ಸರ್ಕಾರದ ವಿರುದ್ಧ ಕೊಡಗು ಕಾಂಗ್ರೆಸ್ ಜನಧ್ವನಿ ಪ್ರತಿಭಟನೆ : ಮಳೆಹಾನಿ ಪರಿಹಾರ ಬಿಡುಗಡೆಗೆ ಒತ್ತಾಯ

20/08/2020

ಮಡಿಕೇರಿ ಆ.20 : ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಜನಧ್ವನಿ ಘೋಷ ವಾಕ್ಯದೊಂದಿಗೆ ನಗರದಲ್ಲಿ ಪ್ರತಿಭಟನೆ ನಡೆಸಿತು.
ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಇಡೀ ವಿಶ್ವವೇ ಕೋವಿಡ್ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು. ಕೋವಿಡ್ ನಿರ್ವಹಣೆ ಮತ್ತು ವೈದ್ಯಕೀಯ ಪರಿಕರಗಳ ಖರೀದಿ ವ್ಯವಹಾರದ ತನಿಖೆಯನ್ನು ನ್ಯಾಯಾಧೀಶರ ಮೂಲಕ ಮಾಡಬೇಕೆಂದು ಒತ್ತಾಯಿಸಿದರು.
ಭೂ ಸುಧಾರಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಿ ರೈತ ವಿರೋಧಿ ನೀತಿಯನ್ನು ಅನುಸರಿಸಲಾಗಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಲ್ಲೂ ಮಾರ್ಪಾಡು ಮಾಡಿ ಬಂಡವಾಳಶಾಹಿಗಳಿಗೆ ಹಾಗೂ ಮಧ್ಯವರ್ತಿಗಳಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದು ಟೀಕಿಸಿದರು.
ಕಾರ್ಮಿಕ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ, ಅಲ್ಲದೆ ಕೋವಿಡ್ ಪರಿಸ್ಥಿತಿಯಲ್ಲೂ ಜೀವದ ಹಂಗು ತೊರೆದು ದುಡಿಯುತ್ತಿರುವ ಆರೋಗ್ಯ ಸಿಬ್ಬಂದಿಗಳಿಗೂ ಸೂಕ್ತ ಸಂಭಾವನೆ ನೀಡದೆ ವಂಚಿಸಲಾಗುತ್ತಿದೆ ಎಂದು ಆರೋಪಿಸಿದರು.
ಕಳೆದ ವರ್ಷ ಜಿಲ್ಲೆಯಲ್ಲಿ ಅತಿವೃಷ್ಟಿಯಾದ ಸಂದರ್ಭ ರಾಜ್ಯ ಸರ್ಕಾರ ದೊಡ್ಡ ಮೊತ್ತದ ಪರಿಹಾರ ಬಿಡುಗಡೆ ಮಾಡುವ ಭರವಸೆ ನೀಡಿತ್ತು. ಆದರೆ ಇಲ್ಲಿಯವರೆಗೆ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಮತ್ತು ವಸತಿ ಸೌಲಭ್ಯ ದೊರೆತ್ತಿಲ್ಲ. ಈ ಬಾರಿಯೂ ಧಾರಾಕಾರ ಮಳೆಯಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದ್ದು, ತಕ್ಷಣ ಹಣ ಬಿಡುಗಡೆ ಮಾಡಬೇಕು. ಅಲ್ಲದೆ ಕಳೆದ ವರ್ಷ ಪರಿಹಾರದ ಮೊತ್ತ ವಿನಿಯೋಗವಾಗಿರುವ ಬಗ್ಗೆ ಲೆಕ್ಕಪತ್ರಗಳನ್ನು ಸಾರ್ವಜನಿಕವಾಗಿ ಮಂಡಿಸಬೇಕೆಂದು ಮಂಜುನಾಥ್ ಕುಮಾರ್ ಆಗ್ರಹಿಸಿದರು.
ಕೆಪಿಸಿಸಿ ಪ್ರಮುಖರಾದ ಮಿಟ್ಟು ಚಂಗಪ್ಪ, ಟಿ.ಪಿ.ರಮೇಶ್, ನಟೇಶ್ ಗೌಡ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಜಯಂತಿ, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷ ನೆರವಂಡ ಉಮೇಶ್, ಡಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಪ್ರಧಾನ ಕಾರ್ಯದರ್ಶಿ ಮಿನಾಜ್ ಪ್ರವೀಣ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಯೋಜಕ ತೆನ್ನಿರಾ ಮೈನಾ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾಕ್, ಯುವ ಕಾಂಗ್ರೆಸ್ ಅಧ್ಯಕ್ಷ ಹನೀಪ್ ಸಂಪಾಜೆ, ಸೇವಾದಳದ ಜಿಲ್ಲಾಧ್ಯಕ್ಷ ಚಿಲುವಂಡ ಕಾವೇರಪ್ಪ, ನಗರ ಮಹಿಳಾ ಘಟಕದ ಅಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ರಾಹುಲ್ ಬ್ರಿಗೇಡ್‍ನ ಅಧ್ಯಕ್ಷ ಚುಮ್ಮಿದೇವಯ್ಯ, ಯುವ ಘಟಕದ ಅಧ್ಯಕ್ಷ ಸದಾ ಮುದ್ದಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.