ಮಡಿಕೇರಿ ಮಾ.8 : ಮಹಿಳಾ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರದಿಂದ ಸಾಧಕ ಮಹಿಳೆಯರಿಗೆ ನೀಡಲಾಗುವ “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ” ಗೆ ಪಾಲಿಬೆಟ್ಟದ ಚೆಶೈರ್ ಹೋಮ್ಸ್ ಇಂಡಿಯಾ ಕೂರ್ಗ್ ನ ಅಧ್ಯಕ್ಷರಾದ ಚೆಪ್ಪುಡಿರ ಗೀತಾ ಚೆಂಗಪ್ಪ ಭಾಜನರಾಗಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಗೀತಾ ಚೆಂಗಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಲೇಖಕ: admin
ಬೆಂಗಳೂರು ಮಾ.8 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿರುವ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಸಾಧಕ ಮಹಿಳೆಯರಿಗೆ “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ” ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್, ಸಾಲುಮರದ ತಿಮ್ಮಕ್ಕ, ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ರಾಜಣ್ಣಗೌಡ, ಡಿ.ಆರ್.ಡಿ.ಓ ಸಂಸ್ಥೆಯ ಆಶು ಭಾಟಿಯಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿ ಡಾ; ಅನುರಾಧಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ: ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು.
ಚೆಯ್ಯಂಡಾಣೆ ಮಾ 8 : ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಆರೋಗ್ಯ ‘ಎ ‘ಉಪಕೇಂದ್ರ ವ್ಯಾಪ್ತಿಯ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆರೋಗ್ಯಧಿಕಾರಿ ಕನಕವತಿ ಮಕ್ಕಳ ತಾಯಂದಿರಿಗೆ ಎದೆ ಹಾಲಿನ ಮಹತ್ವದ ಬಗ್ಗೆ ತಿಳಿಸಿದರು. ಆರು ತಿಂಗಳವರೆಗೆ ಎದೆ ಹಾಲು ಮಾತ್ರ ಕೊಡಬೇಕು. ಆರು ತಿಂಗಳ ನಂತರ ಎದೆಹಾಲಿನ ಜೊತೆಗೆ ಪೂರಕ ಆಹಾರವನ್ನು ಕೊಡುವುದರಿಂದ ಮಕ್ಕಳಲ್ಲಿ ಅಪೌಷ್ಟಿಕತೆ ಬರುವುದಿಲ್ಲ ಹಾಗೂ ಮಕ್ಕಳ ಲಸಿಕೆಗಳನ್ನು ಕಾಲಕ್ಕೆ ಸರಿಯಾಗಿ ನಿಗದಿತ ಸಮಯದಲ್ಲಿ ಕೊಡಿಸುವುದರಿಂದ ಮಕ್ಕಳಲ್ಲಿ ರೋಗನಿರೋಧಕ ಶಕ್ತಿ ಉತ್ಪತ್ತಿಯಾಗಿ ಮುಂದಿನ ದಿನಗಳಲ್ಲಿ ರೋಗಗಳು ಬರುದನ್ನು ತಡೆಗಟ್ಟ ಬಹುದು. ತಾಯಂದಿರು ಒಂದು ಮಗುವಿನಿಂದ ಇನ್ನೊಂದು ಮಗುವಿಗೆ ಕನಿಷ್ಠ ಮೂರು ವರ್ಷದ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಮಾಹಿತಿ ನೀಡಿದರು. ಕಾರ್ಯಕ್ರಮಕ್ಕೆ ಹಲವಾರು ಮಕ್ಕಳು ಪಾಲ್ಗೊಂಡಿದ್ದರು. ಪ್ರಥಮ ಬಹುಮಾನ ಶಶಿನ್ ಕಾರ್ಯಪ್ಪ, ದ್ವಿತೀಯ ಅರುಸಿ, ತೃತೀಯ ಬಹುಮಾನ ಆರಾಧ್ಯ ಪಡೆದುಕೊಂಡರು. ಈ ಸಂದರ್ಭ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ತಾಯಂದಿರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.…
ಬೆಂಗಳೂರು ಮಾ.8 : ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿ ಮಾ.9 ರಂದು ಎರಡು ಗಂಟೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದ ರಾಜ್ಯ ಕಾಂಗ್ರೆಸ್ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಗುರುವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭಗೊಳ್ಳುತ್ತಿರುವುದರಿoದ ಬಂದ್ ಕರೆಯನ್ನು ವಾಪಾಸ್ ಪಡೆದಿದೆ. ಬಿಜೆಪಿ ನೇತೃತ್ವದ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಮಾ.9 ರಂದು ಬೆಳಗ್ಗೆ 9 ಗಂಟೆಯಿAದ 11 ಗಂಟೆಯವರೆಗೆ ಸ್ವಯಂ ಪ್ರೇರಿತ ಬಂದ್ ಗೆ ಕಾಂಗ್ರೆಸ್ ಕರೆ ನೀಡಿತ್ತು. ಆದರೆ ಈ ಕರೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗುವ ಬಗ್ಗೆ ಅಸಮಾಧಾನದ ಕೂಗು ಕೇಳಿ ಬಂದಿತ್ತು. ಇದೀಗ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ನಾಯಕರು ದ್ವಿತೀಯ ಪಿಯುಸಿ ಪರೀಕ್ಷೆಯ ಕಾರಣ ನೀಡಿ ಬಂದ್ ಕರೆಯನ್ನು ವಾಪಾಸ್ ಪಡೆದಿದ್ದಾರೆ.
