ನವರಾತ್ರಿಯ ವೈಶಿಷ್ಟ್ಯತೆಗಳು

ನವರಾತ್ರಿ ಇದು ದೇವಿಯನ್ನು ಆರಾಧಿಸುವ ಹಿಂದೂ ಧರ್ಮದ ಹಬ್ಬ. ಇದನ್ನು ಕರ್ನಾಟಕದಲ್ಲಿ ದಸರ ಎಂದು ಕರೆಯಲಾಗುತ್ತದೆ. ಪಶ್ಚಿಮ ಬಂಗಾಳದಲ್ಲಿ ಈ ಹಬ್ಬವನ್ನು ದುರ್ಗಾ ಪೂಜಾ ಎಂದು ಆಚರಿಸಲಾಗುತ್ತದೆ. ನವರಾತ್ರಿಯೆಂದರೆ ಒಂಬತ್ತು (ನವ) ರಾತ್ರಿಗಳು, ದೇವಿಯ ಒಂಬತ್ತು ವಿಧದ ರೂಪಗಳನ್ನು ಆರಾಧಿಸಲಾಗುತ್ತದೆ. ಹತ್ತನೇಯ ದಿನ ‘ವಿಜಯ ದಶಮಿ’, ಈ ದಿನ ಶಮಿವೃಕ್ಷಕ್ಕೆ ಪೂಜೆಯನ್ನು ಸಲ್ಲಿಸಿ ಶಮಿ (ಬನ್ನಿ)ಯನ್ನು ವಿನಿಯೋಗ ಮಾಡುವದು ಕರ್ನಾಟಕದ ಆಚರಣೆಯ ಪದ್ಧತಿ. ಇದೇ ದಿನ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೂರ್ತಿಯ ಮೆರವಣಿಗೆಯು ಮೈಸೂರಿನಲ್ಲಿ ನಡೆಯುತ್ತದೆ. ಮೈಸೂರು ದಸರಾ ಉತ್ಸವವು ಜಗತ್ಪ್ರಸಿದ್ಧಿಯನ್ನು ಪಡೆದಿದೆ. ಈ ಹಬ್ಬವು ಹಿಂದು ಪಂಚಾಂಗದ ಅಶ್ವಯುಜ ಶುದ್ಧ ಪ್ರತಿಪದೆಯ ದಿನ ಪ್ರಾರಂಭವಾಗುತ್ತದೆ.
ನವರಾತ್ರಿಯ ವೈಶಿಷ್ಟ್ಯತೆಗಳು
ನವರಾತ್ರಿ ಒಂಭತ್ತು ರಾತ್ರಿಗಳ ಸಮೂಹ. ಹಿಂದೆ ಐದು ನವರಾತ್ರಿ ಆಚರಣೆ ವಿಶೇಷವಾಗಿತ್ತು. ಈಗ ಎರಡು ನವರಾತ್ರಿ ವಿಶೇಷವಾಗಿದ್ದು, ಆಚರಣೆಯಲ್ಲಿದೆ. ಒಂದು ಶರನ್ನವರಾತ್ರಿ ಇನ್ನೊಂದು ಚೈತ್ರ ನವರಾತ್ರಿ. ಈಗ ನಾವು ಆಚರಿಸುವುದು ಶರನ್ನವರಾತ್ರಿ. ನವರಾತ್ರಿ ಎಲ್ಲ ಜನರೂ ಆಚರಿಸುವ ಒಂದು ವಿಶಿಷ್ಟವಾದ ಹಬ್ಬ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ನವರಾತ್ರಿ ಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ. ಶಕ್ತಿಯ ಆರಾಧನೆ ಈ ಹಬ್ಬದ ವೈಶಿಷ್ಟ್ಯ. 9 ದಿನಗಳ ಕಾಲ ಆಚರಿಸುವ ಈ ಪರ್ವಕ್ಕೆ ದುರ್ಗೋತ್ಸವ ಎಂದೂ ಕರೆಯುತ್ತಾರೆ.
