ನು ಸರಕಾರಕ್ಕೆ ಸಲ್ಲಿಸದೆ ಬೇಜವಾಬ್ದಾರಿಯಿಂದ ವರ್ತಿಸಿದೆ. ಶಾಸಕದ್ವಯರು ಹಾಗೂ ಸರಕಾರ ತಕ್ಷಣ ಮಧ್ಯ ಪ್ರವೇಶಿಸಿ ರೈತರ ಈ ಸಮಸ್ಯೆಗೆ ಪರಿಹಾರ ಸೂಚಿಸಬೇಕು. ವನ್ಯಜೀವಿ ಹಾಗೂ ಮಾನವ ಸಂಘರ್ಷದಿoದ ಜಿಲ್ಲೆಯಲ್ಲಿ ದಶಕಗಳಿಂದ ಸಮಸ್ಯೆ ಮುಂದುವರೆದಿದೆ. ಆದರೆ ಶಾಸಕದ್ವಯರು ಹಾಗೂ ಸರಕಾರ ಶಾಶ್ವತ ಪರಿಹಾರ ಜಾರಿಗೆ ತರುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ತಾತ್ಕಾಲಿಕ ಪರಿಹಾರ ನೀಡಿ ಜವಾಬ್ದಾರಿಯಿಂದ ನುಣುಚಿಕೊಳ್ಳದೆ, ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ತಪ್ಪಿದಲ್ಲಿ ರೈತರನ್ನು ಒಗ್ಗೂಡಿಸಿ ಶಾಸಕರುಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ವನ್ಯಜೀವಿ ಹಾಗೂ ಮಾನವ ಸಂಘರ್ಷದಿAದ ಮರಣ ಹೊಂದಿದ ಕುಟುಂಬದ ಸದಸ್ಯರಿಗೆ ಸರಕಾರಿ ಉದ್ಯೋಗ ನೀಡಬೇಕು. ಕೊಡಗಿನ ವಿದ್ಯಾವಂತ ಯುವಕ ಹಾಗೂ ಯುವತಿಯರಿಗಾಗಿ ಐ.ಎ.ಎಸ್ ಮತ್ತು ಕೆ.ಎ.ಎಸ್ ತರಬೇತಿ ಕೇಂದ್ರವನ್ನು ಸ್ಥಾಪಿಸಬೇಕು. ತೋಟದ ಲೈನ್ ಮನೆಗಳಲ್ಲಿ ಬದುಕು ಸಾಗಿಸುತ್ತಿರುವ ಕಾರ್ಮಿಕರನ್ನು ಗುರುತಿಸಿ ವಸತಿ ಮತ್ತು ನಿವೇಶನ ಸೌಲಭ್ಯ ದೊರಕಿಸಿ ಕೊಡಬೇಕು. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ತುರ್ತು ಆರೋಗ್ಯ ತಪಾಸಣೆಗೆ ತೆರಳಲು ಸರಕಾರದ ವತಿಯಿಂದ ಉಚಿತ ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಬೇಕು. 50, 53, 57, 94 ಹಾಗೂ 94ಸಿಸಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ ಹಕ್ಕುಪತ್ರ ಮತ್ತು ಆರ್.ಟಿ.ಸಿ ನೀಡಬೇಕು. ಮಡಿಕೇರಿ ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡಬೇಕು. 15ನೇ ಹಣಕಾಸು ಯೋಜನೆಗೆ ಬೇಕಾದ ಅನುದಾನವನ್ನು ಸರಕಾರ ತ್ವರಿತವಾಗಿ ಬಿಡುಗಡೆ ಮಾಡಬೇಕು ಮತ್ತು 2ಬಿ ಮೀಸಲಾತಿ ಜಾರಿಗೆ ತರಬೇಕು ಎಂದು ಸಭೆ ಜಿಲ್ಲೆಯ ಶಾಸಕರನ್ನು ಹಾಗೂ ಸರಕಾರವನ್ನು ಒತ್ತಾಯಿಸಿತು.