ನವದೆಹಲಿ ಮಾ.8 : ಭಾರತೀಯ ನೌಕಾಪಡೆಯ ಅತ್ಯಾಧುನಿಕ ಹಗುರ ಹೆಲಿಕಾಪ್ಟರ್ ಕರಾವಳಿ ಭಾಗದಲ್ಲಿ ಇಂದು ತುರ್ತು ಭೂಸ್ಪರ್ಷ ಮಾಡಿದೆ. ನೌಕಾ ಗಸ್ತು ಪಡೆಯ ಮೂಲಕ ಹೆಲಿಕಾಪ್ಟರ್ ನಲ್ಲಿದ್ದ ಮೂವರು ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ. ಹಗುರ ಹೆಲಿಕಾಪ್ಟರ್ ALH ಮುಂಬೈ ಕರಾವಳಿಯಲ್ಲಿ ತುರ್ತು ಭೂಸ್ಪರ್ಷ ಮಾಡಿದ್ದು, ಘಟನೆಯ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರಪೇಟೆ ಮಾ.8 : ಕ್ರೀಡಾ ಕ್ಷೇತ್ರದಲ್ಲೂ ಮಹಿಳೆಯರು ಗಮನಾರ್ಹ ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಚಾರವೆಂದು ಸೋಮವಾರಪೇಟೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಯಣ್ಣ ಹೇಳಿದರು. ಮಹಿಳಾ ದಿನಾಚರಣೆ ಅಂಗವಾಗಿ ಕೊಡಗು ಜಿಲ್ಲಾ ಪಂಚಾಯಿತಿ ಹಾಗೂ ಸೋಮವಾರಪೇಟೆ ತಾಲೂಕು ಪಂಚಾಯಿತಿ ಆಶ್ರಯದಲ್ಲಿ ಪಟ್ಟಣದ ಜಿ.ಎಂ. ಪಿ ಶಾಲಾ ಮೈದಾನದಲ್ಲಿ ಏರ್ಪಡಿಸಿದ್ದ ಮಹಿಳೆಯರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತಾಡಿದರು. ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ಗಳಿವೆ ಎಂದ ಅವರು ಮಹಿಳೆಯರು ಸಬಲರಾದರೆ ದೇಶ ಅಭಿವೃದ್ಧಿಯಾಗುತದೆ ಎಂದರು. ಇಂದು ಮಹಿಳೆಯರು ಸಾಮಾಜಿಕ,ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎಸ್.ಎನ್.ನರಗುಂದ, ಕ್ಷೇತ್ರಶಿಕ್ಷಾಧಿಕಾರಿ ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.
