ಮಡಿಕೇರಿ, NEWS DESK ಸೆ.9: ಅಧಿಕಾರಿಗಳು ಮಾನವೀಯತೆಯ ದೃಷ್ಟಿಕೋನದಿಂದ ಕರ್ತವ್ಯ ನಿರ್ವಹಿಸಬೇಕು.ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗೆ ಅಲೆಸುವುದು ಅಥವಾ ಸತಾಯಿಸುವುದು ಸರಿಯಲ್ಲ ಎಂದು ಕರ್ನಾಟಕ ಲೋಕಾಯುಕ್ತ ಮಡಿಕೇರಿ ಡಿವೈಎಸ್ಪಿ ದಿನಕರ ಶೆಟ್ಟಿ ತಿಳಿಸಿದರು.
ನಗರದ ತಾಲ್ಲೂಕು ತಹಶೀಲ್ದಾರರ ಕಚೇರಿಯಲ್ಲಿ ಬುಧವಾರ ನಡೆದ ಲೋಕಾಯುಕ್ತ ದೂರು ಅರ್ಜಿ ಸ್ವೀಕಾರ ಸಂದರ್ಭ ದೂರು ಅರ್ಜಿಗಳನ್ನು ಸ್ವೀಕರಿಸಿ, ದೂರುದಾರರ ಅಹವಾಲುಗಳನ್ನು ಆಲಿಸಿದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲೆದರೂ ನಡೆಯದ ಕೆಲಸ-ಮನವಿದಾರ ಬಾಲಕೃಷ್ಣ ಅವರು ಕಳೆದ ಮೂರು ವರ್ಷಗಳಿಂದ ಭೂಮಿ ದುರಸ್ತಿಗಾಗಿ ಕಚೇರಿಗೆ ಅಲೆಯುತ್ತಿದ್ದರೂ, ಇದುವರೆಗೆ ಸಮಸ್ಯೆ ಬಗೆಹರಿದಿಲ್ಲ ಎಂದು ದೂರಿದರು. ಮತ್ತೊಬ್ಬರು ತಮ್ಮ ಜಮೀನು ಒತ್ತುವರಿಯಾಗಿದ್ದು, ಸರ್ವೆ ನಡೆಸಿ ಸರಿಪಡಿಸುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದರು. ಇನ್ನೊಬ್ಬ ದೂರುದಾರರು ಜಮೀನಿನ ಖಾತೆ ಮಾಡಿಕೊಡುವಂತೆ ಹಲವು ಬಾರಿ ಮನವಿ ಮಾಡಿದರೂ ಕೆಲಸವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಭೂಮಿ ದುರಸ್ತಿ ಕಾರ್ಯ ಪೂರ್ಣಗೊಂಡಲ್ಲಿ ಕುಟುಂಬದ ಸದಸ್ಯರಿಗೆ ಜಮೀನಿನ ಪಾಲು ಮಾಡಲು ಅನುಕೂಲವಾಗಲಿದೆ. ಸಣ್ಣ ಪ್ರಮಾಣದ ಭೂಮಿ ಹೊಂದಿರುವವರು ಜಮೀನು ವಿಭಜನೆ ಮಾಡಿಕೊಳ್ಳಲು ದುರಸ್ತಿ ಅಗತ್ಯವಾಗಿದ್ದು, ಈ ಕಾರ್ಯ ವಿಳಂಬವಾದರೆ ಕುಟುಂಬದವರಿಗೆ ಭಾಗ ಮಾಡುವುದು ಕಷ್ಟವಾಗುತ್ತದೆ ಎಂದು ದೂರುದಾರರು ಡಿವೈಎಸ್ಪಿ ಅವರ ಗಮನಕ್ಕೆ ತಂದರು.
ಕೆಲಸ ವಿಳಂಬ ಸಲ್ಲ-ಅಹವಾಲುಗಳನ್ನು ತಾಳ್ಮೆಯಿಂದ ಆಲಿಸಿದ ದಿನಕರ ಶೆಟ್ಟಿ ಅವರು, ಕಳೆದ ಮೂರು ವರ್ಷಗಳಿಂದ ಭೂಮಿ ದುರಸ್ತಿ ಮಾಡದೆ ಸಾರ್ವಜನಿಕರನ್ನು ಕಚೇರಿಗೆ ಅಲೆಸುತ್ತಿರುವುದೇಕೆ ಎಂದು ಪ್ರಶ್ನಿಸಿದರು. ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ, ಮಾನವೀಯತೆಯಿಂದ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ ಎಂದು ಹೇಳಿದರು. 15 ದಿನಗಳೊಳಗೆ ಭೂಮಿ ದುರಸ್ತಿ ಕಾರ್ಯ ಪೂರ್ಣಗೊಳ್ಳದಿದ್ದಲ್ಲಿ ಮತ್ತೊಮ್ಮೆ ತಮ್ಮ ಗಮನಕ್ಕೆ ತರುವಂತೆ ದೂರುದಾರರಿಗೆ ಸಲಹೆ ನೀಡಿದರು.
