ಸುಂಟಿಕೊಪ್ಪ, NEWS DESK ಸೆ. 12: ದೇವರು ಮತ್ತು ಭಕ್ತರ ನಡುವಿನ ಕೊಂಡಿಯಾಗಿ ಅರ್ಚಕರು ಕಾರ್ಯನಿರ್ವಹಿಸಿದರೆ, ಪತ್ರಿಕಾ ವಿತರಕರು ಪತ್ರಿಕೆ ಮತ್ತು ಓದುಗರ ಹಾಗೂ ಸಮಾಜದ ನಡುವಿನ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹಿರಿಯ ಪತ್ರಕರ್ತ ಹಾಗೂ ‘ಶಕ್ತಿ’ ಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಅಭಿಪ್ರಾಯಪಟ್ಟರು.
ಕೊಡಗು ಪತ್ರಕರ್ತರ ಸಂಘ ಮತ್ತು ಕುಶಾಲನಗರ ತಾಲೂಕು ಘಟಕದ ಆಶ್ರಯದಲ್ಲಿ, ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಕೊಡಗು ಘಟಕದ ಸಹಯೋಗದಲ್ಲಿ ಇಲ್ಲಿನ ಕೇರಳ ಸಮಾಜಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಪತ್ರಿಕಾ ವಿತರಕರ ದಿನಾಚರಣೆ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘ ಕೊಡಮಾಡುವ ಶೈಕ್ಷಣಿಕ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೆ ಮತ್ತು ಪತ್ರಿಕಾ ವಿತರಕರು ಒಂದು ಕುಟುಂಬವಿದ್ದಂತೆ. ಪತ್ರಿಕಾ ಸಂಪಾದಕರು ಎಷ್ಟೇ ಉತ್ತಮವಾಗಿ ಪತ್ರಿಕೆಯನ್ನು ಹೊರತಂದರೂ ಅದು ಓದುಗರಿಗೆ ತಲುಪದಿದ್ದರೆ ವ್ಯರ್ಥ. ಆದ್ದರಿಂದ ಪತ್ರಿಕೆಗಳ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ವಿಶ್ಲೇಷಿಸಿದರು.
ಇತ್ತೀಚಿನ ವರ್ಷಗಳಲ್ಲಿ ಹಿರಿಯ ತಲೆಮಾರಿನವರು ಮಾತ್ರ ಪತ್ರಿಕೆಗಳನ್ನು ಓದುತ್ತಿದ್ದು, ಯುವಜನರಲ್ಲಿ ಪತ್ರಿಕೆ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ವಿಷಾದಿಸಿದ ಅವರು, ಪತ್ರಿಕೆ ವಿತರಣೆ ಎಷ್ಟು ಕಷ್ಟ ಎಂಬುದು ತಮಗೂ ಅರಿವಿದೆ ಎಂದು ಸ್ವಾನುಭವವನ್ನು ಬಿಚ್ಚಿಟ್ಟರು.
ಇಂದು ಪತ್ರಿಕಾ ವಿತರಣೆ ಲಾಭದಾಯಕ ವೃತ್ತಿಯಾಗಿ ಉಳಿದಿಲ್ಲ. ಬದಲಾಗಿ ಪತ್ರಿಕೆಗಳ ಮೇಲಿನ ಪ್ರೀತಿಯಿಂದ ಮಾತ್ರ ವಿತರಕರು ಕಾರ್ಯನಿರ್ವಹಿಸುತ್ತಿದ್ದಾರೆ. ಓದುಗರು ಇದನ್ನು ಅರ್ಥಮಾಡಿಕೊಳ್ಳಬೇಕಿದೆ ಎಂದು ಹೇಳಿದರು.
ಕಳೆದ ಹತ್ತು ವರ್ಷಗಳಲ್ಲಿ ಎಲ್ಲಾ ವಸ್ತುಗಳ ಬೆಲೆ ಏರಿಕೆಯಾಗಿದೆ. ಆದರೆ ಪತ್ರಿಕೆಗಳ ಬೆಲೆ ಮಾತ್ರ ನಿಂತ ನೀರಾಗಿದೆ ಎಂದು ನುಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಪತ್ರಿಕಾ ವಿತರಕರೇ ಪತ್ರಿಕೆಗಳಿಗೆ ಸುದ್ದಿಗಳನ್ನು ನೀಡುವ ವರದಿಗಾರರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಸಮಾಜದ ಸಮಸ್ಯೆಗಳನ್ನು ಪತ್ರಿಕೆಗಳ ಗಮನಕ್ಕೆ ತರುವ ಮೂಲಕ ಸಮಾಜದಲ್ಲಿ ಸಾಕಷ್ಟು ಬದಲಾವಣೆ ತರಲು ಸಾಧ್ಯವಿದೆ ಎಂದು ತಿಳಿಸಿದರು.