ವಿಜಯನಗರದ ಅರಸರು ಹಾಗೂ ಮೈಸೂರು ಅರಸರು ಜೈತ್ರಯಾತ್ರೆಯಲ್ಲಿ ಗೆಲುವು ಪಡೆದು ಸಂಭ್ರಮದಿಂದ ನಡೆಸುವ ವಿಶಿಷ್ಟ ಹಬ್ಬ ಎಂಬುದು ಇತಿಹಾಸದ ಉಲ್ಲೇಖ.ಪುರಾಣದ ಪ್ರಕಾರ ಜಗನ್ಮಾತೆ ರಾಕ್ಷಸರನ್ನು ಸಂಹಾರ ಮಾಡಲು ಒಂದೊಂದು ಅವತಾರವೆತ್ತಿ ರಾಕ್ಷಸರನ್ನು ಸಂಹರಿಸಿ ಲೋಕವನ್ನು ಕಾಪಾಡುತ್ತಾಳೆ. ನವರಾತ್ರಿಯ ಒಂದೊಂದು ದಿನವೂ ಬಹಳ ವಿಶೇಷವಾಗಿ ನಿಲ್ಲುತ್ತದೆ. 9 ದಿನಗಳ ಕಾಲ ಆದಿ ಶಕ್ತಿಯನ್ನು ನವ ವಿಧದಲ್ಲಿ ಪೂಜಿಸಲಾಗುತ್ತದೆ.
ಮೊದಲ ದಿನ ಅಂದರೆ ಪಾಡ್ಯದ ದಿನ ಯೋಗನಿದ್ರಾ ದುರ್ಗಾ ಪೂಜಾ.
ಎರಡನೇ ದಿನ ಆಂದರೆ ಬಿದಿಗೆ ದಿನ ದೇವಜಾತ ದುರ್ಗಾಪೂಜಾ.
ಮೂರನೇ ದಿನ ತದಿಗೆ – ಮಹಿಷಾಸುರ ಮರ್ಧಿನಿ ದುರ್ಗಾಪೂಜಾ.
ನಾಲ್ಕನೇ ದಿನ ಚತುರ್ದಶಿ – ಶೈಲ ಜಾತಾ ದುರ್ಗಾಪೂಜಾ.
ಐದನೇ ದಿನ ಪಂಚಮಿ – ದೂಮೃಹಾ ದುರ್ಗಾಪೂಜಾ.
ಆರನೇ ದಿನ ಶಷ್ಠಿ – ಚಂಡ-ಮುಂಡ ಹಾ ದುರ್ಗಾಪೂಜಾ.
ಏಳನೇ ದಿನ ಸಪ್ತಮಿ – ರಕ್ತ ಬೀಜ ಹಾ ದುರ್ಗಾಪೂಜಾ.
ಎಂಟನೇ ದಿನ ಅಷ್ಟಮಿ – ನಿಶುಂಭ ಹಾ ದುರ್ಗಾಪೂಜಾ.(ದುರ್ಗಾಷ್ಠಮಿ)
ಒಂಭತ್ತನೇ ದಿನ ಮಹಾನವಮಿ -ಶುಂಭ ಹಾ ದುರ್ಗಾಪೂಜಾ.
ಏಳನೇ ದಿನ ಅಂದರೆ ಸಪ್ತಮಿಯಿಂದ ತ್ರಿದಿನ ದುರ್ಗಾಪೂಜಾ ಎಂದೂ ಮಾಡುತ್ತಾರೆ. ಅಂದರೆ ಮಹಾಕಾಳಿ, ಮಹಾಲಕ್ಷ್ಮಿ, ಮಹಾಸರಸ್ವತಿ ಪೂಜೆ ಮಾಡಲಾಗುತ್ತದೆ. ನವರಾತ್ರಿಯಲ್ಲಿ ಸಪ್ತಮಿಗೆ ವಿಶೇಷ ಸ್ಥಾನವಿದೆ. ಸಪ್ತಮಿಯ ಮೂಲಾನಕ್ಷತ್ರದಂದು ಪುಸ್ತಕ, ಪವಿತ್ರಗ್ರಂಥಗಳನ್ನು, ಚಿನ್ನ, ಬೆಳ್ಳಿ ಪೂಜೆಗಿಡಲಾಗುತ್ತದೆ. ಹಾಗೂ ನವಮಿಯಂದು ಆಯುಧಗಳನ್ನು ಪೂಜಿಸಲಾಗುತ್ತದೆ. ಅಂದೇ ಪುಸ್ತಕಗಳನ್ನಿಟ್ಟು ಪೂಜಿಸಲಾಗುತ್ತದೆ ಇದಕ್ಕೆ ಸರಸ್ವತಿ ಪೂಜೆ ಎಂದೂ ಕರೆಯುತ್ತಾರೆ.
