
ಮಡಿಕೇರಿ ಸೆ.5 NEWS DESK : ಮುಂಬರುವ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಡಿಕೇರಿ ಉಪ ವಿಭಾಗದ ವತಿಯಿಂದ ನಗರದ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಸಮುದ್ರ ಹೋಟೆಲ್ ಹಾಲ್ನಲ್ಲಿ ಗಣೇಶೋತ್ಸವ ಸಮಿತಿಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಸೆ.14ರಂದು ಗಣೇಶ ಚತುರ್ಥಿ ನಡೆಯಲಿರುವ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಪೊಲೀಸ್ ಇಲಾಖೆ, ನಗರಸಭೆ, ಆರ್ಟಿಒ, ಲೋಕೋಪಯೋಗಿ, ಚೆಸ್ಕಾಂ, ಅಗ್ನಿಶಾಮಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣೇಶೋತ್ಸವ ಸಮಿತಿಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಮಾತನಾಡಿದ ಮಡಿಕೇರಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕರು, ಸಾರ್ವಜನಿಕ ಸ್ಥಳಗಳಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೊದಲು ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದರು. ಗಣೇಶೋತ್ಸವ ಸ್ಥಳದಲ್ಲಿ ತಾತ್ಕಾಲಿಕ ಸಿಸಿ ಕ್ಯಾಮೆರಾಗಳನ್ನು ಅಳವಡಿಸುವುದು, 24 ಗಂಟೆಗಳ ಕಾಲ ಸ್ವಯಂಸೇವಕರನ್ನು ನಿಯೋಜಿಸುವುದು, ಅಗ್ನಿ ಅವಘಡ ತಡೆಗೆ ನೀರು, ಮರಳು ಹಾಗೂ ಅಗ್ನಿಶಾಮಕ ಸಲಕರಣೆಗಳನ್ನು ಸಿದ್ಧವಾಗಿಟ್ಟುಕೊಳ್ಳುವುದು ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಗಣೇಶ ಪೆಂಡಾಲ್ ಹಾಗೂ ವಿಸರ್ಜನಾ ಮೆರವಣಿಗೆಗೆ ಧ್ವನಿವರ್ಧಕ ಬಳಕೆಗೆ ಪ್ರತ್ಯೇಕ ಅನುಮತಿ ಪಡೆಯಬೇಕು. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಮಾತ್ರ ಧ್ವನಿವರ್ಧಕ ಬಳಸಬೇಕು ಎಂದು ಸ್ಪಷ್ಟಪಡಿಸಲಾಯಿತು. ನಿಗದಿತ ಡೆಸಿಬಲ್ ಮಿತಿಯನ್ನು ಮೀರಿ ಡಿಜೆ ಬಳಸಿದರೆ ಪರಿಸರ ಸಂರಕ್ಷಣಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. ಕಳೆದ ವರ್ಷ ಲಾರಿಯೊಂದರಲ್ಲಿ ಹೆಚ್ಚಿನ ಸಂಖ್ಯೆಯ ಸ್ಪೀಕರ್ ಬಾಕ್ಸ್ಗಳನ್ನು ಅಳವಡಿಸಿಕೊಂಡು ಡಿಜೆ ಬಳಸಿದ್ದ ಘಟನೆ ಗಮನಕ್ಕೆ ಬಂದಿದ್ದು, ಈ ಬಾರಿ ಅಂತಹ ವಾಹನಗಳು ಕಂಡುಬಂದರೆ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿತು. ಗೌರಿ ಗಣೇಶ ಪ್ರತಿಷ್ಠಾಪನೆಗೆ ಅಗತ್ಯವಿರುವ ವಿವಿಧ ಇಲಾಖೆಗಳ ನಿರಾಕ್ಷೇಪಣಾ ಪತ್ರಗಳನ್ನು ಪಡೆಯಲು ಈ ಬಾರಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಏಕಗವಾಕ್ಷಿ ವ್ಯವಸ್ಥೆ ಜಾರಿಗೊಳಿಸಲಾಗುವುದು. ಗಣೇಶೋತ್ಸವ ಸಮಿತಿಗಳು ಕನಿಷ್ಠ ಒಂದು