ಪತ್ರಿಕಾ ವಿತರಕರ ಕ್ಷೇಮ ನಿಧಿಗಾಗಿ ‘ಶಕ್ತಿ’ ಸಂಸ್ಥೆಯಿಂದ ಒಂದು ಲಕ್ಷ ರೂ.ಗಳ ನೆರವನ್ನು ಎರಡು ವರ್ಷಗಳ ಹಿಂದೆಯೇ ಘೋಷಿಸಿದ್ದು, ಅದನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಪತ್ರಿಕಾ ವಿತರಕರ ಸಂಘದ ಅಧ್ಯಕ್ಷ ಟಿ.ಜಿ. ಸತೀಶ್ ಅವರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್ ಅವರು ಪತ್ರಿಕೆಗಳು, ಪತ್ರಿಕಾ ವಿತರಕರು ಮತ್ತು ಪತ್ರಕರ್ತರ ಸಮಸ್ಯೆಗಳ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು. ಜಿಲ್ಲೆಯ ಪ್ರಮುಖ ಪಟ್ಟಣಗಳಲ್ಲಿ ಪತ್ರಿಕಾ ವಿತರಕರಿಗೆ ವಸತಿ ಸಂಕೀರ್ಣಗಳನ್ನು ಸರ್ಕಾರ ನಿರ್ಮಿಸಿಕೊಡಬೇಕು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿಗೆ ಅನುದಾನ ನೀಡುವುದಾಗಿ ಘೋಷಿಸಿದ್ದು, ಅದು ಇನ್ನೂ ಅನುಷ್ಠಾನಗೊಂಡಿಲ್ಲ ಎಂದು ವೇದಿಕೆಯಲ್ಲಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಗಮನಕ್ಕೆ ತಂದರು. ಅಲ್ಲದೆ, ಈ ನಿಟ್ಟಿನಲ್ಲಿ ಸರ್ಕಾರದ ಗಮನಸೆಳೆಯುವಂತೆ ಮನವಿ ಮಾಡಿದರು.
ಮುಖ್ಯ ಅತಿಥಿಯಾಗಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಪತ್ರಿಕಾ ವಿತರಕರು ಮತ್ತು ಏಜೆಂಟರು ಅಸಂಘಟಿತ ಕಾರ್ಮಿಕರ ವಿಭಾಗಕ್ಕೆ ಸೇರುತ್ತಿದ್ದು, ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಪಡೆದುಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ಸಂಘದ ಮೂಲಕ ಪ್ರತಿಯೊಬ್ಬರೂ ಈ ಸೌಲಭ್ಯವನ್ನು ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕೊರವಂಡ ವಸಂತಿ ಪೊನ್ನಪ್ಪ ಮತ್ತು ಕೊರವಂಡ ಪೊನ್ನಪ್ಪ ಅವರು ಸ್ಥಾಪಿಸಿರುವ ಶೈಕ್ಷಣಿಕ ದತ್ತಿ ನಿಧಿಯ ಪ್ರತಿಭಾ ಪುರಸ್ಕಾರವನ್ನು ಶಿರಂಗಾಲದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಣಯ್ ಬಿ.ಪಿ. ಅವರಿಗೆ ನೀಡಿ ಗೌರವಿಸಲಾಯಿತು.
ಇತ್ತೀಚೆಗೆ ಸುಂಟಿಕೊಪ್ಪದಲ್ಲಿ ಜಾತ್ಯತೀತ ಮತ್ತು ಪಕ್ಷಾತೀತ ನೆಲೆಗಟ್ಟಿನಲ್ಲಿ ಸಂಘಟಿಸಲಾಗಿರುವ ‘ವೇವ್’ ಸಂಘಟನೆಯ ಕುರಿತು ಕರ್ನಾಟಕ ಉಚ್ಚ ನ್ಯಾಯಾಲಯದ ವಕೀಲ ಪರಾಜ್ ಉಸ್ಮಾನ್ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ಬಿ.ಸಿ. ದಿನೇಶ್ ವಹಿಸಿದ್ದರು.
ವೇದಿಕೆಯಲ್ಲಿ ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಟಿ.ಜಿ. ಸತೀಶ್, ವೇವ್ ಸಂಸ್ಥೆಯ ಅಧ್ಯಕ್ಷ ಕೆ.ಎ. ಲತೀಫ್, ಕೇರಳ ಸಮಾಜದ ಪಿ. ರವೀಂದ್ರನ್, ಜಿಲ್ಲಾ ಸಂಘದ ಖಜಾಂಜಿ ಹಾಗೂ ಕಾರ್ಯಕ್ರಮದ ಸಂಚಾಲಕ ಟಿ.ಕೆ. ಸಂತೋಷ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತ್ರಿಕಾ ವಿತರಕರು, ಏಜೆಂಟರು ಹಾಗೂ ಪತ್ರಿಕಾ ಕ್ಷೇತ್ರಕ್ಕೆ ಸಂಬಂಧಿಸಿದ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಮೊದಲಿಗೆ ಸಂಘದ ಉಪಾಧ್ಯಕ್ಷ ನವೀನ್ ಚಿನ್ನಪ್ಪ ಪ್ರಾರ್ಥಿಸಿದರು. ತಾಲೂಕು ಸಂಘದ ಸಲಹೆಗಾರ ಕೆ. ತಿಮ್ಮಪ್ಪ ಸ್ವಾಗತಿಸಿದರು. ಖಜಾಂಜಿ ಕೆ.ಎಸ್. ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕು ಸಂಘದ ಸಹಕಾರ್ಯದರ್ಶಿ ಬಿ.ಎನ್. ರವಿಕುಮಾರ್ ವಂದಿಸಿದರು.