ಪುರಾಣಗಳಲ್ಲಿ :
ನವರಾತ್ರಿಯ ಕುರಿತು ಪುರಾಣಗಳಲ್ಲಿ ಹಲವು ಉಲ್ಲೇಖಗಳಿವೆ. ಹಲವು ಕಥೆಗಳಿವೆ.. ನವರಾತ್ರಿಯಲ್ಲಿ ಚಾಮುಂಡೇಶ್ವರಿ /ದುರ್ಗದೇವಿಯು ಮಹಿಷಾಸುರ ಮರ್ಧಿನಿಯಾಗಿ ಮಹಿಷಾಸುರ ಎಂಬ ರಾಕ್ಷಸನನ್ನು ಸಂಹಾರ ಮಾಡಿದಳು .ನವರಾತ್ರಿಯೆಂದರೆ ಒಂಭತ್ತು ದಿನಗಳಿಗೆ ಸೀಮಿತ ವಾಗಿದ್ದರೂ ಹತ್ತನೇ ದಿನ ವಿಜಯದಶಮಿ. ಮಹಾದುರ್ಗೆ ರಾಕ್ಷಸರನ್ನು ಸಂಹರಿಸಿ ವಿಜಯವನ್ನು ಸಾಧಿಸಿದ ದಿನ. ತ್ರೇತಾಯುಗದಲ್ಲಿ ಶ್ರೀರಾಮನು ರಾವಣನನ್ನು ಸಂಹಾರ ಮಾಡಿದನು. ಅದು ವಿಜಯದಶಮಿಯ ದಿನ ಎಂಬ ನಂಬಿಕೆ ಇದೆ.
ದ್ವಾಪರಾಯುಗದಲ್ಲಿ ಪಾಂಡವರು ಒಂದು ವರ್ಷ ಅಜ್ಞಾತವಾಸ ಮಾಡುವಾಗ ತಮ್ಮ ಆಯುಧಗಳನ್ನು ಬನ್ನಿ ಮರದಲ್ಲಿ ಮುಚ್ಚಿಟ್ಟಿದ್ದರು. ದಶಮಿಯ ದಿನಕ್ಕೆ ಅಜ್ಞಾತವಾಸ ಮುಗಿದು, ಅವರು ಬನ್ನಿ ಮರದಿಂದ ತಮ್ಮ ಆಯುಧಗಳನ್ನು ವಾಪಸ್ಸು ಪಡೆದು ಕುರುಕ್ಷೇತ್ರ ಯುದ್ಧದಲ್ಲಿ ಕೌರವರನ್ನು ಸೋಲಿಸಿ ವಿಜಯಸಾಧಿಸಿದರು ಎಂದು ಹೇಳುತ್ತಾರೆ. ಹೀಗಾಗಿ ಈ ದಶಮಿಯನ್ನು ವಿಜಯದಶಮಿ ಎಂದು ಕರೆಯುತ್ತಾರೆ ಆದ್ದರಿಂದ ಇವರೆಲ್ಲರ ವಿಜಯದ ಸಂಕೇತವಾಗಿ ಈ ದಿನವನ್ನು ವಿಜಯದಶಮಿ ಎಂದು ಆಚರಿಸುವುದು ಸಂಪ್ರದಾಯ.
ನವರಾತ್ರಿ ಆಚರಣೆಯ ಆಧ್ಯಾತ್ಮಿಕ ಮಹತ್ವ, ಆಚರಣೆಯ ಪದ್ಧತಿ ಹಾಗೂ ಲಾಭಗಳು :
ಮಹಿಷಾಸುರನ ನಾಶಕ್ಕಾಗಿ ಅವತಾರ ತಾಳಿದ ಶ್ರೀ ದೇವಿಯ ಉತ್ಸವ ಎಂದರೆ ನವರಾತ್ರಿ. ನವರಾತ್ರಿಯಲ್ಲಿ ಶ್ರೀ ದೇವಿಯ ಉಪಾಸನೆಯನ್ನು ಭಕ್ತಿ ಶ್ರದ್ಧೆಯಿಟ್ಟು ಮಾಡುವುದರಿಂದ ದೇವಿತತ್ತ್ವದ ಲಾಭವಾಗುತ್ತದೆ. ‘ಹಿಂದೂ ಧರ್ಮದಲ್ಲಿ ಭಗವತೀ ದೇವಿಯ ವಿಶೇಷ ಆರಾಧನೆಯನ್ನು ವರ್ಷದಲ್ಲಿ ವಾಸಂತಿಕ ನವರಾತ್ರಿ ಮತ್ತು ಶಾರದೀಯ ನವರಾತ್ರಿ ಈ ಎರಡು ಸಮಯದಲ್ಲಿ ಮಾಡುತ್ತಾರೆ. ಶರದ್ ಋತುವಿನಲ್ಲಿನ ಪೂಜೆಗೆ ಅಕಾಲ ಪೂಜೆ ಮತ್ತು ವಾಸಂತಿಕ ಪೂಜೆಗೆ ಸಕಾಲ ಪೂಜೆಯೆಂದು ಹೇಳುತ್ತಾರೆ. ಶರದ್ ಋತುವಿನಲ್ಲಿ ‘ದೇವರಾತ್ರಿ’ಗಳಿರುತ್ತವೆ; ಆದುದರಿಂದ ಈ ಕಾಲದಲ್ಲಿನ ಪೂಜೆಗೆ ಅಕಾಲ ಪೂಜೆಯೆಂದು ಹೇಳುತ್ತಾರೆ. ತಾಂತ್ರಿಕ ಸಾಧಕರ ದೃಷ್ಟಿಯಲ್ಲಿ ಈ ‘ರಾತ್ರಿ’ಗಳು ಮಹತ್ವಪೂರ್ಣವಾಗಿರುತ್ತವೆ. ಹೀಗೆ ಬಹಳಷ್ಟು ರೀತಿಯ ರಾತ್ರಿಗಳಿರುತ್ತವೆ, ಉದಾ. ಕಾಲರಾತ್ರಿ, ಶಿವರಾತ್ರಿ, ಮೋಹರಾತ್ರಿ, ವೀರರಾತ್ರಿ, ದಿವ್ಯರಾತ್ರಿ, ದೇವರಾತ್ರಿ ಇತ್ಯಾದಿ. ಇವುಗಳಲ್ಲಿ ಭಗವತಿಯನ್ನು ಜಾಗೃತಗೊಳಿಸಬೇಕಾಗುತ್ತದೆ; ಆದರೆ ವಾಸಂತಿಕ ಪೂಜೆಯಲ್ಲಿ ಜಾಗೃತಗೊಳಿಸುವ ಆವಶ್ಯಕತೆಯಿರುವುದಿಲ್ಲ.’ ಒಂದು ಅಭಿಮತಕ್ಕನುಸಾರ ನವರಾತ್ರಿಯಲ್ಲಿನ ಮೊದಲ ಮೂರು ದಿನಗಳಂದು ತಮೋಗುಣವನ್ನು ಕಡಿಮೆ ಮಾಡಲು ತಮೋಗುಣಿ ಮಹಾಕಾಳಿಯ, ನಂತರದ ಮೂರು ದಿನಗಳಂದು ರಜೋಗುಣವನ್ನು ವೃದ್ಧಿಸಲು ಮಹಾಲಕ್ಷ್ಮಿಯ ಮತ್ತು ಕೊನೆಯ ಮೂರು ದಿನಗಳಂದು ಸಾಧನೆಯನ್ನು ತೀವ್ರವಾಗಿ ಮಾಡಲು ಸತ್ತ್ವಗುಣಿ ಮಹಾಸರಸ್ವತಿಯ ಪೂಜೆಯನ್ನು ಮಾಡುತ್ತಾರೆ.
ನವರಾತ್ರಿಯ ಇತಿಹಾಸ :
ರಾಮನಿಂದ ರಾವಣನ ವಧೆಯಾಗಬೇಕೆಂದು ನಾರದರು ರಾಮನಿಗೆ ಶರವನ್ನರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.
ದೇವಿಯು, ಮಹಿಷಾಸುರನೆಂಬ ರಾಕ್ಷಸನೊಂದಿಗೆ ಪಾಡ್ಯದಿಂದ ನವಮಿಯವರೆಗೆ ಒಂಬತ್ತು ದಿನಗಳ ಕಾಲ ಯುದ್ಧವನ್ನು ಮಾಡಿ ನವಮಿಯ ರಾತ್ರಿ ಅವನನ್ನು ಕೊಂದಳು. ಅಂದಿನಿಂದ ಅವಳಿಗೆ ಮಹಿಷಾಸುರಮರ್ದಿನಿ ಎನ್ನತೊಡಗಿದರು.
ನವರಾತ್ರಿಯ ಆಚರಣೆಯ ಮಹತ್ವ :
ಜಗತ್ತಿನಲ್ಲಿ ಯಾವಾಗ ತಾಮಸಿಕ, ಅಸುರೀ ಮತ್ತು ಕ್ರೂರ ಜನರು ಪ್ರಬಲರಾಗಿ ಸಾತ್ತ್ವಿಕ ಮತ್ತು ಧರ್ಮನಿಷ್ಠ ಸಜ್ಜನರನ್ನು ಪೀಡಿಸುತ್ತಾರೆಯೋ, ಆಗ ದೇವಿಯು ಧರ್ಮಸಂಸ್ಥಾಪನೆಗಾಗಿ ಪುನಃ ಪುನಃ ಅವತಾರ ತಾಳುತ್ತಾಳೆ. ಇದು ಆ ದೇವಿಯ ವ್ರತವಾಗಿದೆ.
