
ವಿರಾಜಪೇಟೆ ಆ.31 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮೆಡಿಕಲ್ ವಿಭಾಗ, ರಾಜಯೋಗ ಶಿಕ್ಷಣ ಮತ್ತು ಸಂಶೋಧನಾ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ನಶೆ ಮುಕ್ತ ಭಾರತ ಅಭಿಯಾನ ಹಾಗೂ ಮಿಷನ್ ಸ್ಪಂದನ ಯೋಜನೆಯಡಿ ಆಯೋಜಿಸಲಾಗಿದ್ದ ಬೃಹತ್ ಜಾಗೃತಿ ಕಾರ್ಯಕ್ರಮಗಳು ವಿರಾಜಪೇಟೆ ನಗರ ಹಾಗೂ ಸುತ್ತಮುತ್ತಲಿನ ವಿವಿಧ ಕಾಲೇಜುಗಳಲ್ಲಿ ಯಶಸ್ವಿಯಾಗಿ ನಡೆಯಿತು. ಕೇಂದ್ರ ಸರಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪರಿಕಲ್ಪನೆಯಂತೆ ಭಾರತದಾದ್ಯಂತ ಸುಮಾರು 7,000 ಕೇಂದ್ರಗಳಲ್ಲಿ ಹಮ್ಮಿಕೊಳ್ಳಲಾದ 10 ಕೋಟಿ ನಶೆ ಮುಕ್ತ ಪ್ರತಿಜ್ಞೆಗಳ ಮಹಾ ಅಭಿಯಾನದ ಭಾಗವಾಗಿ ಈ ಜಾಗೃತಿ ತರಬೇತಿಗಳನ್ನು ನಡೆಸಲಾಯಿತು. ಇಂದಿನ ಯುವಜನತೆ ಹಾಗೂ ವಿದ್ಯಾರ್ಥಿಗಳು ಎದುರಿಸುತ್ತಿರುವ ಮಾನಸಿಕ ಒತ್ತಡ ಹಾಗೂ ವಿವಿಧ ದುರಭ್ಯಾಸಗಳಿಂದ ಹೊರಬರಲು ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಆಧ್ಯಾತ್ಮಿಕ ಜ್ಞಾನ ಮತ್ತು ರಾಜಯೋಗ ಧ್ಯಾನದ ಕುರಿತು ವಿಶೇಷ ಮಾರ್ಗದರ್ಶನ ನೀಡಲಾಯಿತು. ಕಾವೇರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಎಂ.ಕೆ. ಪದ್ಮಾ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿತು. ಕಾವೇರಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಜಿ.ವೀಣಾ ಅವರ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಜೀವನದ ಕುರಿತು ಅರಿವು ಮೂಡಿಸಲಾಯಿತು. ಸೇಂಟ್ ಆನ್ಸ್ ಕಾಲೇಜು, ಪ್ರಾಂಶುಪಾಲರಾದ ತೃಪ್ತಿ ಬೊಪ್ಪಣ್ಣ ಅವರ ನೇತೃತ್ವದಲ್ಲಿ ಹಾಗೂ ಸರ್ವೋದಯ ಬಿಎಡ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯದ ಬಿ.ಕೆ. ಕೋಮಲ ಹಾಗೂ ಬಿ.ಕೆ. ಧನಲಕ್ಷ್ಮಿ ಅವರು ಭಾಗವಹಿಸಿ, ವಿದ್ಯಾರ್ಥಿಗಳಿಗೆ ಸನ್ಮಾರ್ಗದಲ್ಲಿ ನಡೆಯಲು ಹಾಗೂ ನಶೆ ಮುಕ್ತ ಸಮಾಜ ನಿರ್ಮಿಸಲು ಪ್ರತಿಜ್ಞಾವಿಧಿ ಬೋಧಿಸಿದರು. ನಶೆ ಮುಕ್ತ ಜೀವನದ ಮಹತ್ವದ ಬಗ್ಗೆ ಮಾಹಿತಿ ನೀಡಿ, ವ್ಯಸನಮುಕ್ತ ಜೀವನವು ಉತ್ತಮ ಆರೋಗ್ಯ, ಮನಸ್ಸಿನ ಶಾಂತಿ, ಉಜ್ವಲ ಭವಿಷ್ಯ ಹಾಗೂ ಸಕಾರಾತ್ಮಕ ಜೀವನಶೈಲಿಗೆ ಸಹಕಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಕುಟುಂಬ ಮತ್ತು ಸ್ನೇಹಿತರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.










