ಸೋಮವಾರಪೇಟೆ, NEWS DESK ಸೆ. 7: ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿರುವ ಬಾಸ್ಕೆಟ್ಬಾಲ್ ಮೈದಾನದ ಬದಿಯಲ್ಲಿ ನಿರ್ಮಿಸುತ್ತಿರುವ ತಡೆಗೋಡೆ ಅವೈಜ್ಞಾನಿಕ ಹಾಗೂ ಕಳಪೆಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯರು ಕಾಮಗಾರಿಗೆ ತಡೆಯೊಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಶಾಸಕ ಅಪ್ಪಚ್ಚು ರಂಜನ್ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.
ಈ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು, ಕಳಪೆ ಕಾಮಗಾರಿ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಮಗಾರಿಗೆ ತಡೆಯೊಡ್ಡಿದ್ದೇವೆ. ಅಧಿಕಾರಿಗಳು ಕಾಮಗಾರಿಯನ್ನು ಸರಿಯಾಗಿ ಪರಿಶೀಲಿಸುತ್ತಿಲ್ಲ. ಕಳಪೆ ಕಾಮಗಾರಿಯಿಂದಾಗಿ ರಸ್ತೆಯಲ್ಲಿ ಸಂಚರಿಸಲೂ ಭಯಪಡುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಅರ್ಧಕ್ಕೆ ಸ್ಥಗಿತಗೊಂಡಿರುವ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದ ಬಳಿಕ ಮಾತನಾಡಿದ ಅಪ್ಪಚ್ಚು ರಂಜನ್, ಬಾಸ್ಕೆಟ್ಬಾಲ್ ಮೈದಾನಕ್ಕೆ ತಡೆಗೋಡೆ ನಿರ್ಮಾಣ ಕಾಮಗಾರಿ ಮೇಲ್ನೋಟಕ್ಕೆ ಅವೈಜ್ಞಾನಿಕವಾಗಿರುವುದು ಕಂಡುಬಂದಿದೆ. ಈ ಬಗ್ಗೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ನಂತರ ಕಾಮಗಾರಿ ಸ್ಥಗಿತಗೊಳಿಸಲಾಗಿದೆ. ಕಳೆದ ಬಾರಿ ಸಣ್ಣ ನೀರಾವರಿ ಇಲಾಖೆಯಿಂದ ಟರ್ಫ್ ಮೈದಾನದ ಬದಿಯಲ್ಲಿ ನಿರ್ಮಿಸಿದ್ದ ತಡೆಗೋಡೆ ಕುಸಿದು ಬಿದ್ದಿತ್ತು. ಇಂತಹ ಕಳಪೆ ಕಾಮಗಾರಿಗೆ ಯಾರು ಹೊಣೆ ಎಂಬ ಪ್ರಶ್ನೆ ಉದ್ಭವಿಸಿದೆ. ಇಂಜಿನಿಯರ್, ಗುತ್ತಿಗೆದಾರ ಅಥವಾ ಶಾಸಕರು ಹೊಣೆಗಾರರೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.
ಇದರೊಂದಿಗೆ ಆಲೇಕಟ್ಟೆ-ತೋಳೂರುಶೆಟ್ಟಳ್ಳಿ ರಸ್ತೆ ವರ್ಷದೊಳಗೆ ಹಾಳಾಗಿದೆ. ಕಾಂಕ್ರೀಟ್ ರಸ್ತೆ ಅಲ್ಲಲ್ಲಿ ಬಿರುಕು ಬಿಟ್ಟಿದೆ. ಶಾಸಕರು ಕಳಪೆ ಕಾಮಗಾರಿಗೆ ಸಹಕಾರ ನೀಡುತ್ತಿದ್ದಾರೆಯೇ ಎಂಬ ಬಗ್ಗೆ ಉತ್ತರಿಸಬೇಕು. ಈಗಾಗಲೇ ಬಿರುಕು ಬಿಟ್ಟಿರುವ ಕಾಂಕ್ರೀಟ್ ರಸ್ತೆಯನ್ನು ಕಿತ್ತು, ಸರ್ವಋತು ರಸ್ತೆಯನ್ನಾಗಿ ಗುಣಮಟ್ಟದಲ್ಲಿ ನಿರ್ಮಿಸಬೇಕು ಎಂದು ಆಗ್ರಹಿಸಿದ ಅವರು, ಈ ಎಲ್ಲಾ ಕಳಪೆ ಕಾಮಗಾರಿಗಳ ಬಗ್ಗೆಯೂ ಲೋಕಾಯುಕ್ತಕ್ಕೆ ದೂರು ನೀಡಲಾಗುವುದು ಎಂದು ತಿಳಿಸಿದರು.
