
ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಸಂದರ್ಭದಲ್ಲಿ ಶಬ್ದ ಮಾಲಿನ್ಯ ನಿಯಂತ್ರಣ, ಫ್ಲೆಕ್ಸ್-ಬ್ಯಾನರ್ಗಳ ಬಳಕೆ ಹಾಗೂ ಅವುಗಳ ಸೂಕ್ತ ವಿಲೇವಾರಿ ಸೇರಿದಂತೆ ವಿವಿಧ ವಿಚಾರಗಳ ಕುರಿತು ಕೊಡಗು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಭೆ ನಡೆಯಿತು.
ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು, ಸಂಬ0ಧಪಟ್ಟ ಇಲಾಖೆಗಳ ಅಧಿಕಾರಿಗಳು, ಗಣೇಶೋತ್ಸವಕ್ಕೆ ಸಂಬ0ಧಿಸಿದ ಮಾರಾಟಗಾರರು ಹಾಗೂ ಬಾಡಿಗೆದಾರರು ಭಾಗವಹಿಸಿದ್ದರು. ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ0ತೆ ಶಬ್ದ ಮಾಲಿನ್ಯ ನಿಯಂತ್ರಿಸುವುದು, ಧ್ವನಿವರ್ಧಕಗಳ ಬಳಕೆಯಲ್ಲಿ ನಿಯಮಗಳನ್ನು ಪಾಲಿಸುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಅದೇ ರೀತಿ ಗಣೇಶೋತ್ಸವದ ಸಂದರ್ಭ ಬಳಸುವ ಫ್ಲೆಕ್ಸ್, ಬ್ಯಾನರ್ಗಳನ್ನು ಕಾರ್ಯಕ್ರಮದ ಬಳಿಕ ಎಲ್ಲೆಂದರಲ್ಲಿ ಎಸೆಯದೆ, ಸೂಕ್ತ ರೀತಿಯಲ್ಲಿ ಸಂಗ್ರಹಿಸಿ ವಿಲೇವಾರಿ ಮಾಡುವಂತೆ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳು ಹಾಗೂ ಮಾರಾಟಗಾರರಿಗೆ ಸೂಚನೆ ನೀಡಲಾಯಿತು.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಹಾಗೂ ಪರಿಸರದ ಹಿತದೃಷ್ಟಿಯಿಂದ ಎಲ್ಲರೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಎಸ್ಪಿ ಆರ್.ಎನ್.ಬಿಂದುಮಣಿ ಮನವಿ ಮಾಡಿದರು.









