ಮಡಿಕೇರಿ NEWS DESK ಜ.7 : ಹುಲಿ ದಾಳಿಯಿಂದ ಹಸುವೊಂದು ಸಾವನ್ನಪ್ಪಿರುವ ಘಟನೆ ಪೊನ್ನಂಪೇಟೆಯ ಮಾಯಮುಡಿ ಗ್ರಾಮದಲ್ಲಿ ನಡೆದಿದೆ. ಕೊಂಗಂಡ ನಂಜಪ್ಪ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಗ್ರಾಮದಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಗ್ರಾ.ಪಂ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಲಿ ಮಾಯಮುಡಿ ವ್ಯಾಪ್ತಿಯಲ್ಲೇ ಇರುವುದರಿಂದ ಗ್ರಾಮಸ್ಥರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ಎಚ್ಚರಿಕೆಯಿಂದ ಇರುವಂತೆ ಮಾಯಮುಡಿ ಗ್ರಾ.ಪಂ ಅಧ್ಯಕ್ಷ ಟಾಟು ಮೊಣ್ಣಪ್ಪ ಮನವಿ ಮಾಡಿದ್ದಾರೆ.
ಲೇಖಕ: admin
ಬೆಂಗಳೂರು NEWS DESK ಜ.7 : ಆರ್ಥಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ವಿಮಾನ ನಿಲ್ದಾಣ ಮೊದಲ ಹಂತದ ವಿಸ್ತರಣೆಗಾಗಿ ಭೂಮಿ ಹಸ್ತಾಂತರ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮಧ್ಯ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸ “ಕಾವೇರಿ”ಯಲ್ಲಿ ಸಿದ್ದರಾಮಯ್ಯ ಅವರನ್ನು ಸೋಮವಾರ ಬೆಳಗ್ಗೆ ಭೇಟಿ ಮಾಡಿದ ಸಂಸದರು ಮನವಿ ಸಲ್ಲಿಸಿ, ಮೈಸೂರು ಕ್ಷೇತ್ರದಲ್ಲಿ ಆಗಬೇಕಾಗಿರುವ ಅಭಿವೃವೃದ್ಧಿ ಯೋಜನೆಗಳು ಹಾಗೂ ಇತರೆ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಿದರು. ಮೈಸೂರು ಸಾಂಸ್ಕೃತಿಕ ರಾಜಧಾನಿಯಾಗಿದೆ ಹಾಗೂ ಇತ್ತೀಚೆಗೆ ವಾಣಿಜ್ಯ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ದೇಶ-ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ, ಉದ್ಯಮಿಗಳಿಗೆ, ಅನುಕೂಲವಾಗಲು ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಮಾಡಬೇಕಾದ ತುರ್ತು ಅಗತ್ಯವಿದೆ. ಈ ನಿಟ್ಟಿನಲ್ಲಿ 46 ಎಕರೆ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಳಿಸಲು ಮಧ್ಯಪ್ರವೇಶಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ಯದುವೀರ್ ಮನವಿ ಮಾಡಿದರು. ಈಗಾಗಲೇ ಭೂ ಸ್ವಾಧೀನಕ್ಕೆ ವಿಶೇಷ…
