ಕುಶಾಲನಗರ, NEWS DESK ಆ.25: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು (ಕ.ಸಾ.ಪ.), ಕುಶಾಲನಗರ ತಾಲ್ಲೂಕು ಕ.ಸಾ.ಪ. ಹಾಗೂ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ (ಆ.25) ಹಾರಂಗಿ ಬಳಿಯ ಅತ್ತೂರು ಜ್ಞಾನಗಂಗಾ ವಸತಿ ಶಾಲೆಯಲ್ಲಿ ದಿವಂಗತ ಸೂದನ ರಾಘವಯ್ಯ ದತ್ತಿ ಕಾರ್ಯಕ್ರಮ ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಗೆ ಶೇ.98.77 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ಶನಿವಾರಸಂತೆಯ ವಿಘ್ನೇಶ್ವರ ಪ್ರೌಢಶಾಲೆಯ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯ ಎಚ್.ಕೆ. ಅವರನ್ನು ಸನ್ಮಾನಿಸಿ, ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವಕಾಮತ್, ವಿದ್ಯಾರ್ಥಿಗಳು ನಾಡು-ನುಡಿ, ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಪರಂಪರೆಯ ಬಗ್ಗೆ ಹೆಚ್ಚಿನ ಅಧ್ಯಯನ ಮಾಡುವ ಮೂಲಕ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿನೊಂದಿಗೆ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳುವುದು ಅತ್ಯಗತ್ಯ. ಸಾಹಿತ್ಯವು ವ್ಯಕ್ತಿತ್ವ ವಿಕಸನಕ್ಕೆ, ಸೃಜನಶೀಲತೆ ಹೆಚ್ಚಿಸಲು ಹಾಗೂ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಲು ನೆರವಾಗುತ್ತದೆ. ಇದು ಭಾಷೆಯ ಮೇಲಿನ ಹಿಡಿತವನ್ನು ಗಟ್ಟಿಗೊಳಿಸುವುದರ ಜೊತೆಗೆ ಜೀವನದ ಮೌಲ್ಯಗಳನ್ನು ಕಲಿಸುತ್ತದೆ ಎಂದರು.
ಸಾಹಿತ್ಯಾಭಿರುಚಿಯಿಂದ ಜ್ಞಾನವೃದ್ಧಿ, ಮಾನಸಿಕ ನೆಮ್ಮದಿ, ಸೃಜನಶೀಲತೆ, ಕ್ರಿಯಾಶೀಲತೆ ಹಾಗೂ ಸಂಸ್ಕೃತಿಯ ಅರಿವಿನಂತಹ ಪ್ರಯೋಜನಗಳು ದೊರೆಯುತ್ತವೆ. ವಿದ್ಯಾರ್ಥಿಗಳು ಗ್ರಂಥಾಲಯಗಳನ್ನು ಬಳಸಿಕೊಂಡು ಉತ್ತಮ ಪುಸ್ತಕಗಳನ್ನು ಆಯ್ಕೆ ಮಾಡಿ ಓದಬೇಕು. ಇದರಿಂದ ನಮ್ಮ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯವಾಗುತ್ತದೆ ಎಂದು ಕೇಶವಕಾಮತ್ ಹೇಳಿದರು.
ವಿದ್ಯಾರ್ಥಿನಿ ನವ್ಯ ಅವರು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ನವ್ಯ ಅವರಂತೆ ಉತ್ತಮ ಸಾಧನೆ ಮಾಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜ್ಞಾನಗಂಗಾ ಎಜುಕೇಶನಲ್ ಟ್ರಸ್ಟ್ನ ಅಧ್ಯಕ್ಷ ಟಿ.ಕೆ. ಸುಧೀರ್, ವಿದ್ಯಾರ್ಥಿಗಳು ನಿರಂತರ ಕಲಿಕೆ, ಸತತ ಅಭ್ಯಾಸ, ನಿರ್ದಿಷ್ಟ ಗುರಿ ಹಾಗೂ ಕಠಿಣ ಪರಿಶ್ರಮದ ಮೂಲಕ ಉತ್ತಮ ಶಿಕ್ಷಣ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.
