
ಮಡಿಕೇರಿ NEWS DESK ಜು.30 : ಸೋಮವಾರಪೇಟೆ ತಾಲ್ಲೂಕಿನ ಬಿಳಿಗೇರಿ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಮರ ಬಿದ್ದು ಮೃತಪಟ್ಟ ಕಾರ್ಮಿಕ ಮಹಿಳೆಯರಾದ ಪರ್ಬಿನ ಖಾತುನ್ (29) ಹಾಗೂ ಅಲಿಮಾನ್ (48) ಅವರ ಕುಟುಂಬಕ್ಕೆ ತೋಟದ ಮಾಲೀಕರು ವಿಳಂಬವಲ್ಲದೆ ಪರಿಹಾರ ನೀಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ನ ಕೊಡಗು ಜಿಲ್ಲಾಧ್ಯಕ್ಷ ಕೆ.ಹೆಚ್.ಅಣ್ಣ ಷರೀಫ್ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂ.ಎ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಹೊಟ್ಟೆಪಾಡಿಗಾಗಿ ಹೊರ ರಾಜ್ಯದಿಂದ ಬಂದು ಕಾಫಿ ತೋಟದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಬಡ ಮಹಿಳೆಯರು ದಾರುಣ ಅಂತ್ಯ ಕಂಡಿದ್ದಾರೆ. ಉಳಿದ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದ ಮಾಲೀಕರು ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಸೂಕ್ತ ಪರಿಹಾರವನ್ನು ನೀಡಬೇಕು. ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸಬೇಕು ಎಂದು ಆಗ್ರಹಿಸಿದ್ದಾರೆ. ಪರಿಹಾರ ನೀಡುವಲ್ಲಿ ವಿಳಂಬ ಧೋರಣೆ ತಾಳಿದರೆ ಎಸ್ಡಿಟಿಯು ಪ್ರತಿಭಟನೆಯನ್ನು ನಡೆಸಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರಕಾರ ಕೂಡ ಮೃತರ ಕುಟುಂಬಗಳಿಗೆ ಪರಿಹಾರವನ್ನು ನೀಡಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಕ್ಷೇತ್ರದ ಶಾಸಕರು ಸರಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕೆ.ಹೆಚ್.ಅಣ್ಣ ಷರೀಫ್ ಹಾಗೂ ಅಬ್ದುಲ್ ರಜಾಕ್ ಎಂ.ಎ ಒತ್ತಾಯಿಸಿದ್ದಾರೆ.