ಮಡಿಕೇರಿ ಜ.7 NEWS DESK : ಅಖಿಲ ಭಾರತ ಟೆಕ್ವಾಂಡೊ ಅಸೋಸಿಯೇಷನ್ ವತಿಯಿಂದ ನಡೆದ 27ನೇ ಎಐಟಿಎ ರಾಷ್ಟ್ರೀಯ ಐಟಿಎಫ್ ಟೆಕ್ವಾಂಡೊ ಚಾಂಪಿಯನ್ ಶಿಪ್ ನಲ್ಲಿ ಬಲಂಬೇರಿ ಗ್ರಾಮದ ಬೊಳ್ತಂಡ ಸಿ.ಜಸ್ಮಿತಾ ಚಿನ್ನ ಹಾಗೂ ಕಂಚಿನ ಪದಕ ಗೆದ್ದುಕೊಂಡಿದ್ದಾಳೆ. ನವದೆಹಲಿಯ ರಾಜ್ಘಾಟ್ನ ಇಂದಿರಾ ಗಾಂಧಿ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಸ್ಟೇಡಿಯಂನಲ್ಲಿ ನಡೆದ 14ರ ಒಳಗಿನ ವಯೋಮಿತಿಯ ಬಾಲಕಿಯರ ವಿಭಾಗದ ಸ್ಪರಿಂಗ್ ವಿಭಾಗದಲ್ಲಿ ಪ್ರಥಮ ಹಾಗೂ ಸೆಲ್ಫ್ಡಿಫೆನ್ಸ್ ವಿಭಾಗದಲ್ಲಿ ಕಂಚಿನ ಪದಕ ಸಾಧನೆ ಮಾಡಿದ್ದಾಳೆ. ಬೊಳ್ತಂಡ ಸಿ.ಜಸ್ಮಿತಾ ಬೆಂಗಳೂರಿನಲ್ಲಿ ನೆಲೆಸಿದ್ದು, ಮೂಲತಃ ಮೂರ್ನಾಡು ಸಮೀಪದ ಬಲಂಬೇರಿ ಗ್ರಾಮದ ಬೊಳ್ತಂಡ ಚಂಗಪ್ಪ ಹಾಗೂ ನಮಿತಾ (ತಾಮನೆ-ಗಿಜಿಗಂಡ) ದಂಪತಿ ಪುತ್ರಿ. ಬೆಂಗಳೂರಿನ ಖಾಸಗಿ ವಿದ್ಯಾಸಂಸ್ಥೆಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕಳೆದ ಒಂದುವರೆ ವರ್ಷದಿಂದ ತರಬೇತುದಾರರಾದ ಗಂಗಾಧರ್ ಹಾಗೂ ಅನಿಲ್ ಅವರಿಂದ ಕರಾಟೆ ತರಬೇತಿ ಪಡೆಯುತ್ತಿದ್ದಾಳೆ.
ಬೆಂಗಳೂರು NEWS DESK ಜ.7 : ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿ ಮಾಡಿದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸಮಾಲೋಚನೆ ನಡೆಸಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಸಂಸದರು ಭೇಟಿ ಮಾಡಿದರು. ಮೈಸೂರಿನಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಯೋಜನೆಗಳು ಹಾಗೂ ಮುಂಬರುವ ಯೋಜನೆಗಳ ಕುರಿತು ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಟ್ಟರು. ಮೈಸೂರಿನ ಎಲ್ಲಾ ಯೋಜನೆಗಳಿಗೂ ಸೂಕ್ತ ನೆರವು, ಬೆಂಬಲ ಒದಗಿಸಲಾಗುವುದು ಎಂದು ಮುಖ್ಯಕಾರ್ಯದರ್ಶಿಗಳು ಇದೇ ಸಂದರ್ಭ ಭರವಸೆ ನೀಡಿದ್ದಾರೆ ಎಂದು ಸಂಸದರು ತಿಳಿಸಿದರು.
ಮಡಿಕೇರಿ ಜ.7 NEWS DESK : ಇತ್ತೀಚಿಗೆ ನಿಧನರಾದ ಸಿದ್ದಾಪುರ ಭಾಗದ ಡಿಸಿಸಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ದಿವಂಗತ ಮೂಸ ಅವರ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಸಹಾಯದ ಅಗತ್ಯವಿದ್ದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷವು ಸದಾ ನಿಮ್ಮೊಂದಿಗಿದೆ ಎಂಬ ಭರವಸೆ ನೀಡಿದರು. ಇದೇ ಸಂದರ್ಭ ಕುಟುಂಬಸ್ಥರಿಗೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಚೆಕ್ ಹಸ್ತಾಂತರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜಿ ಪೂಣ್ಣಚ್ಚ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಹನೀಫ್, ಕೆಡಿಪಿ ವಿರಾಜಪೇಟೆ ಸದಸ್ಯ ಕೋಲುಮಂಡ ರಫೀಕ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಹಾಜರಿದ್ದರು.
