ತಲಕಾವೇರಿಯಲ್ಲಿ ಮುಂದುವರಿದ ಕಾರ್ಯಾಚರಣೆ : ಬಟ್ಟೆ, ಪಾತ್ರೆಗಳಷ್ಟೇ ಪತ್ತೆ : ನಾರಾಯಣಾಚಾರ್ ಪುತ್ರಿಯರ ಆಗಮನ

ಮಡಿಕೇರಿ ಆ.10 : ತಲಕಾವೇರಿಯ ಗಜಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ನಾಪತ್ತೆಯಾಗಿರುವವರ ಪತ್ತೆ ಕಾರ್ಯ ಚುರುಕುಗೊಂಡಿದೆ. ಎರಡು ದಿನಗಳ ಹಿಂದೆ ಓರ್ವರ ಮೃತದೇಹ ಮಾತ್ರ ಇಲ್ಲಿ ಪತ್ತೆಯಾಗಿತ್ತು. ಉಳಿದ ನಾಲ್ವರಿಗಾಗಿ ಶೋಧ ಕಾರ್ಯ ಮುಂದುವರೆದಿದ್ದು, ಇಂದು ನಾರಾಯಣಾಚಾರ್ ಅವರ ಮನೆಯ ಕೆಲವು ಪಾತ್ರೆಗಳು, ಪೂಜಾ ಸಾಮಾಗ್ರಿಗಳು ಮತ್ತು ಬಟ್ಟೆಗಳು ಮಾತ್ರ ಲಭಿಸಿದೆ.
ವಸತಿ ಮತ್ತು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಖುದ್ದು ಶೋಧ ಕಾರ್ಯದ ಸ್ಥಳಕ್ಕೆ ತೆರಳಿ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಎನ್ಡಿಆರ್ಎಫ್ ಮತ್ತು ಅರಣ್ಯ ಇಲಾಖೆಯ ತಂಡಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಶೋಧ ಕಾರ್ಯಾಚರಣೆ ಶೀಘ್ರ ಪೂರ್ಣಗೊಳ್ಳುವ ಭರವಸೆ ನನಗಿದೆ, ಬೆಟ್ಟ ಕುಸಿತದಿಂದ ಕಣ್ಮರೆಯಾಗಿರುವವರ ಶೋಧ ಕಾರ್ಯಕ್ಕಾಗಿ ಎಲ್ಲಾ ರೀತಿಯ ಕ್ರಮ ಕೈಗೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.
ನಂತರ ತಲಕಾವೇರಿ ದೇವಾಲಯಕ್ಕೆ ತೆರಳುವ ಮಾರ್ಗದಲ್ಲಿ ಬೆಟ್ಟ ಕುಸಿತ ಆರಂಭಗೊಂಡ ಪ್ರದೇಶದ ಪರಿವೀಕ್ಷಣೆಯನ್ನು ನಡೆಸಿದರು. ಸಾಧ್ಯವಾದಷ್ಟು ಶೀಘ್ರವಾಗಿ ತಲಕಾವೇರಿ ದೇವಾಲಯಕ್ಕೆ ರಸ್ತೆ ಸಂಪರ್ಕ ಕಲ್ಪಿಸುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
::: ಪುತ್ರಿಯರ ಭೇಟಿ :::
ತಲಕಾವೇರಿ ಪ್ರಧಾನ ಅರ್ಚಕರಾಗಿದ್ದ ನಾರಾಯಣಾಚಾರ್ ಅವರ ಇಬ್ಬರು ಪುತ್ರಿಯರಾದ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ನಲ್ಲಿ ನೆಲೆಸಿರುವ ಶಾರದಾ ಹಾಗೂ ನಮಿತಾ ಸೋಮವಾರ ಭಾಗಮಂಡಲ ಹೋಟೆಲ್ ಮಯೂರದಲ್ಲಿ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಪೋಷಕರು ನಾಪತ್ತೆಯಾದ ಬಗ್ಗೆ ಮಾಹಿತಿ ಪಡೆದರು.
ಅನಾಹುತ ನಡೆದ ಪ್ರದೇಶದಲ್ಲಿ ತಮ್ಮ ಅಪ್ಪ, ಅಮ್ಮನಿಗೆ ಸೇರಿದ ವಸ್ತುಗಳು ಸಿಕ್ಕಾಗ ಅವುಗಳನ್ನು ಹಿಡಿದು ಕಣ್ಣೀರು ಹಾಕಿದರು.
