
ಮಡಿಕೇರಿ NEWS DESK ಜು.29 : ಕೊನೆಗೂ ಮಡಿಕೇರಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ರಸ್ತೆ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಆದರೆ ರಸ್ತೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಮೂರು ವಾರಗಳ ಹಿಂದೆ ಸುರಿದ ಭಾರೀ ಮಳೆಗೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ರಸ್ತೆಯ ಇಳಿಜಾರು ಭಾಗ ಕುಸಿತಗೊಂಡಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಅಂದಿನಿ0ದ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರಸ್ತೆ ದುರಸ್ತಿ ಕಾರ್ಯ ವಿಳಂಬದಿ0ದಾಗಿ ನಗರದಲ್ಲಿ ವಾಹನದಟ್ಟಣೆ ಎದುರಾಗಿ ಸಂಚಾರ ವ್ಯವಸ್ಥೆ ಅಸ್ತವ್ಯವಸ್ತಗೊಂಡಿತ್ತು. ಇದು ವಾಹನ ಚಾಲಕರ, ವರ್ತಕರ ಹಾಗೂ ಸಾರ್ವಜನಿಕರ ಅಸಮಾಧಾನಕ್ಕೂ ಕಾರಣವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ನಗರಸಭೆ ಕಾಮಗಾರಿಯನ್ನು ಚುರುಕುಗೊಳಿಸಿತು. ಇನ್ನು ಒಂದು ವಾರದ ಕಾಮಗಾರಿ ಬಾಕಿ ಉಳಿದಿದೆ. ಈ ನಡುವೆ ವಾಹನದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಇಂದಿನಿ0ದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ರಸ್ತೆಯಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಸ್ ಸೇರಿದಂತೆ ಲಘು ವಾಹನಗಳು ಹಳೇ ಖಾಸಗಿ ಬಸ್ ನಿಲ್ದಾಣದಿಂದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಮಾರ್ಗವಾಗಿ ಸಂಚರಿಸಬಹುದಾಗಿದೆ. ನಿರ್ಗಮಿಸುವ ಎಲ್ಲಾ ವಾಹನಗಳು ಈಗಿರುವ ತಾತ್ಕಾಲಿಕ ವ್ಯವಸ್ಥೆಯಂತೆ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ರಸ್ತೆ, ಕೊಹಿನೂರು ರಸ್ತೆ, ಕೈಗಾರಿಕಾ ಬಡಾವಣೆ ಮೂಲಕ ಸಾಗಬೇಕಾಗಿದೆ. ಇಂದು ರಸ್ತೆ ದುರಸ್ತಿ ಕಾರ್ಯವನ್ನು ಪರಿಶೀಲಿಸಿದ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಅವರು ಮಾತನಾಡಿ ಇನ್ನು ಒಂದು ವಾರದೊಳಗೆ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಲ್ಲಿಯವರೆಗೆ ಸಾರ್ವಜನಿಕರು ಹಾಗೂ ವಾಹನ ಚಾಲಕರು ಸಹಕರಿಸುವಂತೆ ಮನವಿ ಮಾಡಿದರು. ನಗರಸಭೆಯ ಆಡಳಿತ ಪಕ್ಷ ಬಿಜೆಪಿಯ ಸದಸ್ಯರು ಹಾಗೂ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.