ಮಡಿಕೇರಿ NEWS DESK ಜ.7 : ಶ್ರೀ ಮಹಾಮೃತ್ಯುಂಜಯ ದೇವಸ್ಥಾನ ಎಂದು ಮರು ನಾಮಕರಣಗೊಂಡಿರುವ ಕಟ್ಟೆಮಾಡು ಗ್ರಾಮದ ಪುರಾತನ ಮಹಾದೇವ ದೇವಸ್ಥಾನವನ್ನು ಸರಕಾರ ತನ್ನ ಅಧೀನಕ್ಕೆ ಒಳಪಡಿಸಿಕೊಳ್ಳಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ಎನ್.ಯು.ನಾಚಪ್ಪ ಒತ್ತಾಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೆಲವರು ದೇವಾಲಯದ ಮೇಲೆ ಹಿಡಿತ ಸಾಧಿಸಿದ್ದು, ಆದಿಮಸಂಜಾತ ಕೊಡವರನ್ನು ಕಡೆಗಣಿಸಿದ್ದಾರೆ. ಕುಪ್ಯಚೇಲೆ ಧರಿಸಿ ದೇವಾಲಯಕ್ಕೆ ಹೋದವರನ್ನು ತಡೆದು ಅವಮಾನಿಸಲಾಗಿದೆ. ಇದು ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದು ಆರೋಪಿಸಿದ್ದಾರೆ. ಬೈಲಾ ತಿದ್ದುಪಡಿ ಮಾಡುವಂತೆ ಸೂಚನೆ ಇದ್ದರೂ ಡ್ರೆಸ್ ಕೋಡ್ ಹೇರಲಾಗುತ್ತಿದೆ. ಸಮಿತಿ ಸಂವಿಧಾನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿರುವುದರಿಂದ ಸರಕಾರ ದೇವಾಲಯದ ಮೇಲೆ ಹಿಡಿತ ಸಾಧಿಸಬೇಕು ಮತ್ತು ಆರೋಪಗಳ ಕುರಿತು ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಮುಜರಾಯಿ ಸಚಿವರಿಗೂ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ. ಕೊಡವ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗಾಗಿ ಮತ್ತು ಆದಿಮಸಂಜಾತ ಕೊಡವ ಜನಾಂಗದ ಹಕ್ಕುಗಳಿಗಾಗಿ ಕೊಡವ ಲ್ಯಾಂಡ್ ಭೂರಾಜಕೀಯ ಸ್ವಾಯತ್ತತೆ, ಸ್ವಯಂ ನಿರ್ಣಯದ ಬೇಡಿಕೆಯನ್ನು ಮುಂದಿಟ್ಟುಕೊoಡು…
ಪೊನ್ನಂಪೇಟೆ ಜ.7 NEWS DESK : ಮಸೀದಿ ಕೇವಲ ಆರಾಧನೆಗೆ ಮಾತ್ರ ಸೀಮಿತವಾಗಿರುವುದಿಲ್ಲ. ಬದಲಾಗಿ ಸಮುದಾಯದ ಉನ್ನತಿಗೆ ಮಾರ್ಗದರ್ಶನ ನೀಡುವ ಸ್ಥಳವೂ ಆಗಿದೆ. ಮಸೀದಿಗಳು ಸಮಾಜದ ಪ್ರತೀ ವ್ಯಕ್ತಿಯ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸುವ ಕೇಂದ್ರವಾಗಿರಬೇಕು ಎಂಬುವುದು ಇಸ್ಲಾಂ ಧರ್ಮದ ಮೂಲ ಆಶಯವಾಗಿದೆ ಎಂದು ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷರು, ಪ್ರಸಿದ್ಧ ವಿದ್ವಾಂಸರಾದ ಸೈಯದ್ ಜಿಫ್ರಿ ಮುತ್ತುಕೋಯ ತಂಗಳ್ ಹೇಳಿದರು. ಪೊನ್ನಂಪೇಟೆ ತ್ಯಾಗರಾಜ ರಸ್ತೆಯಲ್ಲಿ ಆಧುನಿಕ ಇಸ್ಲಾಮಿಕ್ ವಾಸ್ತುಶಿಲ್ಪ ಶೈಲಿಯ ಮಸೀದಿಯಾಗಿ ಪುನರ್ ನಿರ್ಮಾಣಗೊಂಡಿರುವ ಪೊನ್ನಂಪೇಟೆ ಶಾಫಿ ಜುಮಾ ಮಸೀದಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಸೀದಿ ಎಂಬುದು ಜಾತಿ, ಧರ್ಮ, ಪಂಥವನ್ನು ಮೀರಿ ಮನುಷ್ಯ ಪ್ರೀತಿಯ ಸೌಹಾರ್ದಯುತ ಜೀವನ ನಡೆಸುತ್ತಾ ಆ ಮೂಲಕ ಶಾಂತಿ, ಸಹೋದರತೆಯ ಸಮಾಜ ನಿರ್ಮಾಣದ ಕುರಿತು ಕಲಿಸುವ ಪಾಠ ಶಾಲೆಯಾಗಬೇಕು ಎಂದು ಕಳೆದ 1400 ವರ್ಷಗಳ ಹಿಂದೆಯೇ ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಬೋಧಿಸಿದ್ದಾರೆ ಎಂದು ಒತ್ತಿ ಹೇಳಿದರು. ಸೌಹಾರ್ದತೆ, ದಯೆ, ಒಗ್ಗಟ್ಟು, ಪ್ರೀತಿ, ಬದ್ಧತೆ ಇಸ್ಲಾಂ ಧರ್ಮದ…
ಸಿದ್ದಾಪುರ ಜ.7 NEWS DESK : ಮಾಲ್ದಾರೆ ಗ್ರಾಮ ಪಂಚಾಯತ್ಯಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆಯು ಗ್ರಾಪಂ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷೆ ಮಾಲತಿ, ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅಂಗವಿಕಲರಿಗೆ ಸುಲಭವಾಗಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಸರ್ಕಾರದಿಂದ ಅಂಗವಿಕಲರಿಗೆ ಸ್ವಾವಲಂಬಿಗಳಾಗಿ ಬದುಕಲು ಸಾಕಷ್ಟು ಯೋಜನೆಗಳಿವೆ. ಎಲ್ಲರೂ ಸೌಲಭ್ಯಗಳ ಬಗ್ಗೆ ತಿಳಿದುಕೊಂಡು, ಅವುಗಳ ಪ್ರಯೋಜನ ಪಡೆದು ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು. ಗ್ರಾಮ ಪಂ. ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ವಿಶೇಷ ಚೇತನರಿಗೆ ಇಲಾಖೆಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ಕುಞಂಣ್ಣ, ಮಾಜಿ ಅಧ್ಯಕ್ಷ ಸಮೀರ್, ಸದಸ್ಯರಾದ ಮಹಮ್ಮದ್ ಅಲಿ, ವಿದ್ಯಾ ಮತ್ತು ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.
