
ಮಡಿಕೇರಿ ಜು.31 NEWS DESK : ಮಕ್ಕಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾದಲ್ಲಿ ಪೋಕ್ಸೋ ಕಾಯ್ದೆಯಡಿ ದಂಡ ಹಾಗೂ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ಮಕ್ಕಳ ವಿಶೇಷ ಪೋಲಿಸ್ ಘಟಕದ ಎಸ್.ಐ.ಸುಮತಿ ಅವರು ಹೇಳಿದರು. ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಪೊಲೀಸ್ ಇಲಾಖೆ, ಅಕ್ಕಪಡೆ ಸಹಯೋಗದಲ್ಲಿ ಕೊಡಗರಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಡೆದ ಮಾನವ ಕಳ್ಳ ಸಾಗಣಿಕೆ ತಡೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಹಲವಾರು ತಿಂಡಿ ತಿನಿಸುಗಳ ಆಮಿಷವನ್ನು ಒಡ್ಡಿ ಮಾನವ ಕಳ್ಳ ಸಾಗಾಣಿಕೆಯನ್ನು ನಡೆಸುತ್ತಿದ್ದು, ಅಂತಹ ಪ್ರಕರಣಗಳು ಕಂಡುಬಂದಲ್ಲಿ 1098 ಗೆ ಅಥವಾ ಪೊಷಕರು ಮತ್ತು ಶಿಕ್ಷಕರಿಗೆ ಮಾಹಿತಿಯನ್ನು ತಿಳಿಸಬೇಕು ಎಂದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲಕಾರ್ಮಿಕ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮ, ಸೈಬರ್ ಕ್ರೈಂ, ಅತಿಯಾದ ಮೊಬೈಲ್ ಬಳಕೆಯ ದುಷ್ಪರಿಣಾಮ, ಕಡ್ಡಾಯ ಶಿಕ್ಷಣ ಮತ್ತು ಶಿಕ್ಷಣದ ಮಹತ್ವ, ಬೇಟಿ ಬಚಾವೋ ಬೇಟಿ ಪಡಾವೋ, ಏಕ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರಕುವ ಆರ್ಥಿಕ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಸರ್ಕಾರದಿಂದ ಲಭ್ಯವಾಗುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ಮಾಡಿದರು. ತುರ್ತು ಸಂದರ್ಭದಲ್ಲಿ ಸಹಾಯವಾಣಿ ಸಂಖ್ಯೆ 112, 1098, 181, 1930 ಗಳನ್ನು ಬಳಸಿಕೊಳ್ಳುವಂತೆ ಅರಿವು ಮೂಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ, ಜಿಲ್ಲಾ ಮಹಿಳಾ ಸಬಲೀಕರಣ ಘಟಕದ ಜೆಂಡರ್ ಸ್ಪೆಷಲೀಸ್ಟ್ ಕೇಶಿನಿ ಎಸ್. ಆರ್ ಅವರು ಮಾತನಾಡಿ, ಮಾನವ ಕಳ್ಳ ಸಾಗಾಣಿಕೆ, ಮೋಸ, ಬೆದರಿಕೆ, ಬಲವಂತ ಮಾಡಿ ವ್ಯಕ್ತಿಗಳನ್ನು ಅಕ್ರಮವಾಗಿ ಸಾಗಿಸಿ ಅವರಿಂದ ಶೋಷಣೆಯ ವಿರುದ್ಧ ಎಚ್ಚರಿಕೆ ವಹಿಸುವಂತೆ ತಿಳಿಸಿದರು. ಲೈಂಗಿಕ ಶೋಷಣೆ ಮಾಡುವುದು ಬಲವಂತದಿಂದ ದುಡಿಸಿಕೊಳ್ಳುವುದು, ಬಾಲಕಾರ್ಮಿಕ ಕೆಲಸ ಮಾಡಿಸಿಕೊಳ್ಳುವುದು, ಬಲವಂತದಿಂದ ಬಿಕ್ಷಾಟನೆಯಲ್ಲಿ ತೊಡಗಿಸುವುದಾಗಿದೆ ಇದಕ್ಕೆ ಮುಖ್ಯ ಕಾರಣ ಎಂದರೆ, ಬಡತನ, ನಿರುದ್ಯೋಗ, ಶಿಕ್ಷಣದ ಕೊರತೆ, ಸುಳ್ಳು ಉದ್ಯೋಗ ಅಥವಾ ಮದುವೆಯ ಆಮಿಷ, ಸಾಮಾಜಿಕ ಅಸಮಾನತೆ ಈ ಎಲ್ಲಾ ಕಾರಣದಿಂದ ಸಮಸ್ಯೆ ಉಂಟಾಗುತ್ತದೆ ಆ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಅನುಮಾನಾಸ್ಪದ ಚಟುವಟಿಕೆಗಳನ್ನು ಪೊಲೀಸರಿಗೆ ತಿಳಿಸುವುದರ ಮುಖಾಂತರ, ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸುರಕ್ಷತಾ ಅರಿವು ನೀಡಬೇಕು ಎಂದರು. ಮಾನವ ಕಳ್ಳ ಸಾಗಾಣಿಕೆ ಒಂದು ಗಂಭೀರ ಅಪರಾಧವಾಗಿದ್ದು, ಇದನ್ನು ತಡೆಯಲು ಸರ್ಕಾರ,ಪೊಲೀಸ್ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ, ಸಾರ್ವಜನಿಕರು ಒಟ್ಟಾಗಿ ಕಾರ್ಯನಿರ್ವಹಿಸುವುದು ಅತ್ಯಗತ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹರೀಶ್ ಟಿ.ಎಸ್, ಅಕ್ಕಪಡೆ ತಂಡದ ಸಿಬ್ಬಂದಿಗಳಾದ ಪ್ರೇಮ, ಶೋಭ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತುಳಸಿ ಇತರೆ ಸಿಬ್ಬಂದಿಗಳು ಹಾಜರಿದ್ದರು. ಮಾನವ ಕಳ್ಳ ಸಾಗಾಣಿ ತಡೆ ಕಾಯ್ದೆಯ ಕುರಿತು ಮಕ್ಕಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಲಾಯಿತು”.









