
ಮಡಿಕೇರಿ ಆ.13 NEWS DESK : ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿರುವ ಅನುದಾನ ದುರುಪಯೋಗವಾಗುತ್ತಿದೆ. ನಡೆಯದೇ ಇರುವ ಕಾಮಗಾರಿಗಳ ಬಿಲ್ ಗೆ ಹಣ ಪಾವತಿಯಾಗುತ್ತಿದೆ ಎಂದು ಕೊಡಗು ಜಿಲ್ಲಾ ಜೇನು ಕುರುಬ ಅಭಿವೃದ್ಧಿ ಸಂಘ ಆರೋಪಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಜೆ.ಟಿ.ಕಾಳಿಂಗ ಅವರು ಸೋಮವಾರಪೇಟೆ ತಾಲ್ಲೂಕಿನ ನಂಜರಾಯಪಟ್ಟಣ ಗ್ರಾ.ಪಂ ವ್ಯಾಪ್ತಿಯಲ್ಲಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ನೀಡಲಾಗಿರುವ ಅನುದಾನದ ಕಾಮಗಾರಿಗಳ ಕುರಿತು ಹಲವು ಸಂಶಯಗಳು ಮೂಡುತ್ತಿದ್ದು, ತಕ್ಷಣ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ನಮಗೆ ಲಭ್ಯವಾಗಿರುವ ದಾಖಲೆಗಳ ಪ್ರಕಾರ, ಸುಮಾರು ರೂ.15 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಪೈಕಿ ಎರಡು ಕಾಮಗಾರಿಗಳಲ್ಲಿ ನಮೂದಿಸಿರುವ ವ್ಯಕ್ತಿಗಳು ಸಂಬಂಧಿಸಿದ ಗ್ರಾ.ಪಂ ವ್ಯಾಪ್ತಿಯಲ್ಲಿ ವಾಸಿಸುತ್ತಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ. ಈ ಕಾಮಗಾರಿಗಳು ನಿಜವಾಗಿ ನಡೆದಿವೆಯೇ ? ಕಾಮಗಾರಿಗಳ ಗುಣಮಟ್ಟ ಮತ್ತು ಸ್ಥಳ ಯಾವುದು ? ಯಾರ ಹೆಸರಿನಲ್ಲಿ ಕಾಮಗಾರಿ ಮಾಡಲಾಗಿದೆ ? ಯಾರಿಗೆ ಹಣ ಪಾವತಿಸಲಾಗಿದೆ ? ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಕುರಿತು ಸತ್ಯಾಸತ್ಯತೆ ತಿಳಿದುಕೊಳ್ಳುವ ಉದ್ದೇಶದಿಂದ ನಾವು ಮಾಹಿತಿ ಹಕ್ಕು ಕಾಯ್ದೆಯಡಿ ಇಲಾಖೆಗೆ ಅರ್ಜಿ ಸಲ್ಲಿದ್ದೇವೆ. ಆದರೆ, ಇಲ್ಲಿಯವರೆಗೆ ನಮಗೆ ಅಗತ್ಯ ಮಾಹಿತಿಯನ್ನು ನೀಡಿಲ್ಲವೆಂದು ಆರೋಪಿಸಿದರು.
