ಪಿಂಚಣಿ ಯೋಜನೆಗೆ ಹಸಿರು ನಿಶಾನೆ

28/08/2020

ಬೆಂಗಳೂರು ಆ.28 : ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‍ಪಿಎಸ್) ಸಚಿವ ಡಾ.ಕೆ.ಸುಧಾಕರ್ ಹಸಿರು ನಿಶಾನೆ ತೋರಿದ್ದಾರೆ.
ಸರ್ಕಾರಿ ವೈದ್ಯ, ದಂತ ವೈದ್ಯಕೀಯ ಕಾಲೇಜು, ಇವುಗಳಿಗೆ ಹೊಂದಿಕೊಂಡಿರುವ ಬೋಧಕ ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಾಯಂ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಯೋಜನೆ ಲಾಭ ಪಡೆಯಲಿದ್ದಾರೆ.
ಸಚಿವ ಸುಧಾಕರ್ ಅವರು ಅಧಿಕಾರವಹಿಸಿಕೊಂಡ ಬಳಿಕ ಅವರನ್ನು ನಿಯೋಗದಲ್ಲಿ ಭೇಟಿ ಮಾಡಿದ್ದಇಲಾಖೆಯ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪಿಂಚಣಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮನವಿ ಸಲ್ಲಿಸಿದ್ದರು. ಮನವಿ ಸ್ವೀಕರಿಸಿದ್ದ ಸಚಿವರು ಕ್ರ ಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು.
ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಬೇಡಿಕೆಗೆ ಅನುಮೋದನೆ ನೀಡುವಂತೆ ಸಚಿವ ಸುಧಾಕರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವರಿಕೆ ಮಾಡಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು ಅಧಿಕೃತ ಆದೇಶ ಹೊರಬಿದ್ದಿದೆ.