ಮಡಿಕೇರಿ ಜ.7 NEWS DESK : ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಬೆಂಗಳೂರು ಕೊಡವ ಸಮಾಜ ಸಹಯೋಗದಲ್ಲಿ ಜ.26 ರಂದು ರಾಜ್ಯ ಮಟ್ಟದ ಕೊಡವ ವಿಚಾರ ಸಂಕಿರಣ ನಡೆಯಲಿದೆ. ಬೆಂಗಳೂರು ಕೊಡವ ಸಮಾಜದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿರುವ ವಿಚಾರ ಸಂಕಿರಣವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕೇಂದ್ರ ಸಾಹಿತ್ಯ ಅಕಾಡೆಮಿಯ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ ಬಿ. ಕಂಬಾರ ಉದ್ಘಾಟಿಸಲಿದ್ದಾರೆ. ಅಕಾಡೆಮಿಯ ಅಧ್ಯಕ್ಷ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ. ಮಾನಸ, ಕೇಂದ್ರ ವರಮಾನ ತೆರಿಗೆ ಇಲಾಖೆಯ ಜಂಟಿ ಆಯುಕ್ತರಾದ ದೇವಣಿರ ಪ್ರೀತ್ ಗಣಪತಿ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷರಾದ ಕರೋಟಿರ ಟಿ. ಪೆಮ್ಮಯ್ಯ, ನಿವೃತ್ತ ಎಸಿಪಿ ಬಿದ್ದಂಡ ಬಿ. ಅಶೋಕ್ ಕುಮಾರ್, ರಾಜ್ಯ ಉಚ್ಛ ನ್ಯಾಯಾಲಯದ ವಕೀಲೆ ಪುಲಿಯಂಡ ಅನು ಚಂಗಪ್ಪ, ಡ್ಯಾಫೋಡಿಲ್ಸ್ ವಿದ್ಯಾಸಂಸ್ಥೆಯ ಮುಖ್ಯಸ್ಥೆ ನೆರವಂಡ ಮಾಧುರಿ…
ಸೋಮವಾರಪೇಟೆ ಜ.7 NEWS DESK : ಗೌಡಳ್ಳಿ ಗ್ರಾಮ ಪಂಚಾಯಿತಿ, ಸಿ.ಎಂ.ಸಿ.ಎ ಹಾಗೂ ನಾವು ಪ್ರತಿಷ್ಠಾನ ಸಂಸ್ಥೆಯ ಸಹಯೋಗದಲ್ಲಿ ಗೌಡಳ್ಳಿ ಪ್ರೌಢಶಾಲಾ ಸಭಾಂಗಣದಲ್ಲಿ ನಡೆದ ಮಕ್ಕಳು ಮತ್ತು ಮಹಿಳೆಯರ ಗ್ರಾಮಸಭೆಯಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಸಮಸ್ಯೆಗಳ ಸರಮಾಲೆಯನ್ನು ಬಿಚ್ಚಿಟ್ಟರು. ಶುಂಠಿ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಪ್ರೇಮ್ ಕುಮಾರ್ ಮಾತನಾಡಿ, ಮೇಲ್ಚಾಚವಣಿಯ ಮರಗಳು ಗೆದ್ದಲು ಹಿಡಿದಿದ್ದು, ತರಗತಿಯಲ್ಲಿ ಕುಳಿತುಕೊಳ್ಳುವುದಕ್ಕೆ ಭಯವಾಗುತ್ತದೆ. ಮೈದಾನದಲ್ಲಿ ಕಾಡು ಬೆಳೆದಿರುವುದರಿಂದ ಕೆಲವೊಮ್ಮೆ ಹಾವುಗಳ ಬರುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ. ನಂದಿಗುಂದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಜಿ.ಎಸ್.ಧ್ರುವ, ಕಾರ್ತಿಕ್, ಮೋಕ್ಷ ತಮ್ಮ ಶಾಲೆಯ ಸಮಸ್ಯೆಗಳನ್ನು ಬಿಚ್ಚಿಟ್ಟರು. ಶೌಚಾಗೃಹಕ್ಕೆ ಬಾಗಿಲು ಇಲ್ಲ. ಹೊಸ ಶೌಚಗೃಹ ಬೇಕು. ಕ್ರೀಡಾಸಾಮಾಗ್ರಿಗಳು ಬೇಕು. ಕೊಠಡಿಗೆ ಗಾರೆ ಹಾಕಿಸಿಕೊಡಿ ಎಂದು ಮನವಿ ಮಾಡಿದರು. ಗೌಡಳ್ಳಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಲೋಕೇಶ್, ಮನ್ವಿತ್, ವಿದ್ಯಾ, ಪ್ರಿಯಾಂಕ, ಪ್ರಜ್ವಲ್, ಶ್ರಾಧ್ಯ ಮಾತನಾಡಿ, ಶಾಲಾ ಮೈದಾನ ಒತ್ತುವರಿಯಾಗುತ್ತಿದೆ. ಟ್ರಂಚ್ ನಿರ್ಮಿಸಿ ಹದ್ದು ಬಸ್ತು ಗುರುತಿಸಿ ಮೈದಾನವನ್ನು ಉಳಿಸಿಕೊಳ್ಳಬೇಕು.…






