
ವಿರಾಜಪೇಟೆ ಜು.31 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರಾಜಪೇಟೆ ತಾಲೂಕಿನ ವಿರಾಜಪೇಟೆ ವಲಯದ ಗಾಂಧಿನಗರ ಕಾರ್ಯಕ್ಷೇತ್ರದ ಶಿವಾನಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ವಿರಾಜಪೇಟೆಯ ಶಿಕ್ಷಕರ ಸಭಾಂಗಣದಲ್ಲಿ ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಗೋವಿಂದ್ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಶಿಕ್ಷಣವೆಂದರೆ ಕೇವಲ ಪುಸ್ತಕದ ಓದು ಮತ್ತು ಅಂಕ ಗಳಿಸುವುದು ಮಾತ್ರವಲ್ಲ. ಅಂಕಗಳಿಗಿಂತ ಮಿಗಿಲಾಗಿ ಅವರಿಗೆ ಬಾಲ್ಯದಲ್ಲೇ ಸಂಸ್ಕಾರ, ನೈತಿಕ ಮೌಲ್ಯ ಹಾಗೂ ನಮ್ಮ ನಾಡಿನ ಸಂಸ್ಕೃತಿಯನ್ನು ಧಾರೆ ಎರೆಯುವುದು ಅತ್ಯಂತ ಅಗತ್ಯ. ಸುಸಂಸ್ಕೃತ ಹಾಗೂ ಶಿಸ್ತಿನ ಜೀವನವನ್ನು ನಡೆಸಲು ಸಹಕಾರಿಯಾಗುವಂತಹ ನೈಜ ಶಿಕ್ಷಣವನ್ನು ಪ್ರತಿಯೊಬ್ಬ ಮಗುವಿಗೂ ನೀಡಬೇಕಿದೆ ಎಂದು ಅಭಿಪ್ರಾಯಪಟ್ಟರು. ಮಹಿಳೆಯರು, ದೈಹಿಕವಾಗಿ ಮಾನಸಿಕವಾಗಿ ಸದೃಢರಾಗುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಜ್ಞಾನದ ವಿಕಾಸವಾಗಬೇಕು ಎನ್ನುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಈ ರೀತಿಯ ವಿಕಾಸ ಕೇಂದ್ರಗಳ ಸ್ಥಾಪನೆ ಮಾಡಿ ಮಹಿಳೆಯರನ್ನು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಮುನ್ನೆಲೆಗೆ ತರುವ ಪ್ರಯತ್ನ ಮಾಡಲಾಗುತ್ತಿದೆ. ಪ್ರತಿಯೊಬ್ಬ ಮಹಿಳೆಯರು ಇದರ ಸದುಪಯೋಗಗಳನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರಲ್ಲದೆ ಮಹಿಳೆಯರ ಪಾತ್ರ ಮತ್ತು ಸಬಲೀಕರಣ ಕುರಿತು ವಿಶೇಷ ಉಪನ್ಯಾಸ ನೀಡಿದರು. ಇದೇ ವೇಳೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕವಿ, ಸಾಹಿತಿಗಳಾದ ರಜಿತ ಕಾರ್ಯಪ್ಪ ಅವರು ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮೊಬೈಲ್ ಫೆÇೀನ್ಗಳ ಅತಿಯಾದ ಬಳಕೆಯಿಂದ ಮಕ್ಕಳು ಸರಿ-ತಪ್ಪುಗಳ ಅರಿವಿಲ್ಲದೆ ದುರಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ತಂತ್ರಜ್ಞಾನದ ಈ ಸವಾಲಿನಿಂದ ಮಕ್ಕಳನ್ನು ಪಾರು ಮಾಡಲು ತಾಯಂದಿರು ಹೆಚ್ಚಿನ ಜಾಗೃತಿ ವಹಿಸಬೇಕು. ಮನೆಯೇ ಮೊದಲ ಪಾಠಶಾಲೆ ಎಂಬುದನ್ನು ಅರಿತು, ಪ್ರತಿಯೊಬ್ಬ ತಾಯಿಯೂ ಮಗುವಿಗೆ ಉತ್ತಮ ಸಂಸ್ಕಾರ ನೀಡುವ ಜವಾಬ್ದಾರಿ ಹೊರಬೇಕು. ಇಂದಿನ ಸಮಾಜದಲ್ಲಿ ಮಹಿಳೆಯರು ಕೇವಲ ಮನೆಗೆಷ್ಟೇ ಸೀಮಿತವಾಗದೆ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ರಂಗಗಳಲ್ಲಿ ಮುಂಚೂಣಿಗೆ ಬರಬೇಕು. ಸ್ವಾವಲಂಬಿ ಜೀವನ ರೂಪಿಸಿಕೊಳ್ಳುವುದರ ಜೊತೆಗೆ ಕುಟುಂಬ ಹಾಗೂ ಸಮಾಜದ ಪ್ರಗತಿಗೆ ಮಹಿಳೆಯರ ಕೊಡುಗೆ ಅನನ್ಯ ಎಂಬ ವಿಷಯಗಳ ಕುರಿತು ಜಾಗೃತಿ ಮೂಡಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಉಷಾರಾಣಿ ಮಾತನಾಡಿ,”ಜ್ಞಾನವಿಕಾಸ ಕೇಂದ್ರಗಳ ಮೂಲಕ ಮಹಿಳೆಯರಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತರುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಂಸ್ಥಿಕವಾಗಿ ಶಕ್ತರಾಗಲು ಈ ಕೇಂದ್ರಗಳು ದೊಡ್ಡ ವೇದಿಕೆಯಾಗಿವೆ. ಪ್ರತಿಯೊಬ್ಬ ಮಹಿಳೆಯೂ ಸ್ವಸಹಾಯ ಗುಂಪುಗಳು ಮತ್ತು ಕೇಂದ್ರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೇಂದ್ರದ ಅಧ್ಯಕ್ಷರಾದ ಶೋಭಾ ಕೇಂದ್ರದ ನಿರಂತರ ಬೆಳವಣಿಗೆಗೆ ಮಾರ್ಗದರ್ಶನ ನೀಡುತ್ತಿರುವ ಅಧಿಕಾರಿಗಳ, ಸದಸ್ಯರ ಶ್ರಮವನ್ನು ಶ್ಲಾಘಿಸಿದರು. :: ಆಟೋಟ ಸ್ಪರ್ಧೆ, ಸಾಂಸ್ಕೃತಿಕ ವೈಭವ ಹಾಗೂ ಬಹುಮಾನ ವಿತರಣೆ :: ವಾರ್ಷಿಕೋತ್ಸವದ ಅಂಗವಾಗಿ ಕೇಂದ್ರದ ಸದಸ್ಯರಿಗೆ ವಿವಿಧ ಆಟೋಟ ಹಾಗೂ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸಮಾರೋಪ ಸಮಾರಂಭದಲ್ಲಿ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಳಿಕ ಜ್ಞಾನವಿಕಾಸ ಕೇಂದ್ರದ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತ್ತು. ಸಮಾರಂಭದಲ್ಲಿ ನೋಡಲ್ ಅಧಿಕಾರಿ ಚೇತನ್, ಮೇಲ್ವಿಚಾರಕರಾದ ಶಿವಕುಮಾರ್, ಸೇವಾ ಪ್ರತಿನಿಧಿ ಮೀನಾಕ್ಷಿ ಹಾಗೂ ಶಿವಾನಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.