ನಾಪೋಕ್ಲು ಮಾ.8 : ಶ್ರೀ ರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭ ಹಾಗೂ ರಾಷ್ಟ್ರೀಯ ವಿಜ್ಞಾನ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದ ಅಪ್ಪಣ್ಣ, ಶಾಲೆಯಲ್ಲಿ ವಿದ್ಯಾರ್ಥಿ ಸಂಘದ ಕಾರ್ಯ ಚಟುವಟಿಕೆಗಳು ಹಾಗೂ ವಿವಿಧ ಸಂಘಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು. ರಾಷ್ಟ್ರೀಯ ವಿಜ್ಞಾನ ದಿನದ ಬಗ್ಗೆ ಮಾತನಾಡಿ ಸರ್ ಸಿ.ವಿ ರಾಮನ್ ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದರು. ಶಿಕ್ಷಕಿ ಚಂದ್ರಕಲಾ ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವ ಹಾಗೂ ರಾಮನ್ ಪರಿಣಾಮದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಶಿಕ್ಷಕಿ ಕವಿತಾ ಹಾಗೂ ಶಿಕ್ಷಕ ಕಾಳಯ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಕವನ ಮತ್ತು ದೀಪಿಕಾ ಪ್ರಾರ್ಥಿಸಿದರು. ಫ್ರೀಶಾ ಮಾಚಮ್ಮ ಹಾಗೂ ಆಫ್ರಿನ ಕಾರ್ಯಕ್ರಮ ನಿರೂಪಿಸಿದರು. ಪ್ರಾಚೀ ಮುತ್ತಮ್ಮ ಸ್ವಾಗತಿಸಿದರು. ಶಮ್ಲ ಫಿರ್ದೌಸ್ ವಂದಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ…
ಮಡಿಕೇರಿ ಮಾ.8 : ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳೆದು ಹೋಗಿದ್ದ 2 ಮೊಬೈಲ್ ಫೋನ್ ಗಳನ್ನು CEIR Portal ಸಹಾಯದಿಂದ ಪತ್ತೆಹಚ್ಚಿರುವ ಪೊಲೀಸರು ವಾರಸುದಾರರಿಗೆ ಹಿಂತಿರುಗಿಸಿದರು. ಕಳವಾದ/ಕಳೆದುಹೋದ/ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನೂತನವಾಗಿ ಅನುಷ್ಠಾನಗೊಂಡ CEIR Portal ಇದೀಗ ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರಿಗೆ ಹೆಚ್ಚು ಸಹಕಾರಿಯಾಗಿದೆ.
ನಾಪೋಕ್ಲು ಮಾ.8 : ಕಕ್ಕಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕುಂಬ್ಯಾರ್ ಕಲಾಡ್ಚ ವಾರ್ಷಿಕ ಉತ್ಸವವು ಸಾಂಪ್ರದಾಯಿಕವಾಗಿ ಶ್ರದ್ಧಾಭಕ್ತಿಯಿಂದ ಸಂಪನ್ನಗೊಂಡಿತು. ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕರಾದ ಪರದಂಡ ಕುಟುಂಬಸ್ಥರ ಎತ್ತು ಪೋರಾಟದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತುಪೋರಾಟವನ್ನು ಒಪ್ಪಿಸಲಾಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹಾಲು ಬಲಿವಾಡು ಹರಕೆ ಇನ್ನಿತರ ಪೂಜೆಗಳು ಜರುಗಿತು. ಬಳಿಕ ಮಹಾಪೂಜೆ ನಂತರ ಭಕ್ತಾದಿಗಳಿಗೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನೆರವೇರಿತು. ದೇವರ ಪ್ರಾರ್ಥನೆಯ ಬಳಿಕ ದೇವರ ನೃತ್ಯ ಬಲಿ ಜರುಗಿ ಎತ್ತು ಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು ಭಕ್ತಾದಿಗಳು ಮಲ್ಮ ಬೆಟ್ಟಕ್ಕೆ ತೆರಳಿದರು. ಇದೇ ಸಂದರ್ಭ ಪೇರೂರು ಹಾಗೂ ನೆಲಜಿ ಇಗ್ಗುತ್ತಪ್ಪ ದೇವಾಲಯದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಮಲ್ಮಕ್ಕೆ ಆಗಮಿಸಿದರು. ಅರ್ಚಕರು ಶುದ್ದ ಕಲಶ ಪೂಜಾಕಾರ್ಯಗಳನ್ನು ನೆರವೇರಿಸಿ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊ0ಡು ದೇವರ ಕಟ್ಟು ಸಡಿಲಿಸಿ ನಾಡಿನ ಸುಭಿಕ್ಷಕ್ಕಾಗಿ ವಿಶೇಷ ಪ್ರಾರ್ಥನೆ…
ಮಡಿಕೇರಿ ಮಾ.8 : ಹಾಕತ್ತೂರು-ಬಿಳಿಗೇರಿ ದರ್ಗಾ ಶರೀಫಿನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಫಕೀರ್ ಬಾವ (ಖ.ಸಿ) ಅವರ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುತ್ತಿರುವ ಉರೂಸ್ ಮೇ 7, 8 ಮತ್ತು 9 ರಂದು ಉಲಮಾ-ಉಮಾರ, ಸಾದತುಗಳ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ನಡೆಯಲಿದೆ ಎಂದು ಬದರ್ ಜಮಾಅತ್ ಸಮಿತಿ ಕಾರ್ಯದರ್ಶಿ ಎಸ್.ಎ.ಅಬ್ದುಲ್ ಖಾದರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 93538 34014 ನ್ನು ಸಂಪರ್ಕಿಸಬಹುದಾಗಿದೆ.






