
ಮಡಿಕೇರಿ NEWS DESK ಆ.19 : ಕಳೆದ ಮೂರು ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಕಾಡಾನೆ ಉಪಟಳ ತಡೆಗೆ ಸರಕಾರ ಬಿಡುಗಡೆ ಮಾಡಿರುವ ಅನುದಾನ ಮತ್ತು ಅರಣ್ಯ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಶಾಸಕದ್ವಯರು ಶ್ವೇತಪತ್ರ ಹೊರಡಿಸಬೇಕು ಮತ್ತು ವನ್ಯಜೀವಿ ದಾಳಿ ತಡೆಗೆ ಶಾಶ್ವತ ಯೋಜನೆ ರೂಪಿಸಲು ಸರಕಾರ ರೂ.500 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಜಿಲ್ಲಾ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದ್ದು, ಅಮಾಯಕ ಮಾನವ ಜೀವಗಳು ನಿರಂತರವಾಗಿ ಬಲಿಯಾಗುತ್ತಿವೆ. ಪರಿಸ್ಥಿತಿ ಕೈಮೀರುವ ಹಂತದಲ್ಲಿದ್ದರೂ ರಾಜ್ಯ ಸರಕಾರಕ್ಕೆ ಕೊಡಗಿನ ಮೇಲೆ ಕರುಣೆಯೇ ಇಲ್ಲದಾಗಿದೆ. ಜಿಲ್ಲೆಯ ಶಾಸಕರು ಸರಕಾರದ ಕಿವಿ ಹಿಂಡುವ ಕೆಲಸ ಮಾಡುತ್ತಿಲ್ಲವೆಂದು ಟೀಕಿಸಿದ್ದಾರೆ. ಈ ಹಿಂದೆ ಬಿಜೆಪಿ ಸರಕಾರವಿದ್ದಾಗ ಬ್ಯಾರಿಕೇಡ್ ಅಳವಡಿಕೆ ಮತ್ತು ಆನೆ ಕಂದಕಗಳ ನಿರ್ಮಾಣದಿಂದ ಕಾಡಾನೆಗಳ ಉಪಟಳ ನಿಯಂತ್ರಣದಲ್ಲಿತ್ತು. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಯಾವುದೇ ಅಗತ್ಯ ಕ್ರಮ ಕೈಗೊಳ್ಳದೆ ಇರುವುದರಿಂದ ವನ್ಯಜೀವಿಗಳ ದಾಳಿ ನಿಯಂತ್ರಣ ಮೀರಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದ್ದು, ಎಲ್ಲಾ ಕ್ಷೇತ್ರಗಳ ಮೇಲೂ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದೆ. ರಾಜ್ಯ ಸರಕಾರ ಪ್ರತಿವರ್ಷ ಬಜೆಟ್ ನಲ್ಲಿ ಕಾಡಾನೆ ಉಪಟಳ ತಡೆಗೆ ಅನುದಾನ ಘೋಷಿಸಿದೆಯೇ ಹೊರತು ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿದ್ದಾಗ ನೀಡಿದ್ದ ಭರವಸೆಗಳು ಯಾವುದೂ ಈಡೇರಿಲ್ಲ. ಕೊಡಗಿನ ಜನರನ್ನು ಕತ್ತಲೆಯಲ್ಲಿಟ್ಟಿರುವ ಅರಣ್ಯ ಇಲಾಖೆಯ ಬಳಿ ಕಾಡಾನೆ ದಾಳಿಯನ್ನು ತಡೆಯುವ ಯಾವುದೇ ಸ್ಪಷ್ಟ ಯೋಜನೆಗಳಿಲ್ಲ. ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಅರಿಯದ ಅರಣ್ಯ ಅಧಿಕಾರಿಗಳು ಗ್ರಾಮಸ್ಥರು ಅನುಭವಿಸುತ್ತಿರುವ ಕಷ್ಟನಷ್ಟಗಳ ಬಗ್ಗೆ ಅಧ್ಯಯನ ನಡೆಸುತ್ತಿಲ್ಲ. ಅರಣ್ಯ ಇಲಾಖೆ ರಾಜ್ಯ ಸರಕಾರದ ಹಿಡಿತದಲ್ಲಿಲ್ಲ ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಆರೋಪಿಸಿದ್ದಾರೆ. ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಅರಣ್ಯ ಸಚಿವರಾಗಿರುವ ರಾಮಲಿಂಗಾ ರೆಡ್ಡಿ ಅವರು ಈ ತಿಂಗಳ ಕೊನೆಯಲ್ಲಿ ಕೊಡಗು ಜಿಲ್ಲೆಗೆ ಬರುವುದಾಗಿ ಭರವಸೆ ನೀಡಿದ್ದಾರೆ. ಅರಣ್ಯ ಸಚಿವರ ಆಗಮನದಿಂದ ಸಮಸ್ಯೆ ಬಗೆಹರಿದು ಬಿಡುತ್ತದೆ ಎನ್ನುವ ಭ್ರಮೆ ಯಾರಿಗೂ ಬೇಡ. ಈ ಹಿಂದೆಯೂ ಅನೇಕ ಅರಣ್ಯ ಸಚಿವರು ಜಿಲ್ಲೆಗೆ ಬಂದು ಸಭೆ ನಡೆಸಿ ಹೋಗಿದ್ದಾರೆ. ಆದರೆ ಇಲ್ಲಿಯವರೆಗೆ ವನ್ಯಜೀವಿ ಉಪಟಳದ ವಿರುದ್ಧ ಯಾವುದೇ ಶಾಶ್ವತ ಪರಿಹಾರ ದೊರೆತ್ತಿಲ್ಲ.
ಅರಣ್ಯ ಸಚಿವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರೆ ಸಾಲದು, ಗ್ರಾಮಸ್ಥರ ಹಾಗೂ ರೈತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಬೇಕು. ತಜ್ಞರಿಂದ, ಪ್ರಾಣಿ ಪ್ರಿಯರಿಂದ ಹಾಗೂ ಪರಿಸರವಾದಿಗಳಿಂದ ಸಲಹೆಯನ್ನು ಪಡೆದು ಶಾಶ್ವತ ಪರಿಹಾರಕ್ಕೆ ಯೋಜನೆಯನ್ನು ರೂಪಿಸಬೇಕು. ಈ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರಕಾರ ಕೊಡಗು ಜಿಲ್ಲೆಗೆ ಪ್ರತ್ಯೇಕವಾಗಿ ವಾರ್ಷಿಕ 500 ಕೋಟಿ ರೂ. ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡಬೇಕು ಎಂದು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯಿಸಿದ್ದಾರೆ.