ಖಾಲಿ ನಿವೇಶನದಲ್ಲಿರುವ ಉದ್ಯಾನವನದ ಜಾಗವನ್ನೂ ಖಾತೆ ಮಾಡಿರುವ ಕುರಿತು ದೂರುಗಳು ಬರುತ್ತಿವೆ. ಅಧಿಕಾರಿಗಳು ಇಂತಹ ಕಾರ್ಯಗಳಿಗೆ ಮುಂದಾಗಬಾರದು. ಸಾರ್ವಜನಿಕರಿಂದ ದೂರುಗಳು ಬಂದಾಗ ಸಂಬAಧಪಟ್ಟ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿ ಸಮಸ್ಯೆ ಪರಿಹರಿಸಬೇಕು ಎಂದು ದಿನಕರ ಶೆಟ್ಟಿ ಸೂಚಿಸಿದರು.
ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ನೂರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಅವರಿಗೆ ಸಮಯಕ್ಕೆ ಸರಿಯಾಗಿ ಬಿಸಿನೀರು ದೊರೆಯುವಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು. ಕೆಲವು ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿ ಬಿಸಿನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಈ ಕುರಿತು ವಿಶೇಷವಾಗಿ ಗಮನಹರಿಸುವಂತೆ ಸೂಚಿಸಿದರು.
ರಾಜಾಸೀಟ್ ಬಳಿಯ ಕೂರ್ಗ್ ವಿಲೇಜ್ ಬಗ್ಗೆಯೂ ಲೋಕಾಯುಕ್ತ ಡಿವೈಎಸ್ಪಿ ಮಾಹಿತಿ ಪಡೆದರು. ಕೂರ್ಗ್ ವಿಲೇಜ್ನ ಜಾಗವು ಸಾರ್ವಜನಿಕ ಉಪಯೋಗಕ್ಕೆ ಬಾರದಿರುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ವಿವಿಧ ಸರ್ಕಾರಿ ಕಚೇರಿಗಳಲ್ಲಿರುವ ಲೋಕಾಯುಕ್ತ ನಾಮಫಲಕಗಳಲ್ಲಿ ಸಂಚಾರಿ ದೂರವಾಣಿ ಸಂಖ್ಯೆಗಳು ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ನಮೂದಿಸಬೇಕು. ಕೆಲವು ಕಚೇರಿಗಳಲ್ಲಿ ದೂರವಾಣಿ ಸಂಖ್ಯೆಯನ್ನು ಸಣ್ಣದಾಗಿ ಅಥವಾ ಸರಿಯಾಗಿ ಕಾಣದ ರೀತಿಯಲ್ಲಿ ಬರೆದಿರುವ ಕುರಿತು ದೂರುಗಳು ಬರುತ್ತಿವೆ ಎಂದು ತಿಳಿಸಿದರು.
ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ವೀಣಾ ನಾಯಕ್ ಮಾತನಾಡಿದರು. ಕಡಗದಾಳುವಿನ ಶಿವಶಂಕರ, ಯವಕಪಾಡಿಯ ಕೆ.ಬಿ.ಪೊಣ್ಣಪ್ಪ ಹಾಗೂ ಮೇಕೇರಿಯ ಕೆ.ಎಸ್.ಮೊಣ್ಣಪ್ಪ ಅವರು ಭೂಮಿ ವಿಲೇವಾರಿಗೆ ಸಂಬoಧಿಸಿದoತೆ ಮನವಿ ಸಲ್ಲಿಸಿದರು.
ತಾಲ್ಲೂಕು ಪಂಚಾಯಿತಿ ಇಒ ಶೇಖರ್ ಅವರು ಹಿಂದಿನ ಸಭೆಯ ನಡಾವಳಿಯನ್ನು ಓದಿದರು. ಶಿರಸ್ತೇದಾರ್ ದೇವರಾಜು ಅವರು ಕಂದಾಯ ಇಲಾಖೆಗೆ ಸಂಬoಧಿಸಿದ ಮಾಹಿತಿಯನ್ನು ನೀಡಿದರು. ಭೂದಾಖಲೆಗಳ ಸಹಾಯಕ ನಿರ್ದೇಶಕ ಮಹೇಶ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದು, ಸಂಬoಧಿಸಿದ ವಿಷಯಗಳ ಕುರಿತು ಮಾಹಿತಿ ನೀಡಿದರು.








