
ವಿರಾಜಪೇಟೆ ಜು.30 NEWS DESK : ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಪರಿಪಾಠವು ಪ್ರತಿಯೊಂದು ಮನೆಗಳಿಂದಲೇ ಆರಂಭವಾಗಬೇಕು. ಮನೆಯಲ್ಲೇ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿದರೆ ಸಮಾಜದಲ್ಲೂ ಸ್ವಚ್ಛ ಪರಿಸರ ನಿರ್ಮಾಣ ಸಾಧ್ಯ ಎಂದು ವಿರಾಜಪೇಟೆ ತಹಶೀಲ್ದಾರ್ ಪ್ರವೀಣ್ ಕುಮಾರ್ ಹೇಳಿದರು. ವಿರಾಜಪೇಟೆ ತಾಲೂಕು ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ವಿರಾಜಪೇಟೆ ಪತ್ರಕರ್ತರ ವೇದಿಕೆ, ನ್ಯೂಸ್ 3 ಡಿಜಿಟಲ್ ಮೀಡಿಯಾ ಹಾಗೂ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ಎಸ್ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕಗಳ ಸಹಯೋಗದಲ್ಲಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ತಮ್ಮ ಮನೆ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಗಿಡಗಳನ್ನು ನೆಡುವ ಮಹತ್ವದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ಗಿಡಗಳನ್ನು ನೆಡುವುದಷ್ಟೇ ಅಲ್ಲ, ಅವುಗಳ ಪಾಲನೆ-ಪೋಷಣೆ ಮಾಡುವುದೂ ಅಷ್ಟೇ ಮುಖ್ಯ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ವಿರಾಜಪೇಟೆ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್ ಮಾತನಾಡಿ, ಪರಿಸರ ಜಾಗೃತಿ ಮೂಡಿಸುವಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳ ಪಾತ್ರ ಶ್ಲಾಘನೀಯವಾಗಿದೆ. ಮರಗಳನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರಾದ ರೆ.ಫಾ.ಮದಲೈ ಮುತ್ತು ಮಾತನಾಡಿ, ಭೂಮಿಯನ್ನು ರಕ್ಷಿಸಿದರೆ ಭೂತಾಯಿ ನಮ್ಮನ್ನು ರಕ್ಷಿಸುತ್ತಾಳೆ. ಪರಿಸರವನ್ನು ಕಲುಷಿತಗೊಳಿಸದಂತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ವನಮಹೋತ್ಸವದಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು. ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಿ.ಕೆ.ನಾಚಪ್ಪ ಮಾತನಾಡಿ, ಪಟ್ಟಣದಲ್ಲಿ ಸ್ವಚ್ಛತೆ ಕುರಿತು ಜಾಗೃತಿ ಮೂಡಿಸಲು ಪುರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವುದನ್ನು ನಿಲ್ಲಿಸಿ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದ ಪ್ರಾಸ್ತಾವಿಕವನ್ನು ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ಅಧಿಕಾರಿ ಬಿ.ಎನ್.ಶಾಂತಿಭೂಷಣ್ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ಪ್ರದೀಪ್ ಕುಮಾರ್, ಸೆಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ಯುವ ರೆಡ್ ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೆಸ್, ನ್ಯೂಸ್ 3 ಡಿಜಿಟಲ್ ಮೀಡಿಯಾದ ಸಂಪಾದಕ ಶಶಿ ಅಚ್ಚಪ್ಪ, ಆಪ್ತಬ್, ಮಹಮದ್ ನಯಾಜ್, ಮಾಚಯ್ಯ ಸುಬ್ರಮಣಿ, ಮಂಜುನಾಥ್, ತಾಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಪುರಸಭೆ ಸಿಬ್ಬಂದಿ, ಎನ್ಎಸ್ಎಸ್ ಸ್ವಯಂಸೇವಕರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಸೀಬೆ, ಹಿಪ್ಪೆ, ನೇರಳೆ, ಲಿಂಬೆ, ಬಟರ್ಫ್ರೂಟ್ ಸೇರಿದಂತೆ ಐವತ್ತಕ್ಕೂ ಅಧಿಕ ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು.