ವಾರ ಮುಂಚಿತವಾಗಿ ಅರ್ಜಿ ಸಲ್ಲಿಸಿ, ಸೆ.13ರೊಳಗೆ ಅಗತ್ಯ ಅನುಮತಿಗಳನ್ನು ಪಡೆದುಕೊಳ್ಳಬೇಕು ಎಂದು ಸೂಚಿಸಲಾಯಿತು. ಪ್ರತಿಷ್ಠಾಪನಾ ಸ್ಥಳ, ಮೆರವಣಿಗೆ ಮಾರ್ಗ, ವಿಸರ್ಜನಾ ದಿನಾಂಕ, ಆಯೋಜಕರ ಗುರುತಿನ ಚೀಟಿ ಸೇರಿದಂತೆ ಅಗತ್ಯ ವಿವರಗಳನ್ನು ಮುಂಚಿತವಾಗಿ ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು. ಖಾಸಗಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ಮೂರ್ತಿ ಪ್ರತಿಷ್ಠಾಪಿಸುವುದಾದರೆ ಸ್ಥಳದ ಮಾಲೀಕರು ಅಥವಾ ಸಂಬಂಧಪಟ್ಟ ಪ್ರಾಧಿಕಾರದಿಂದ ಲಿಖಿತ ಅನುಮತಿ ಪಡೆಯಬೇಕು ಎಂದು ತಿಳಿಸಲಾಯಿತು. ರಸ್ತೆ, ಫುಟ್ಪಾತ್ ಸೇರಿದಂತೆ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗುವ ಸ್ಥಳಗಳಲ್ಲಿ ಮೂರ್ತಿ ಪ್ರತಿಷ್ಠಾಪಿಸಬಾರದು. ಸಾರ್ವಜನಿಕರು, ವಾಹನ ಚಾಲಕರು ಅಥವಾ ಅಂಗಡಿ ಮಾಲೀಕರಿಂದ ಬಲವಂತವಾಗಿ ಚಂದಾ ವಸೂಲಿ ಮಾಡಬಾರದು. ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯದೆ ಚೆಸ್ಕಾಂ ಇಲಾಖೆಯ ಅನುಮತಿಯೊಂದಿಗೆ ವಿದ್ಯುತ್ ಬಳಸುವಂತೆ ಸೂಚಿಸಲಾಯಿತು. ಗಣೇಶ ಮೂರ್ತಿಗಳನ್ನು ಖರೀದಿಸುವಾಗ ಎತ್ತರ ಹಾಗೂ ಅಗಲ ಕಡಿಮೆ ಇರುವ ಮೂರ್ತಿಗಳಿಗೆ ಆದ್ಯತೆ ನೀಡಬೇಕು. ವಿಸರ್ಜನಾ ಮೆರವಣಿಗೆಯಲ್ಲಿ ವಾಹನದ ಸಾಮರ್ಥ್ಯಕ್ಕೆ ಅನುಗುಣವಾಗಿ ಮೂರ್ತಿಯನ್ನು ಸಾಗಿಸಬೇಕು. ಮೆರವಣಿಗೆ ಸಂದರ್ಭದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮವಹಿಸುವಂತೆ ಸೂಚಿಸಲಾಯಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕಳೆದ ವರ್ಷ ಗಣಪತಿ ಸಮಿತಿಗಳಿಗೆ ಸಂಬಂಧಿಸಿದಂತೆ ಸಣ್ಣಪುಟ್ಟ ಅಹಿತಕರ ಘಟನೆಗಳು ನಡೆದಿದ್ದವು. ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಮಿತಿಗಳು ಎಚ್ಚರಿಕೆ ವಹಿಸಬೇಕು. ಘಟನೆ ಸಂಭವಿಸಿದಲ್ಲಿ ಆಯಾ ಸಮಿತಿಯ ಆಯೋಜಕರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು. ಗಣೇಶೋತ್ಸವ ಸ್ಥಳಗಳಲ್ಲಿ ಜೂಜಾಟ ಸೇರಿದಂತೆ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಕಾರ್ಯಕ್ರಮ ಮುಗಿದ ಬಳಿಕ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಹಾಗೂ ಆರ್ಚ್ಗಳನ್ನು ತಕ್ಷಣ ತೆರವುಗೊಳಿಸಬೇಕು ಎಂದು ಸೂಚಿಸಲಾಯಿತು. ನದಿ, ಕೆರೆ, ಬಾವಿ ಸೇರಿದಂತೆ ವಿಸರ್ಜನಾ ಸ್ಥಳಗಳಲ್ಲಿ ನೀರಿಗೆ ಇಳಿಯುವಾಗ ಈಜು ಬಲ್ಲ ನುರಿತ ವ್ಯಕ್ತಿಗಳ ಉಪಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕು. ವಿಸರ್ಜನಾ ಮೆರವಣಿಗೆಯ ಸಮಯದಲ್ಲಿ ಉತ್ತಮ ಸಮಯ ಪರಿಪಾಲನೆ ಮಾಡುವಂತೆಯೂ ಸೂಚಿಸಲಾಯಿತು. ಗಣೇಶೋತ್ಸವ ಸಮಿತಿಗಳನ್ನೊಳಗೊಂಡ ಜಿಲ್ಲಾ ಮಟ್ಟದ ವಾಟ್ಸ್ಆ್ಯಪ್ ಗ್ರೂಪ್ ರಚಿಸಿ, ಪೊಲೀಸ್ ಇಲಾಖೆಯಿಂದ ನೀಡಲಾಗುವ ಸೂಚನೆಗಳನ್ನು ಕಾಲಕಾಲಕ್ಕೆ ಹಂಚಿಕೊಳ್ಳಲಾಗುವುದು. ಆಯೋಜಕರು ಕೂಡ ತಮ್ಮ ಮಾಹಿತಿಯನ್ನು ಇಲಾಖೆಯೊಂದಿಗೆ ಹಂಚಿಕೊಳ್ಳಬೇಕು ಎಂದು ತಿಳಿಸಲಾಯಿತು. :: ರಸ್ತೆ, ವಿದ್ಯುತ್ ಲೈನ್ ಸಮಸ್ಯೆ ಪ್ರಸ್ತಾಪ :: ಸಭೆಯಲ್ಲಿ ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮಾತನಾಡಿ, ಮಡಿಕೇರಿ ನಗರದ ರಸ್ತೆಗಳು ಹಾಳಾಗಿರುವುದರಿಂದ ಗಣೇಶ ವಿಸರ್ಜನಾ ಮೆರವಣಿಗೆಗೆ ತೊಂದರೆಯಾಗುವ ಸಾಧ್ಯತೆಯಿದೆ. ರಸ್ತೆ ಬದಿಯ ಕಾಡು ತೆರವುಗೊಳಿಸಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮನವಿ ಮಾಡಿದರು. ಅಂಜಪರವಂಡ ಕುಶಾಲಪ್ಪ ಅವರು ಡಿಜೆ ಬಳಕೆಗೆ ಹಗಲು ಮತ್ತು ರಾತ್ರಿ ವೇಳೆ ಅನ್ವಯಿಸುವ ಡೆಸಿಬಲ್ ಮಿತಿಯ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ಕೋರಿದರು. ಶಾಂತಿನಿಕೇತನ ಯುವಕ ಸಂಘದ ಚೇತನ್ ಅವರು ಸಿಂಗಲ್ ವಿಂಡೋ ವ್ಯವಸ್ಥೆಯನ್ನು ಶೀಘ್ರ ಆರಂಭಿಸಿ, ಡಿಜೆ ಬಳಕೆಗೆ ರಾತ್ರಿ 11ರವರೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು. ಪ್ರಸನ್ನ ಭಟ್ ಅವರು ಇತರ ತಾಲೂಕುಗಳಲ್ಲಿಯೂ ರಾತ್ರಿ 10 ಗಂಟೆಗೆ ಡಿಜೆ ಸ್ಥಗಿತಗೊಳಿಸುವ ನಿಯಮವನ್ನು ಸಮಾನವಾಗಿ ಜಾರಿಗೊಳಿಸಿದರೆ ತಾವು ಸಹ ನಿಯಮ ಪಾಲಿಸುವುದಾಗಿ ತಿಳಿಸಿದರು. ಮುನೀಶ್ವರ ದೇವಸ್ಥಾನ ಸಮಿತಿ ಸದಸ್ಯರು ಬ್ಯಾಂಡ್ಸೆಟ್ ಬಳಕೆಯ ಕುರಿತು ಸ್ಪಷ್ಟತೆ ನೀಡುವಂತೆ ಮನವಿ ಮಾಡಿದರು. ಚರಣ್ ಅವರು ಮೆರವಣಿಗೆ ಸಾಗುವ ರಸ್ತೆಗಳಲ್ಲಿನ ಕೆಳಮಟ್ಟದ ವಿದ್ಯುತ್ ತಂತಿಗಳಿಂದ ಉಂಟಾಗುವ ಅಪಾಯದ ಬಗ್ಗೆ ಗಮನ ಸೆಳೆದು, ಚೆಸ್ಕಾಂ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದರು. ಮಡಿಕೇರಿ ನಗರಸಭಾ ಉಪಾಧ್ಯಕ್ಷ ಮಹೇಶ್ ಜೈನಿ ಮಾತನಾಡಿ, ರಾತ್ರಿ 10 ಗಂಟೆಯ ನಂತರ ಡಿಜೆ ಬಳಸಬಾರದು. ಬ್ಯಾನರ್ ಮತ್ತು ಬಂಟಿಂಗ್ಸ್ ಅಳವಡಿಕೆಗೆ ನಿಯಮಾನುಸಾರ ಅರ್ಜಿ ಸಲ್ಲಿಸಿದವರಿಗೆ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಅಂತಿಮವಾಗಿ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಅವರು ಸಭೆಗೆ ಆಗಮಿಸಿದ ಗಣ್ಯರು ಹಾಗೂ ಗಣೇಶೋತ್ಸವ ಸಮಿತಿಗಳ ಪ್ರತಿನಿಧಿಗಳಿಗೆ ವಂದನೆ ಸಲ್ಲಿಸಿ, ಪೊಲೀಸ್ ಇಲಾಖೆ ನೀಡಿರುವ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು.