ಈಗಾಗಲೇ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕೆಆರ್ಐಡಿಲ್ ಇಲಾಖೆಯ ಅಧಿಕಾರಿಗಳ ಗಮನಕ್ಕೂ ಲಿಖಿತವಾಗಿ ತರಲಾಗಿದೆ. ಸತ್ಯ ಬಹಿರಂಗವಾಗುವವರೆಗೆ ಸಂಬಂಧಿಸಿದ ಕಾಮಗಾರಿಗಳ ಹಣ ಬಿಡುಗಡೆ ಮಾಡಬಾರದು ಮತ್ತು ಸಮಗ್ರ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿರುವುದಾಗಿ ತಿಳಿಸಿದರು. ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಕಾಮಗಾರಿಗಳ ಕುರಿತು ಇಷ್ಟೊಂದು ಪ್ರಶ್ನೆಗಳು ಉದ್ಭವಿಸಿರುವಾಗ, ಕೊಡಗು ಜಿಲ್ಲೆಯಾದ್ಯಂತ ಪರಿಶಿಷ್ಟ ಪಂಗಡಗಳ ಅನುದಾನ ಎಷ್ಟು ದುರುಪಯೋಗವಾಗಿರಬಹುದು ಎಂದು ಆತಂಕ ವ್ಯಕ್ತಪಡಿಸಿದ ಜೆ.ಟಿ.ಕಾಳಿಂಗ ವಿವಿಧ ಬೇಡಿಕೆಗಳನ್ನು ಮಂಡಿಸಿದರು. *ಬೇಡಿಕೆಗಳು* ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಗಳ ಮೂಲಭೂತ ಸೌಲಭ್ಯಗಳಿಗಾಗಿ ಕೈಗೊಂಡಿರುವ ಕಾಮಗಾರಿಗಳ ಸಮಗ್ರ ಪರಿಶೀಲನೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಕಾಮಗಾರಿಗಳ ಹಣ ಬಿಡುಗಡೆ ಮಾಡಬಾರದು ಮತ್ತು ಸಂಬಂಧಿತ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು. ಪ್ರತಿಯೊಂದು ಕಾಮಗಾರಿಯ ಮಂಜೂರಾತಿ, ಅಂದಾಜು, ಟೆಂಡರ್/ವರ್ಕ್ ಆರ್ಡರ್, ಕಾಮಗಾರಿ ಸ್ಥಳ, ಫಲಾನುಭವಿಗಳ ವಿವರ, ಅಳತೆ ಪುಸ್ತಕ, ಬಿಲ್, ಹಣ ಪಾವತಿ ಮತ್ತು ಕಾಮಗಾರಿ ಪೂರ್ಣಗೊಂಡಿರುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕು. ನಿಯಮ ಉಲ್ಲಂಘನೆ ಸಾಬೀತಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಪರಿಶಿಷ್ಟ ಪಂಗಡಗಳ ಜನರಿಗೆ ಹಾಗೂ ಸ್ಥಳೀಯ ಸಮುದಾಯದ ಪ್ರತಿನಿಧಿಗಳಿಗೆ ಮಾಹಿತಿ ನೀಡುವ ಪಾರದರ್ಶಕ ವ್ಯವಸ್ಥೆ ರೂಪಿಸಬೇಕು. ಮಾಹಿತಿ ಹಕ್ಕು ಮೂಲಕ ಕೇಳಿರುವ ಮಾಹಿತಿಯನ್ನು ಕಾನೂನುಬದ್ಧವಾಗಿ ಮತ್ತು ಸಂಪೂರ್ಣವಾಗಿ ಒದಗಿಸಬೇಕು ಎಂದು ಜೆ.ಟಿ.ಕಾಳಿಂಗ ಒತ್ತಾಯಿಸಿದರು. *ಪೊಲೀಸ್ ಬರಲಿ* ಸೋಲಿಗ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಬಿ.ಬಿ.ಮಹೇಶ್ ಅವರು ಮಾತನಾಡಿ ಗಿರಿಜನ ಹಾಡಿಗಳಲ್ಲಿ ಅನೇಕ ಕಾನೂನಾತ್ಮಕ ಸಮಸ್ಯೆಗಳಿವೆ ಮತ್ತು ಹಾಡಿ ಜನರಲ್ಲಿ ಅರಿವಿನ ಕೊರತೆ ಇದೆ. ಇದನ್ನು ಹೋಗಲಾಡಿಸಲು ಸರಕಾರದ ನಿರ್ದೇಶನದಂತೆ ಪೊಲೀಸರು “ಹಾಡಿ ಭೇಟಿ” ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಒತ್ತಾಯಿಸಿದರು. ಕುಶಾಲನಗರ ಠಾಣೆಯಲ್ಲಿ ಪ್ರತಿ ತಿಂಗಳು ಪೊಲೀಸರು ನಡೆಸುವ ಪರಿಶಿಷ್ಟರ ಸಭೆಯಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಪೊಲೀಸರು ಹಾಡಿಗೆ ಬರಬೇಕು, ಅರಿವು ಮೂಡಿಸಬೇಕೆಂದು ಮನವಿ ಮಾಡುತ್ತಲೇ ಬರುತ್ತಿದ್ದೇವೆ. ಅಲ್ಲದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೂ ತಂದಿದ್ದೇವೆ. ಆದರೆ ಇಲ್ಲಿಯವರೆಗೆ ಪೊಲೀಸರು ಬಂದಿಲ್ಲವೆಂದು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜೇನು ಕುರುಬ ಅಭಿವೃದ್ಧಿ ಸಂಘದ ಸದಸ್ಯ ಜೆ.ಎಸ್.ವಿಶ್ವ ಉಪಸ್ಥಿತರಿದ್ದರು.