ನವರಾತ್ರಿಯಲ್ಲಿ ದೇವಿತತ್ತ್ವವು ಎಂದಿಗಿಂತ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ದೇವಿತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ‘ಶ್ರೀ ದುರ್ಗಾದೇವ್ಯೈ ನಮಃ|’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು.
ನವರಾತ್ರಿ ವ್ರತವನ್ನು ಆಚರಿಸುವ ಪದ್ಧತಿ – ‘ಅಖಂಡ ದೀಪಪ್ರಜ್ವಲನೆ ಅಂದರೆ ನವರಾತ್ರಿಯ ೯ ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನವನ್ನು ಕೇಳುವುದು, ಲಲಿತಾಪೂಜೆ, ಸರಸ್ವತಿಪೂಜೆ, ಉಪವಾಸ, ಜಾಗರಣೆ ಮುಂತಾದ ವಿವಿಧ ಕಾರ್ಯಕ್ರಮಗಳನ್ನು ನಡೆಸಿ ಅವರವರ ಶಕ್ತಿಸಾಮರ್ಥ್ಯಕ್ಕನುಸಾರವಾಗಿ ನವರಾತ್ರಿ ಮಹೋತ್ಸವವನ್ನು ಆಚರಿಸುತ್ತಾರೆ.
ಮಡಿಕೇರಿ ದಸರಾ : ಮಡಿಕೇರಿಯಲ್ಲಿ ದಸರಾ ಆಚರಣೆ ಬಹಳ ವಿಭಿನ್ನವಾಗಿರುತ್ತದೆ. ಮಹಾಲಯ ಅಮವಾಸ್ಯೆಯ ಮಾರನೆಯ ದಿನದಂದು ಕರಗ ಹೊರಡುವುದರೊಂದಿಗೆ ದಸರಾ ಉತ್ಸವ ಅರಂಭವಾಗುತ್ತದೆ. ಮಡಿಕೇರಿ ದಸರಾಕ್ಕೆ ಸುಮಾರು ಇನ್ನೂರು ವರುಶದ ಇತಿಹಾಸವಿದೆ. ನವರಾತ್ರಿಯ ಮೊದಲನೆಯ ದಿನದಂದು ನಾಲಕ್ಕು ಮಾರಿಯಮ್ಮ ದೇವಾಲಯದ ಪೂಜಾರಿಗಳು ಕರಗ ಕಟ್ಟುವ ಸಲಕರಣೆಗಳೊಂದಿಗೆ ನಗರದ ಹೊರವಲಯದಲ್ಲಿರುವ ಪಂಪಿನ ಕೆರೆ ಬಳಿ ತೆರಳಿ ಕರಗವನ್ನು ಕಟ್ಟಲಾಗುತ್ತದೆ.
ಬಳಿಕ ಒಂಬತ್ತು ದಿನಗಳ ಕಾಲ ನಗರ ಪ್ರದಕ್ಷಿಣೆ ಮಾಡಿ ಪೂಜೆ ಸ್ವೀಕರಿಸುತ್ತದೆ.ಇಲ್ಲಿಯ ಕರಗ ಕುಣಿತವು ನೊಡಲು ಬಲು ಅಂದ.ದಸರೆಯ ದಿನದಂದು ಬನ್ನಿ ಮಂಟಪಕ್ಕೆ ತೆರಳಿ ಬನ್ನಿ ಕಡಿಯುವುದರರೊಂದಿಗೆ ಕರಗ ಉತ್ಸವ ಮುಕ್ತಾಯಗೊಳ್ಳುವುದು. ದಸರೆಯ ದಿನ ರಾತ್ರಿ ನಡೆಯುವ ದಶ ಮಂಟಪಗಳ ಮೆರವಣಿಗೆಯಂತೂ ದೇವ ಲೊಕವನ್ನೇ ಧರೆಗಿಳಿಸಿದಂತೆ ಭಾಸವಾಗುವುದು.
ಪ್ರತಿ ಮಂಟಪವು ದೇವತೆಗಳಿಂದ ರಕ್ಕಸರನ್ನು ಸಂಹರಿಸುವ ಕಲಾಕೃತಿಯನ್ನು ಹೊಂದಿರುತ್ತವೆ. ಲಕ್ಷ ಸಂಖ್ಯೆಯಲ್ಲಿ ಜನರು ಬಂದು ಈ ಮೆರವಣಿಗೆಯನ್ನು ನೋಡಿ ಆನಂದಿಸುತ್ತಾರೆ.
ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ಈ ಹಬ್ಬದ ವಿಶೇಷ.
