
ಕುಟ್ಟ, ಸೆ.19 NEWS DESK : ಓಂ ಶಾಂತಿ ಬ್ರಹ್ಮಕುಮಾರಿ ಮಡಿಕೇರಿ ಹಾಗೂ ಗೋಣಿಕೊಪ್ಪ ಶಾಖೆಯ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಕುಟ್ಟದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲಾ ದೇವಿ ಹಾಗೂ ಶಿಕ್ಷಕ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿ, ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟರು. ರಾಜಯೋಗಿನಿ ಬ್ರಹ್ಮಕುಮಾರಿ ಧನಲಕ್ಷ್ಮಿ ಅಕ್ಕನವರು ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿ, ಕಲಿಕೆ ಶಾಲೆಗೆ ಮಾತ್ರ ಸೀಮಿತವಾಗಿರದೆ, ಜೀವನದುದ್ದಕ್ಕೂ ಅಗತ್ಯವಾಗಿದೆ. ರಾಜಯೋಗವು ಶಾಂತವಾಗಿ ಹಾಗೂ ಒತ್ತಡಮುಕ್ತವಾಗಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಸಹೋದರಿ ಅಲಿಮಾ ಸೇರಿದಂತೆ ಶಾಲೆಯ ಶಿಕ್ಷಕ ವೃಂದವನ್ನು ಸನ್ಮಾನಿಸಿ ಗೌರವಿಸಲಾಯಿತು. ಇದೇ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿ, ಪ್ರಸ್ತುತ ಈಶ್ವರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಾಗಿರುವ ಸಂತೋಷ್, ರೇಷ್ಮಾ ಹಾಗೂ ರತೀಶ್ ಅವರನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಲಾಯಿತು. ವಿದ್ಯಾರ್ಥಿಗಳಲ್ಲಿ ಮೌಲ್ಯಗಳ ಅರಿವು ಮೂಡಿಸುವುದು, ಧ್ಯಾನದ ಮಹತ್ವ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಜ್ಞಾನದ ಅಗತ್ಯತೆಯ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು. ಬ್ರಹ್ಮಕುಮಾರಿ ರೇಖಾ ಅವರು ಮಕ್ಕಳಿಗೆ ಅನ್ನವನ್ನು ಸ್ವೀಕರಿಸುವ ಸಂದರ್ಭದಲ್ಲಿ ಮನಸ್ಸಿನಲ್ಲಿ ಪರಮಾತ್ಮನನ್ನು ಸ್ಮರಿಸಿ ಪ್ರಸಾದದ ರೂಪದಲ್ಲಿ ಸ್ವೀಕರಿಸುವ ವಿಧಾನದ ಕುರಿತು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಬ್ರಹ್ಮಕುಮಾರ್ ಅಯ್ಯಪ್ಪ, ಕಾಂತಿ, ಚೈತ್ರ, ಸಂತೋಷ್, ರತೀಶ್, ರೇಷ್ಮಾ ಹಾಗೂ ಪ್ರಕಾಶ್ ಸೇರಿದಂತೆ ಹಲವು ಸಹೋದರ-ಸಹೋದರಿಯರು ಪಾಲ್ಗೊಂಡಿದ್ದರು. ಶಾಲೆಯ ಸ್ವಚ್ಛ ಹಾಗೂ ಸುಂದರ ಪರಿಸರವನ್ನು ಶ್ಲಾಘಿಸಿದ ಅವರು, ವಿದ್ಯಾರ್ಥಿಗಳಿಗೆ ಪ್ರೀತಿಯಿಂದ ಬೋಧನೆ ನೀಡಿ, ಶಾಲೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು. ನಂತರ ಪ್ರಸಾದ ವಿನಿಯೋಗ ನಡೆಯಿತು. ಶಿಕ್ಷಕರ ದಿನಾಚರಣೆಯನ್ನು ಮೌಲ್ಯಯುತ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.