::: ಅಧಿಕಾರಿಗಳ ಸಭೆ :::
ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ತಲಕಾವೇರಿಯಲ್ಲಿ ನಡೆಯುತ್ತಿರುವ ಕಾರ್ಯಾಚರಣೆ, ಪರಿಹಾರ ಕೇಂದ್ರಗಳ ನಿರ್ವಹಣೆ ಮತ್ತಿತರ ವಿಚಾರಗಳ ಕುರಿತು ಸಭೆ ನಡೆಸಿದ ವಿ.ಸೋಮಣ್ಣ ಅವರು ಈಗಾಗಲೇ ಹಿಟಾಚಿ ಆಗಮಿಸಿರುವ ಹಿನ್ನೆಲೆ ಕಾರ್ಯಾಚರಣೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಕಾರ್ಯಾಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಕಾಲ ಕಾಲಕ್ಕೆ ಸ್ಪಷ್ಟ ಮಾಹಿತಿ ನೀಡಬೇಕು ಎಂದು ಅವರು ನಿರ್ದೇಶನ ನೀಡಿದರು.
ಈಗಾಗಲೇ ಪಾಳಿಯಲ್ಲಿ ಕೆಲಸ ನಿರ್ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಕಾರ್ಯಾಚರಣೆಯಲ್ಲಿ ತೊಡಗಿಸಿಕೊಳ್ಳುವವರಿಗೆ ಸರಿಯಾದ ಸಮಯಕ್ಕೆ ಊಟೋಪಚಾರ, ಕುಡಿಯುವ ನೀರು ಒದಗಿಸುವಂತೆ ಸೂಚನೆ ನೀಡಿದರು.
ತಹಶೀಲ್ದಾರರು ಕಾರ್ಯಾಚರಣೆ ಸ್ಥಳದಲ್ಲಿಯೇ ಮೊಕ್ಕಾಂ ಹೂಡಬೇಕು. ಕಾಲ ಕಾಲಕ್ಕೆ ಮಾಹಿತಿ ನೀಡಬೇಕು ಎಂದು ಸಚಿವರು ಸೂಚಿಸಿದರು. ಕಾರ್ಯಾಚರಣೆ ಮುಗಿಯುವವರೆಗೆ ನಾನು ಜಿಲ್ಲೆಯಲ್ಲಿಯೇ ಇರುತ್ತೇನೆ ಎಂದರು.
ಕಾರ್ಯಾಚರಣೆ ಬಗ್ಗೆ ಡಿವೈಎಸ್ಪಿ ಅವರು ಮೇಲ್ವಿಚಾರಣೆ ನೋಡಿಕೊಳ್ಳಬೇಕು. ಕಾರ್ಯಾಚರಣೆ ಸ್ಥಳದಲ್ಲಿ ತಾತ್ಕಾಲಿಕ ಟೆಂಟ್ ಸಿದ್ದಪಡಿಸುವಂತೆ ಸಚಿವರು ಸಲಹೆ ಮಾಡಿದರು.
ಶಾಸಕ ಕೆ.ಜಿ.ಬೋಪಯ್ಯ ಅವರು ಮಾತನಾಡಿ ಕಾರ್ಯಾಚರಣೆ ಚುರುಕುಗೊಳಿಸಬೇಕು, ಪರಿಸ್ಥಿತಿಯನ್ನು ಅರ್ಥಮಾಡಿ ಕೊಂಡು ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಅಧಿಕಾರಿಗಳು ತಮಗೆ ವಹಿಸಲಾಗಿರುವ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಅರಣ್ಯ ಇಲಾಖೆಯ 25 ಸಿಬ್ಬಂದಿಗಳು, ಅಗ್ನಿ ಶಾಮಕ ಇಲಾಖೆಯಿಂದ 8 ಮಂದಿ, ಎನ್ಡಿಆರ್ಎಫ್ನಿಂದ 23 ಮಂದಿ ಹಾಗೂ ಸ್ಥಳೀಯರು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ತಲಕಾವೇರಿ ಬಳಿ ಇರುವ ಅರಣ್ಯ ಇಲಾಖೆ ಪ್ರವಾಸಿ ಮಂದಿರವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಅವರು ತಿಳಿಸಿದರು.
ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನಿಲ್ ಸುಬ್ರಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ತಾ.ಪಂ.ಇಒ ಲಕ್ಷ್ಮೀ ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮದನ್ ಮೋಹನ್, ಡಿವೈಎಸ್ಪಿ ದಿನೇಶ್ ಕುಮಾರ್, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಚಂದನ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ಶಿರಾಲಿ, ತಹಶೀಲ್ದಾರ್ ಮಹೇಶ್, ಭಾಗಮಂಡಲ ಪಿಡಿಒ ಅಶೋಕ್ ಕುಮಾರ್, ಕಂದಾಯ ಇಲಾಖೆ ಅಧಿಕಾರಿಗಳು ಇತರರು ಹಾಜರಿದ್ದರು.