ಉತ್ತಮ ಕಲಿಕೆ ಮತ್ತು ಉತ್ತಮ ಶಿಕ್ಷಣದಿಂದ ಉತ್ತಮ ಭವಿಷ್ಯ ಹಾಗೂ ಉತ್ತಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯ. ಯಶಸ್ವಿ ಜೀವನ ಸಾಧನೆಗೆ ವಿದ್ಯಾರ್ಥಿಗಳಲ್ಲಿ ನಿರಂತರ ಪರಿಶ್ರಮ ಅಗತ್ಯ. ವಿದ್ಯಾರ್ಥಿನಿ ಎಚ್.ಕೆ. ನವ್ಯ ಅವರ ಸಾಧನೆಯು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿದೆ ಎಂದು ಸುಧೀರ್ ಹೇಳಿದರು.
ವಿದ್ಯಾರ್ಥಿಗಳು ಪರೀಕ್ಷೆಯನ್ನು ಹೇಗೆ ಎದುರಿಸಬೇಕು ಎಂಬ ಕುರಿತು ಉಪನ್ಯಾಸ ನೀಡಿದ ಹೆಬ್ಬಾಲೆ ಪ್ರೌಢಶಾಲೆಯ ಕನ್ನಡ ಭಾಷಾ ಅಧ್ಯಾಪಕ ಮೆ.ನಾ. ವೆಂಕಟನಾಯಕ್, ವಿದ್ಯಾರ್ಥಿಗಳಿಗೆ ಸಾಧಿಸುವ ಛಲವೊಂದಿದ್ದರೆ ಏನು ಬೇಕಾದರೂ ಸಾಧಿಸಬಹುದು. ಸಾಧನೆ ಎಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಇಂತಹ ಸಾಧನೆ ಮಾಡಿರುವ ಅನೇಕ ಮಹನೀಯರು ಜಗತ್ತಿನಲ್ಲಿದ್ದಾರೆ. ಭಾರತದ ಹೆಸರನ್ನು ವಿಶ್ವಮಟ್ಟಕ್ಕೆ ಕೊಂಡೊಯ್ದ ನೋಬೆಲ್ ಪುರಸ್ಕೃತ ವಿಜ್ಞಾನಿ ಸರ್. ಸಿ.ವಿ. ರಾಮನ್, ಡಾ. ಎ.ಪಿ.ಜೆ. ಅಬ್ದುಲ್ ಕಲಾಂ, ಸರ್ ಎಂ. ವಿಶ್ವೇಶ್ವರಯ್ಯ, ಕೆ.ಆರ್. ನಾರಾಯಣ್ ಮತ್ತಿತರ ಸಾಧಕರು ವಿದ್ಯಾರ್ಥಿಗಳಿಗೆ ಆದರ್ಶ ವ್ಯಕ್ತಿಗಳಾಗಿದ್ದಾರೆ ಎಂದರು.
ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯದ ದೃಷ್ಟಿಯಿಂದ ಇಷ್ಟಪಟ್ಟು ಓದಬೇಕೇ ಹೊರತು ಕಷ್ಟಪಟ್ಟು ಓದಬಾರದು. ಏಕಾಗ್ರತೆ, ಸದೃಢತೆ ಹಾಗೂ ಓದುವ ಛಲವನ್ನು ವಿದ್ಯಾರ್ಥಿಗಳು ತಮ್ಮ ಬದುಕಿನುದ್ದಕ್ಕೂ ಬೆಳೆಸಿಕೊಂಡರೆ ಸಮಾಜದಲ್ಲಿ ಉತ್ತಮ ಸಾಧನೆ ಮಾಡಿ ಉತ್ತಮ ವ್ಯಕ್ತಿಗಳಾಗಿ ಹೊರಹೊಮ್ಮಬಹುದು ಎಂದರು.
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಯಾವುದೇ ಆತಂಕಪಡದೆ, ಕಠಿಣ ಪರಿಶ್ರಮ ಹಾಗೂ ಸತತ ಅಭ್ಯಾಸದೊಂದಿಗೆ ಪರೀಕ್ಷೆ ಎದುರಿಸುವ ಆತ್ಮವಿಶ್ವಾಸ ಬೆಳೆಸಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ ಎಂದು ವೆಂಕಟನಾಯಕ್ ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿನಿ ನವ್ಯ ಎಚ್.ಕೆ., ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಲು ಕಾರಣರಾದ ಶಾಲಾ ಶಿಕ್ಷಕರು ಹಾಗೂ ಪೋಷಕರಿಗೆ ಧನ್ಯವಾದ ಸಲ್ಲಿಸಿದರು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಉತ್ತಮ ಸಾಧನೆ ಮಾಡಬಹುದು ಎಂದು ಅವರು ಹೇಳಿದರು.
ಜ್ಞಾನಗಂಗಾ ಎಜುಕೇಶನಲ್ ಟ್ರಸ್ಟ್ನ ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ, ಕನ್ನಡ ಮಾಧ್ಯಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.98.77 ಫಲಿತಾಂಶ ಗಳಿಸಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿನಿ ಎಚ್.ಕೆ. ನವ್ಯ ಅವರ ಸಾಧನೆ ಹೆಮ್ಮೆಯ ಸಂಗತಿ ಎಂದರು.
ಕೊಡಗು ಜಿಲ್ಲಾ ಲೇಖಕರ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ. ಪ್ರೇಮಕುಮಾರ್, ಜಿಲ್ಲಾ ಕ.ಸಾ.ಪ. ಸಂಘಟನಾ ಕಾರ್ಯದರ್ಶಿ ಕೆ.ಎನ್. ದೇವರಾಜ್ ಹಾಗೂ ಎಸ್.ಬಿ.ಐ. ಬ್ಯಾಂಕ್ನ ನಿವೃತ್ತ ಹಿರಿಯ ವ್ಯವಸ್ಥಾಪಕಿ ಸೂದನ ರತ್ನಾವತಿ ಮಾತನಾಡಿದರು.
ತಾಲ್ಲೂಕು ಕ.ಸಾ.ಪ. ಕೋಶಾಧಿಕಾರಿ ಕೆ.ವಿ. ಉಮೇಶ್, ಶಾಲೆಯ ಪ್ರಾಂಶುಪಾಲರಾದ ಜೆ.ಎ. ಸಂಜನಾ, ಕನ್ನಡ ಭಾಷಾ ಶಿಕ್ಷಕರಾದ ಎಚ್. ಭಾಸ್ಕರ್, ಜಲಾವತಿ ಹಾಗೂ ವಿದ್ಯಾರ್ಥಿನಿ ನವ್ಯ ಅವರ ಪೋಷಕರಾದ ಕೃಷ್ಣಪ್ಪ ಮತ್ತು ಕವಿತ ಉಪಸ್ಥಿತರಿದ್ದರು.
ಇದೇ ವೇಳೆ ಜ್ಞಾನಗಂಗಾ ವಸತಿ ಶಾಲೆಯ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿನಿ ನವ್ಯ ಅವರಿಗೆ ಕಿರು ಕಾಣಿಕೆ ನೀಡಿ ಅಭಿನಂದಿಸಲಾಯಿತು. ಕನ್ನಡ ಭಾಷಾ ಶಿಕ್ಷಕಿ ಜಲಾವತಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿ ಯಶಿಕಾ ರಾಜ್ ಸ್ವಾಗತಿಸಿದರು. ವಿದ್ಯಾರ್ಥಿ ತನ್ಮಯ್ ವಂದಿಸಿದರು. ವಿದ್ಯಾರ್ಥಿನಿ ಪಲ್ಗುಣಿ ಪ್ರಾರ್ಥಿಸಿದರು.
ಶಾಲೆಯ ಶಿಕ್ಷಕರು, ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಂಗೀತ ಶಿಕ್ಷಕಿ ರತ್ನಾವತಿ ಕನ್ನಡ ನಾಡಿನ ಕುರಿತ ಗೀತೆ ಹಾಡಿದರು.
ಜಿಲ್ಲಾ ಚೆಸ್ ಚಾಂಪಿಯನ್ ಆಗಿರುವ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಉನ್ನತ್ ಸಾರಥ್ಯ ಅವರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು.







