ಶೀಘ್ರದಲ್ಲೇ ಭವ್ಯ ಮಂದಿರ ನಿರ್ಮಾಣ

ಆಯೋಧ್ಯೆ ಆ.6 : ಭಗವಾನ್ ಶ್ರೀರಾಮನ ಮಂದಿರಕ್ಕಾಗಿ ಕೋಟ್ಯಂತರ ಭಾರತೀಯರ ಶತಮಾನಗಳ ಕಾಯುವಿಕೆ ಅಂತ್ಯವಾಗಲಿದ್ದು, ಅಯೋಧ್ಯೆಯಲ್ಲಿ ಶೀಘ್ರದಲ್ಲೇ ಭವ್ಯ ರಾಮ ಮಂದಿರ ನಿರ್ಮಾಣವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇಂದು ಆಯೋಧ್ಯೆಯಲ್ಲಿ ನಡೆದ ರಾಮಮಂದಿರ ಶಿಲಾನ್ಯಾಸ ನೆರವೇರಿಸಿ ಬಳಿಕ ಗಣ್ಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಜೈ ಶ್ರೀರಾಮ ಘೋಷಣೆಯ ಈ ಧ್ವನಿ ಜಗತ್ತಿನಾದ್ಯಂತ ಪ್ರತಿಧ್ವನಿಸುತ್ತಿದೆ. ಎಲ್ಲರಿಗೂ ಅಭಿನಂದನೆಗಳು. ಇಂದು ಇಡೀ ದೇಶ ರೋಮಾಂಚಿತವಾಗಿದೆ. ಎಲ್ಲವೂ ರಾಮಮಯ. ಎಲ್ಲರ ಮನಸ್ಸೂ ಬೆಳಗುತ್ತಿದೆ. ಇಡೀ ಭಾರತ ಬಾವುಕವಾಗಿದೆ. ಬಹುಕಾಲದ ನಿರೀಕ್ಷೆ ಇಂದು ಕೊನೆಯಾಗಿದೆ ಎಂದು ಹೇಳಿದರು.
‘ದೇಶದ ಕೋಟಿಕೋಟಿ ರಾಮಭಕ್ತರಿಗೆ ಈ ಶುಭದಿನದ ಕೋಟಿಕೋಟಿ ಶುಭಾಶಯಗಳು. ಈ ಮಹತ್ವದ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿದ್ದಾಗಿ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ಗೆ ನಾನು ಹೃದಯಪೂರ್ವಕ ಆಭಾರಿಯಾಗಿದ್ದಾನೆ. ಭಾರತವು ಇಂದು ಸೂರ್ಯನ ಸನ್ನಿಧಿಯಲ್ಲಿ, ಸರಯೂ ನದಿಯ ತೀರದಲ್ಲಿ ಹೊಸ ಅಧ್ಯಾಯ ಬರೆಯುತ್ತಿದೆ. ಇಡೀ ದೇಶವು ಇಂದು ರಾಮಮಯವಾಗಿದೆ. ಇಡೀದೇಶ ರೋಮಾಂಚಿತವಾಗಿದೆ. ಪ್ರತಿ ಮನಸ್ಸಿನಲ್ಲಿಯೂ ಜ್ಯೋತಿ ಬೆಳಗುತ್ತಿದೆ. ಪೂರ್ತಿ ಭಾರತ ಭಾವುಕವಾಗಿದೆ. ಸಮಸ್ತ ಭಾರತೀಯರ ಹಲವು ವರ್ಷಗಳ ಕಾಯುವಿಕೆ ಇಂದು ಅಂತ್ಯವಾಗಿದ್ದು, ಕೋಟ್ಯಂತರ ಜನರು ಈ ಪವಿತ್ರ ದಿನ ನೋಡಲೆಂದು ಉಸಿರು ಬಿಗಿ ಹಿಡಿದಿದ್ದರು. ಇದೀಗ ರಾಮ ಜನ್ಮ ಸ್ಥಳ ಅಯೋಧ್ಯೆಯಲ್ಲಿ ನಮ್ಮ ರಾಮಲಲ್ಲಾನಿಗಾಗಿ ಒಂದು ಭವ್ಯ ಮಂದಿರ ನಿರ್ಮಾಣವಾಗಲಿದೆ’.
