
ವಿರಾಜಪೇಟೆ ಜು.22 NEWS DESK : ವಿರಾಜಪೇಟೆ ಕಾವೇರಿ ಪದವಿಪೂರ್ವ ಕಾಲೇಜಿನ 2026-2027ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ವೈಭವದಿಂದ ನೆರವೇರಿತು. ಸಮಾರಂಭದಲ್ಲಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿಸಿ, ಪ್ರತಿಜ್ಞಾವಿಧಿ ಬೋಧಿಸಿದ ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪಿ.ಆರ್. ವಿಜಯ್ ಅವರು ಮಾತನಾಡಿ, “ವಿದ್ಯಾರ್ಥಿಗಳು ಉತ್ತಮ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಹೆತ್ತವರು ತಮ್ಮ ಕನಸುಗಳನ್ನು ಮಕ್ಕಳ ಕಣ್ಣುಗಳಲ್ಲಿ ಕಾಣುತ್ತಾರೆ. ಹಾಗಾಗಿ ಅವರಿಗೆ ನೋವು ಉಂಟುಮಾಡದೆ ಅವರ ಆಸೆ-ಕನಸುಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಗುರುಗಳಿಗೆ ಸದಾ ಗೌರವ ನೀಡಿ, ಅವರ ಮಾರ್ಗದರ್ಶನದಲ್ಲಿ ನಡೆದು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು,” ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಗೋಣಿಕೊಪ್ಪಲಿನ ಕಾವೇರಿ ಎಜುಕೇಶನ್ ಸೊಸೈಟಿಯ ಗೌರವ ಕಾರ್ಯದರ್ಶಿ ಕುಲ್ಲಚಂಡ ಪಿ. ಬೋಪಣ್ಣ ಅವರು ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಮುಂದಿನ 5 ವರ್ಷಗಳ ಕಾಲ ಗುರುಗಳ ಸಲಹೆ-ಮಾರ್ಗದರ್ಶನ ಪಡೆಯುವುದು ಅಗತ್ಯ. ಪ್ರಚಲಿತ ವಿದ್ಯಮಾನಗಳನ್ನು ಅಭ್ಯಾಸ ಮಾಡಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಬೇಕು. ಜೀವನದಲ್ಲಿ ಶಿಸ್ತು, ಸಮಯ ಪರಿಪಾಲನೆ, ಹಿರಿಯರಿಗೆ ಗೌರವ ಹಾಗೂ ನಾಯಕತ್ವ ಮತ್ತು ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಂಡಾಗ ಮಾತ್ರ ಶಿಕ್ಷಣಕ್ಕೆ ನೈಜ ಅರ್ಥ ಸಿಗುತ್ತದೆ,” ಎಂದರು. :: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ :: 2025-2026ನೇ ಶೈಕ್ಷಣಿಕ ಸಾಲಿನಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ವಾಣಿಜ್ಯ ವಿಭಾಗದಲ್ಲಿ ಕೊಡಗು ಜಿಲ್ಲೆಗೆ ತೃತೀಯ ಸ್ಥಾನ ಗಳಿಸಿದ ಫರೀದಾ ಎಂ. ಎಸ್. ಹಾಗೂ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಚೈತ್ರ ಬಿ. ಎಸ್., ಮಾನ್ವಿ ಎಂ.ಎಸ್. ಮತ್ತು ಪ್ರತೀಕ್ಷಾ ವಿ.ಪಿ. ಅವರನ್ನು ಸನ್ಮಾನಿಸಲಾಯಿತು. :: ಸಂಯೋಜನೆ ಮತ್ತು ವಂದನೆ :: ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ನಕಿಯಾ ಭಾನು, ಪದವಿ ಕಾಲೇಜಿನ ಪ್ರಾಂಶುಪಾಲರು, ಪ.ಪೂ. ಕಾಲೇಜಿನ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ವೀಣಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಎಂ.ಕೆ.ಪದ್ಮ ಸ್ವಾಗತಿಸಿದರು. ಕನ್ನಡ ಉಪನ್ಯಾಸಕಿ ಎಂ.ಪಿ.ದಮಯಂತಿ ಅತಿಥಿಗಳನ್ನು ಪರಿಚಯಿಸಿದರು. ವೀಣಾ, ಆವಂದಿ, ಆಶೀತಾ ಹಾಗೂ ಕೆ.ಪಿ.ಗಾಯತ್ರಿ ತಿಮ್ಮಯ್ಯ ಕಾರ್ಯಕ್ರಮ ನಿರೂಪಿಸಿದರು. ಡೈನಾ ಸೋಮಯ್ಯ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.









