
ಮಡಿಕೇರಿ ಜು.13 NEWS DESK : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲಾ ಮಾನವ ಅಭಿವೃದ್ದಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ದಿ ಯೋಜನೆ-2031 ರ ವರದಿಗಳನ್ನು ಸಿದ್ದಪಡಿಸುವ ಸಂಬಂಧ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಸೋಮವಾರ ಸುಧೀರ್ಘ ಚರ್ಚೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೊಡಗು ಜಿಲ್ಲಾ ಪಂಚಾಯತ್ ಮಡಿಕೇರಿ ರವರಿಗೆ, ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹಾಗೂ ತಾಂತ್ರಿಕ ಬೆಂಬಲ ಸಂಸ್ಥೆಯ ಸಂಯೋಜಕರು, ಸಹ ಸಂಯೋಜಕರಿಗೆ ನವೀನ್ ಎ.ಬಿ.ಯೋಜನಾ ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ಅವರು ಸ್ವಾಗತ ಕೋರಿದರು. ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಮಾತನಾಡಿ ಯೋಜನಾ ಇಲಾಖೆಯ ನಿರ್ದೇಶನದಂತೆ ಈ ಬಾರಿ ಜಿಲ್ಲಾ ಯೋಜನಾ ಸಮಿತಿ ವತಿಯಿಂದ ಪ್ರಮುಖವಾಗಿ ಡಿಎಚ್ಡಿಆರ್-2025 ಹಾಗೂ ಐಎಸ್ಡಿಡಿಪಿ-2031 ರ ವರದಿಗಳನ್ನು ಸಿದ್ದಪಡಿಸಲು ಕ್ರಮವಹಿಸಲಾಗುತ್ತಿದೆ. ಈ ಸಂಬಂಧ ಈಗಾಗಲೇ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಗಳಿಂದ ಜಿಲ್ಲಾ ಮಟ್ಟದಲ್ಲಿ ತರಬೇತಿ ಕಾರ್ಯಗಾರ ಹಮ್ಮಿಕೊಂಡು ನಿಖರ ಹಾಗೂ ನಿರ್ದಿಷ್ಟವಾದ ದತ್ತಾಂಶಗಳನ್ನು ಒದಗಿಸುವ ಕುರಿತು ತರಬೇತಿ ನೀಡಲಾಗಿದೆ ಎಂದರು.
ಈ ವರದಿಗಳ ತಯಾರಿಕೆಗೆ ಸರ್ಕಾರದ ಆದೇಶದಂತೆ ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಮತ್ತು ಸಹಕಾರ ಅಧ್ಯಯನ ವಿಭಾಗದ ಅಧ್ಯಕ್ಷರು ಹಾಗೂ ಪ್ರಾಧ್ಯಾಪಕರಾದ ನವೀತ್ ತಿಮ್ಮಯ್ಯ ಅವರ ತಂಡ ಹಾಗೂ ಮೈಸೂರಿನ ಉಖಂಂಒ ಸಂಸ್ಥೆಗಳನ್ನು ತಾಂತ್ರಿಕ ಬೆಂಬಲ ಸಂಸ್ಥೆಗಳಾಗಿ ಆಯ್ಕೆ ಮಾಡಲಾಗಿದೆ. ಈ ಸಂಸ್ಥೆಯವರು ಸಹ ಈಗಾಗಲೇ ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ತರಬೇತಿ ನೀಡಿರುತ್ತಾರೆ. ಮುಂದುವರೆದು ದತ್ತಾಂಶಗಳನ್ನು ಸಮರ್ಪಕವಾಗಿ ಒದಗಿಸುವ ಕುರಿತು ಈಗಾಗಲೇ ಹಲವಾರು ಬಾರಿ ಜಿಲ್ಲಾ ಮಟ್ಟದ ವಲಯವಾರು ಉಪ ಸಮಿತಿ ಸಭೆ ನಡೆಸಿ ಇಲಾಖಾಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು. ಕೊಡಗು ಜಿಲ್ಲಾ ಮಾನವ ಅಭಿವೃದ್ದಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ದಿ ಯೋಜನೆ – 2031 ವರದಿಗಳಿಗೆ ಸಂಬಂಧಿಸಿದಂತೆ ಸರ್ಕಾರದಿಂದ 232 ಸೂಚಕಗಳನ್ನು ನಿಗದಿಪಡಿಸಲಾಗಿದ್ದು, ನಿಗದಿಪಡಿಸಲಾದ ಸೂಚಕಗಳಿಗೆ ಸಂಬಂಧಿಸಿದ ದತ್ತಾಂಶವನ್ನು ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಒದಗಿಸಿರುತ್ತಾರೆ. ಈ ಮಾಹಿತಿಯನ್ನು ದತ್ತಾಂಶವಾರು ಪರಿಶೀಲಿಸಲಾಗಿದೆ ಎಂದು ತಾಂತ್ರಿಕ ಬೆಂಬಲ ಸಂಸ್ಥೆಗಳ ಸಹ ಸಂಯೋಜಕರಾದ ಮಲ್ಲಿಕಾರ್ಜುನ ಸ್ವಾಮಿ, GRAAM ಸಂಸ್ಥೆ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನವೀತ ತಿಮ್ಮಯ್ಯ, ಸಭೆಯಲ್ಲಿ ವಿವರಿಸಿ ಈ ದತ್ತಾಂಶಗಳಿಗೆ ಸಭೆಯ ಅನುಮೋದನೆ ಕೋರಿದರು. ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ದಿ ಯೋಜನೆ 2031 ರ ವರದಿಗೆ ಸಂಬಂಧಿಸಿದಂತೆ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರ ಸಮಸ್ಯೆಗಳು ಮತ್ತು ಸವಾಲುಗಳು, ಮಕ್ಕಳ ಪ್ರಾರಂಭಿಕ ಬಾಲ್ಯದ ಆರೈಕೆ ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ, ಮಾನವ ವನ್ಯ ಜೀವಿ ಸಂಘರ್ಷ, ಮಡಿಕೇರಿ ನಗರ ಸಭಾ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ನಿರ್ವಹಣೆ, ಕೊಡಗು ಜಿಲ್ಲೆಯ ನೈಸರ್ಗಿಕ ವಿಕೋಪ ಪೀಡಿತ ಗ್ರಾಮ ಪಂಚಾಯಿತಿಗಳಲ್ಲಿ ವಿಪತ್ತು ನಿರ್ವಹಣೆ, ಸುಸ್ಥಿರ ಮತ್ತು ಪರಿಸರ ಸ್ನೇಹಿ ಪ್ರವಾಸೋದ್ಯಮ ಅಭಿವೃದ್ದಿ, ಕುರಿತಂತೆ 6 ವಿಷಯಗಳಿಗೆ ಸಂಬಂಧಿಸಿದಂತೆ ಕೇಸ್ ಸ್ಟಡಿ ವರದಿಗಳನ್ನು ಅಳವಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಹಾಗೂ ಸರ್ಕಾರದ ನಿರ್ದೇಶನದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಅಭಿವೃದ್ದಿಯ ಮೇಲಿನ ಪರಿಣಾಮಗಳ ಕುರಿತು ವರದಿಯನ್ನು ಮಾನವ ಅಭಿವೃದ್ದಿ ವರದಿಯಲ್ಲಿ ಅಳವಡಿಸಲು ತೀರ್ಮಾನಿಸಲಾಯಿತು. ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಮಾತನಾಡಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಸಮರ್ಪಕ ದತ್ತಾಂಶಗಳನ್ನು ಒದಗಿಸಬೇಕು. ಜಿಲ್ಲೆಯ ನೈಜ ಚಿತ್ರಣವನ್ನು ಒಳಗೊಂಡಂತೆ ವರದಿಗಳನ್ನು ಸಿದ್ದಪಡಿಸಬೇಕು. ಕೊಡಗು ಜಿಲ್ಲೆಯಲ್ಲಿ ಕಂಡುಬರುವ ವಿವಿಧ ಸಮಸ್ಯೆಗಳು ಹಾಗೂ ಸವಾಲುಗಳು ಹಾಗೂ ಪರಿಹಾರೋಪಾಯಗಳನ್ನು ಒಳಗೊಂಡಂತೆ ವಾಸ್ತವಿಕ ವರದಿಯನ್ನು ಸಿದ್ದಪಡಿಸುವಂತೆ ತಾಂತ್ರಿಕ ಬೆಂಬಲ ಸಂಸ್ಥೆಗಳ ಸಂಯೋಜಕರಿಗೆ ಸೂಚಿಸಿದರು. ಸಭೆಯಲ್ಲಿ ಜಿ.ಪಂ.ಮುಖ್ಯ ಯೋಜನಾಧಿಕಾರಿ ಅಬ್ದುಲ್ ನಭಿ, ಟಿ.ಎನ್. ಯೋಜನಾ ನಿರ್ದೇಶಕರಾದ ಜೀವನ್ ಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕರಾದ ಶಾಂತಗೌಡ ಗುಣಕಿ, ಲೀಡ್ ಬ್ಯಾಂಕ್ ಮ್ಯಾನೇಜರ್ ಗಂಗಾಧರ ನಾಯ್ಕ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳು, ಪೌರಾಯುಕ್ತರು, ನಗರ ಸಭೆ ರವರು ಸಭೆಯಲ್ಲಿ ಭಾಗವಹಿಸಿದ್ದರು.









