ಸುಂಟಿಕೊಪ್ಪ ಜು.5 : ಹೈಮಾಸ್ಟ್ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಸುಂಟಿಕೊಪ್ಪ ಸಮೀಪ ಗದ್ದೆಹಳ್ಳ ರಾಷ್ಟ್ರೀಯ ಹೆದ್ದಾರಿ ವೃತ್ತದ ಬಳಿ ನಡೆದಿದೆ. ಕುಶಾಲನಗರದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರು ಬುಧವಾರ ನಸುಕು 4 ಗಂಟೆ ಸುಮಾರಿಗೆ ಕಂಬಕ್ಕೆ ಡಿಕ್ಕಿ ಹೊಡೆದಿದೆ. ವಿದ್ಯುತ್ ಕಂಬ ತುಂಡಾಗಿ ಬಲ್ಬ್ ಗಳಿಗೆ ಹಾನಿಯಾಗಿದೆ ಎಂದು ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ವೇಣು ಗೋಪಾಲ್ ಅವರು ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಡಿಕ್ಕಿಯಾದ ವೇಗಕ್ಕೆ ಕಾರಿನ ಎರಡು ಚಕ್ರಗಳು ಸಿಡಿದು ಹೋಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಸುಮಾರು 40 ಸಾವಿರ ರೂ. ವೆಚ್ಚದಲ್ಲಿ ಹೈಮಾಸ್ಟ್ ಕಂಬ ಅಳವಡಿಸಲಾಗಿತ್ತು.
ಲೇಖಕ: admin
ನಾಪೋಕ್ಲು ಜು.5 : ನಾಪೋಕ್ಲು ಪೊಲೀಸ್ ಠಾಣಾ ಸರಹದ್ದಿನ ಬೇತು ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಡಿಕೇರಿ ವಿದ್ಯಾನಗರದ ನಿವಾಸಿ ಅರ್.ವಿನೋದ್ ಹಾಗೂ ಬೇತು ಗ್ರಾಮದ ನಿವಾಸಿ ವಿಷ್ಣು ಎಂ.ವಿ ಬಂಧಿತ ಆರೋಪಿಗಳಾಗಿದ್ದಾರೆ. ಇವರ ಬಳಿಯಿಂದ 230ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಪೊಲೀಸ್ ಉಪಅಧೀಕ್ಷಕ ಸುಂದರ್ ರಾಜ್ ನಿರ್ದೇಶನದಂತೆ ಉಪ ವಿಭಾಗದ ಡಿವೈಎಸ್ಪಿ ಜಗದೀಶ್, ಮಡಿಕೇರಿ ಗ್ರಾಮಾಂತರ ವೃತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು. (ವರದಿ : ಝಕ್ರಿಯ ನಾಪೋಕ್ಲು)
ಮಡಿಕೇರಿ ಜು.5 : ಕರಡಿಯೊಂದು ರೈತ ಹಾಗೂ ಹಸುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜೆಟ್ಟಿ ಅಗ್ರಹಾರ ಗ್ರಾಮದಲ್ಲಿ ನಡೆದಿದೆ. ಅರಣ್ಯದಿಂದ ಬಂದು ಗ್ರಾಮಕ್ಕೆ ಲಗ್ಗೆ ಇಟ್ಟ ಕರಡಿ ಜಮೀನಿಗೆ ತೆರಳುತ್ತಿದ್ದ ರೈತ ನರಸಿಂಹ ಮೂರ್ತಿ ಎಂಬುವವರ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ನಂತರ ಸಮೀಪದ ಮನೆಯಲ್ಲಿದ್ದ ಹಸುವಿನ ಮೇಲೂ ದಾಳಿ ಮಾಡಿದೆ. ರೈತ ಹಾಗೂ ಹಸುವಿಗೆ ಚಿಕಿತ್ಸೆ ನೀಡಲಾಗಿದ್ದು, ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಅರಣ್ಯ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಅಲ್ಲದೆ ಕರಡಿ ಸೆರೆಗೆ ಕ್ರಮ ಕೈಗೊಂಡಿದ್ದಾರೆ, ಆದರೂ ಗ್ರಾಮದಲ್ಲಿ ಆತಂಕದ ವಾತಾವರಣ ಮುಂದುವರೆದಿದೆ.
ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಅಲ್ಲಲ್ಲಿ ಮರಗಳು ಬಿದ್ದಿವೆ. ಕುಟ್ಟ-ಶ್ರೀಮಂಗಲ ಮುಖ್ಯ ರಸ್ತೆಯಲ್ಲಿ ಮರ ಬಿದ್ದಿರುವುದನ್ನು ಪೊನ್ನಂಪೇಟೆ ವ್ಯಾಪ್ತಿಯ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಲಾಯಿತು.
