ರಾಷ್ಟ್ರೀಯ ಅಯೋಡಿನ್ ಕೊರತೆ ನ್ಯೂನತೆ ನಿಯಂತ್ರಣ ಸಪ್ತಾಹ : ಆರೋಗ್ಯ ಸಿಬ್ಬಂದಿಗಳಿಗೆ ಮಾಹಿತಿ ಕಾರ್ಯಕ್ರಮ

ಮಡಿಕೇರಿ ಅ.23 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಸರ್ವೇಕ್ಷಣಾ ಘಟಕ ಇವರ ವತಿಯಿಂದ ಅಕ್ಟೋಬರ್ 27 ರವರೆಗೆ ಕೊಡಗು ಜಿಲ್ಲೆಯಲ್ಲಿ ರಾಷ್ಟ್ರೀಯ ಅಯೋಡಿನ್ ಕೊರತೆ ನ್ಯೂನತೆ ನಿಯಂತ್ರಣ ದಿನ ಹಾಗೂ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ನಗರದ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸಹಾಯಕರುಗಳು ಮತ್ತು ಆಶಾ ಕಾರ್ಯಕರ್ತರುಗಳಿಗೆ ರಾಷ್ಟ್ರೀಯ ಅಯೋಡಿನ್ ಕೊರತೆ ನ್ಯೂನತೆ ನಿಯಂತ್ರಣ ದಿನ ಹಾಗೂ ಸಪ್ತಾಹದ ಮಹತ್ವದ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪ್ಪಿನ ಪರೀಕ್ಷೆ ಕುರಿತು ಪ್ರಾತ್ಯಕ್ಷಿಕೆ, ಉಪನ್ಯಾಸ ಏರ್ಪಡಿಸಲಾಯಿತು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಗೋಪಿನಾಥ್ ಎಸ್. ಅಯೋಡಿನ್ ಕೊರತೆ ನ್ಯೂನತೆ ನಿಯಂತ್ರಣ ದಿನ ಹಾಗೂ ಸಪ್ತಾಹದ ಮಹತ್ವದ ಬಗ್ಗೆ ಮಾಹಿತಿ ನೀಡಿದರು.
ಡೆಂಗ್ಯು ಮತ್ತು ಚಿಕುಂಗುನ್ಯ ನಿಯಂತ್ರಣದಲ್ಲಿ ಸೊಳ್ಳೆ ಉತ್ಪತ್ತಿ ತಾಣಗಳ ಸಮೀಕ್ಷೆ ಮತ್ತು ನಿರ್ಮೂಲನೆಯ ಮಹತ್ವದ ಬಗ್ಗೆ ಹಾಗೂ ಅಸಾಂಕ್ರಾಮಿಕ ರೋಗಗಳ ಸಮೀಕ್ಷೆ ನಡೆಸುವ ಮಹತ್ವದ ಬಗ್ಗೆ ಸಹ ತಿಳಿಸಿದರು.
ಇದೇ ಸಂದರ್ಭದಲ್ಲಿ ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸಹ ಪ್ರಾಧ್ಯಾಪಕರಾದ ಡಾ.ಮಹೇಶ್ ಎಸ್.ಎಚ್. ಇವರು ಕೋವಿಡ್-19 ರೋಗ ನಿಯಂತ್ರಣ, ಹಬ್ಬಗಳ ಸಂದರ್ಭಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳು, ಕೋವಿಡ್-19 ಪರೀಕ್ಷೆಯ ಮಹತ್ವ, ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಕೀಟ ಶಾಸ್ತ್ರಜ್ಞರಾದ ಮಂಜುನಾಥ್, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ದೇವರಾಜ್ ಎಚ್.ಜಿ., ಹಿರಿಯ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರುಗಳು ಮತ್ತು ನಗರ ಆರೋಗ್ಯ ಕೇಂದ್ರ ಸಿಬ್ಬಂದಿಗಳು ಭಾಗವಹಿಸಿದ್ದರು.