ಸೋಮವಾರಪೇಟೆಯ ಹಾಕಿ ಪ್ರೇಮಿಗಳ ಅಭಿಲಾಷೆಯಂತೆ ಅಂತರರಾಷ್ಟ್ರೀಯ ಗುಣಮಟ್ಟದಲ್ಲಿ ಟರ್ಫ್ ಮೈದಾನ ನಿರ್ಮಿಸಲಾಗಿದೆ. ಸಂಬಂಧಿಸಿದ ಗುತ್ತಿಗೆದಾರ ಕಂಪನಿಯವರು ಏಳು ವರ್ಷಗಳ ಕಾಲ ಇದರ ನಿರ್ವಹಣೆ ಮಾಡಬೇಕು. ಆದರೆ ಪ್ರಸ್ತುತ ಟರ್ಫ್ ಮೈದಾನ ಅವ್ಯವಸ್ಥೆಯಿಂದ ಕೂಡಿದೆ. ತಕ್ಷಣ ಇಲಾಖೆಯ ಇಂಜಿನಿಯರ್ ಸ್ಥಳಕ್ಕೆ ಆಗಮಿಸಿ ಮೈದಾನದ ಸುಸ್ಥಿತಿಗೆ ಕ್ರಮ ವಹಿಸಬೇಕು ಎಂದು ಅಪ್ಪಚ್ಚು ರಂಜನ್ ಒತ್ತಾಯಿಸಿದರು.
ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ನಗರೋತ್ಥಾನ ಯೋಜನೆಯಡಿ ರೂ. 5 ಕೋಟಿ ಅನುದಾನ ನೀಡಲಾಗಿತ್ತು. ಇದರಲ್ಲಿ ರಸ್ತೆ ಬದಿಯಲ್ಲಿ ಫುಟ್ಪಾತ್ ನಿರ್ಮಾಣ ಹಾಗೂ ಇಂಟರ್ಲಾಕ್ ಕಾಮಗಾರಿಗೆ ಅನುದಾನ ಮೀಸಲಿಟ್ಟಿದ್ದರೂ ಈವರೆಗೆ ಕಾಮಗಾರಿ ಪೂರ್ಣಗೊಂಡಿಲ್ಲ. ಅಮೃತ್-2 ಯೋಜನೆಯಡಿ ಕುಡಿಯುವ ನೀರಿಗಾಗಿ ರೂ. 15 ಕೋಟಿ ಅನುದಾನ ಬಿಡುಗಡೆ ಮಾಡಿಸಿದ್ದೆವು. ಅದೂ ಕೂಡ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ ಎಂದು ಆರೋಪಿಸಿದರು.
ಅಮೃತ್-2 ಯೋಜನೆಯಡಿ ಹೊಸ ಟ್ಯಾಪ್ಗಳು ಹಾಗೂ ಪೈಪ್ಲೈನ್ ಅಳವಡಿಸಬೇಕಿತ್ತು. ಆದರೆ ಈವರೆಗೂ ಜನರಿಗೆ ಸಮರ್ಪಕವಾಗಿ ನೀರು ಪೂರೈಕೆಯಾಗುತ್ತಿಲ್ಲ. ಕುಶಾಲನಗರ ಹಾಗೂ ಮಡಿಕೇರಿಯಲ್ಲೂ ಇದೇ ಪರಿಸ್ಥಿತಿ ಇದೆ. ಗುತ್ತಿಗೆದಾರರನ್ನು ಕರೆದು ಕಟ್ಟುನಿಟ್ಟಿನ ಸೂಚನೆ ನೀಡಿ ಕಾಮಗಾರಿ ಪೂರ್ಣಗೊಳಿಸಲು ಶಾಸಕರು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಸೋಮವಾರ ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಮಂಗಳವಾರ ಕುಶಾಲನಗರ ಹಾಗೂ ಶುಕ್ರವಾರ ಮಡಿಕೇರಿಯಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭ ಪ್ರಮುಖರಾದ ಕಿಬ್ಬೆಟ್ಟ ಧರ್ಮಪ್ಪ, ಎಸ್.ಆರ್. ಸೋಮೇಶ್, ಹರೀಶ್ಕುಮಾರ್, ಶರತ್ಚಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.