ಸುಂಟಿಕೊಪ್ಪ ಜು.5 : ಕೊಡಗರಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ ಪೌತಿ ಖಾತೆ ಆಂದೋಲನ ನಡೆಯಿತು. ಗ್ರಾ.ಪಂ ಸಭಾಂಗಣದಲ್ಲಿ ನಡೆದ ಆಂದೋಲನದ ಅಧ್ಯಕ್ಷತೆಯನ್ನು ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಪ್ರಕಾಶ್ ವಹಿಸಿದ್ದರು. ಈ ಸಂದರ್ಭ ನಾಡಕಚೇರಿಯ ಉಪತಹಶೀಲ್ದಾರ್ ಶಿವಪ್ಪ ಮಾತನಾಡಿ, ಸರಕಾರ ಮಹತ್ತರ ಯೋಜನೆಗಳಲ್ಲಿ ಒಂದಾಗಿದೆ. ರೈತಾಪಿ ವರ್ಗದವರು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳೇ ಆಗಮಿಸಿ ಜನತೆಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು. ಸುಂಟಿಕೊಪ್ಪ ಗ್ರಾ.ಪಂ ವ್ಯಾಪ್ತಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ, ಉಲುಗುಲಿ, ನಾರ್ಗಾಣೆ ಗ್ರಾಮದ ಕೃಷಿಕರು ಹಾಗೂ ಸಾರ್ವಜನಿರು ಪಾಲ್ಗೊಂಡಿದ್ದರು. ಕಂದಾಯ ಪರಿವೀಕ್ಷಕರಾದ ಪ್ರಶಾಂತ್, ಗ್ರಾಮ ಲೆಕ್ಕಿಗಾರುಗಳಾದ ಜಯಂತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಶ್, ಗ್ರಾ.ಪಂ ಸದಸ್ಯೆ ನೀತಾ, ಚೆನ್ನಬಸವಿ, ಸಿಬ್ಬಂದಿಗಳಾದ ಧನಂಜಯ ಹಾಗೂ ಗ್ರಾಮ ಸಹಾಯಕರು ಇದ್ದರು.
ಮಡಿಕೇರಿ ಜು.5 : ಕೊಡಗು ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 393 ಮಿ.ಮೀ ಮಳೆಯಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 956 ಮಿ.ಮೀ ಮಳೆಯಾಗಿತ್ತು. ಜಿಲ್ಲೆಯ ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಮಂಜು ಮುಸುಕಿದ ವಾತಾವರಣದೊಂದಿಗೆ ಶೀತ ಗಾಳಿ ಬೀಸುತ್ತಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲದಲ್ಲಿ ಉತ್ತಮ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಭಾಗಮಂಡಲದ ಮೇಲುಸೇತುವೆ ಕಾಮಗಾರಿ ಅಪೂರ್ಣಗೊಂಡ ಕಾರಣ ರಸ್ತೆ ಕೆಸರುಮಯವಾಗಿದ್ದು, ವಾಹನಗಳ ಚಾಲನೆ ಮತ್ತು ಪಾದಾಚಾರಿಗಳ ಓಡಾಟಕ್ಕೆ ಅಡಚಣೆ ಉಂಟಾಗಿದೆ. ನಾಪೋಕ್ಲು ಭಾಗದಲ್ಲೂ ಉತ್ತಮ ಮಳೆಯಾಗುತ್ತಿದ್ದು, ವಿರಾಜಪೇಟೆ, ಪೊನ್ನಂಪೇಟೆ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲ್ಲೂಕಿನಲ್ಲೂ ಮಳೆಯಾಗುತ್ತಿದೆ. ಗಾಳಿ ಬೀಸದೆ ಇರುವ ಕಾರಣ ದೊಡ್ಡಮಟ್ಟದ ಅನಾಹುತ ಎಲ್ಲೂ ಸಂಭವಿಸಿಲ್ಲ. ಗ್ರಾಮೀಣ ಭಾಗದಲ್ಲಿ ಅಲ್ಲಲ್ಲಿ ಮರ ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಇದರಿಂದ ಕುಗ್ರಾಮಗಳ ಮನೆಗಳ ವಿದ್ಯುತ್ ಕಡಿತಗೊಂಡು ನಿವಾಸಿಗಳು ಕಾರ್ಗತ್ತಲಲ್ಲಿ ದಿನ ದೂಡುವಂತ್ತಾಗಿದೆ. ಮಡಿಕೇರಿ…
ಮಡಿಕೇರಿ ಜು.5 : ಕಿರಗಂದೂರು ಗ್ರಾ.ಪಂ ವ್ಯಾಪ್ತಿಯ ತಾಕೇರಿ, ಕಿರಗಂದೂರು, ಬಿಳಿಗೇರಿ ಗ್ರಾಮಗಳಿಗೆ ಸಂಬಂಧಿಸಿದ ಪೌತಿ ಖಾತೆ ಆಂದೋಲನವು ಕಿರಗಂದೂರು ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ತಹಶೀಲ್ದಾರ್ ನರಗುಂದ್ಅಧ್ಯಕ್ಷತೆಯಲ್ಲಿ ನಡೆದ ಆಂದೋಲನದಲ್ಲಿ ಕಂದಾಯ ಪರಿವೀಕ್ಷಕರಾದ ಸಿ.ಎನ್.ಪ್ರಹ್ಲಾದ್, ಗ್ರಾಮ ಆಡಳಿತ ಅಧಿಕಾರಿ ಹೆಚ್.ಎನ್.ಕುಮಾರಿ, ಗ್ರಾ.ಪಂ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮಡಿಕೇರಿ ಜು.5 : ವಿರಾಜಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ತಾಲ್ಲೂಕು ಕಚೇರಿ ಸಿಬ್ಬಂದಿವರ್ಗ ಮತ್ತು ಲೋಕೋಪಯೋಗಿ, ಸೆಸ್ಕ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಮುಂಗಾರು ಮಳೆ ಚುರುಕು ಪಡೆದಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ತಂಡವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಬಳಿಕ ತಾಲ್ಲೂಕು ಕಚೇರಿಯ ಕಾಮಗಾರಿ ಪರಿಶೀಲಿಸಿದರು. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು. ತಹಶೀಲ್ದಾರ್ ರಾಮಚಂದ್ರ, ಲೋಕೋಪಯೋಗಿ, ಸೆಸ್ಕ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಡಿಕೇರಿ ಜು.5 : 2021-22ನೇ ಸಾಲಿನಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಪಡೆದಿರುವ ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾಮ ಪಂಚಾಯಿತಿಗೆ ಜಿ.ಪಂ ಸಿಇಒ ಡಾ.ಎಸ್.ಆಕಾಶ್ ಪ್ರಶಸ್ತಿ ಪತ್ರ ಮತ್ತು ಫಲಕ ನೀಡಿ ಗೌರವಿಸಿದರು. ಕೂಡುಮಂಗಳೂರು ಮತ್ತು ದೊಡ್ಡಮಳ್ತೆ ಗ್ರಾ.ಪಂ.ನ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅವರು ಪ್ರಶಸ್ತಿ ಸ್ವೀಕರಿಸಿದರು. ಜಿ.ಪಂ.ಉಪ ಕಾರ್ಯದರ್ಶಿ ಜಿ.ಧನರಾಜು, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಯೋಜನಾ ನಿರ್ದೇಶಕರಾದ ಜಗದೀಶ್, ತಾ.ಪಂ.ಇಒ ಜಯಣ್ಣ, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರಾಕೇಶ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇತರರು ಇದ್ದರು.
ಮಡಿಕೇರಿ ಜು.5 : ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಜಿಲ್ಲಾ ಪಂಚಾಯತ್ ಹಂತದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ. ಸೋಮವಾರಪೇಟೆ ತಾ.ಪಂ ಸಭಾಂಗಣದಲ್ಲಿ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು. ಗ್ರಾಮಗಳ ಅಭಿವೃದ್ಧಿ ಮತ್ತು ಆಡಳಿತದಲ್ಲಿ ಗ್ರಾ.ಪಂ.ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಮಟ್ಟದಲ್ಲಿನ ಸಮಸ್ಯೆಗಳ ಬಗ್ಗೆ ನಿಖರ ಮಾಹಿತಿ ಪಡೆಯುವ ನಿಟ್ಟಿನಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಗ್ರಾಮಮಟ್ಟದ ವಾಸ್ತವ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಮತ್ತು ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಸಲುವಾಗಿ ಈ ಸಭೆ ಮಹತ್ವದ್ದಾಗಿದೆ ಎಂದು ಜಿ.ಪಂ.ಸಿಇಒ ಅಭಿಪ್ರಾಯಪಟ್ಟರು. ಸಭೆಯಲ್ಲಿ ಭಾಗವಹಿಸಿದ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ವಿವಿಧ ಗ್ರಾ.ಪಂ.ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯ ಆಡಳಿತ ಮತ್ತು ಅಭಿವೃದ್ಧಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದರು. ಮುಖ್ಯವಾಗಿ ಜಲಜೀವನ್ ಮಿಷನ್ ಯೋಜನೆಗೆ…






